Connect with us

Politics

ದೇವೇಗೌಡರನ್ನು ಟೀಕಿಸಿದ್ದ ಸಿಎಂ ಮೇಲೆ ಜೆಡಿಎಸ್ ಆಕ್ರೋಶ

Published

on

ದೇವೇಗೌಡರನ್ನು ಟೀಕಿಸಿದ್ದ ಸಿಎಂ ಮೇಲೆ ಜೆಡಿಎಸ್ ಆಕ್ರೋಶ, ಸೊಕ್ಕಿನ ಮನುಷ್ಯ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿ, ನೈಸ್ ಯೋಜನೆ ವಾಪಸ್ ಪಡೆಯಲು ಯಾವ ಅತೀಂದ್ರ ಶಕ್ತಿ ಅಡ್ಡವಿದೆ ಎಂದು ಪ್ರಶ್ನೆ, ಸಿದ್ದಾರಮೆ ಆಟ ಯಾರಿಗೆ ಎಲ್ಲರಿಗೂ ಗೊತ್ತು ಎಂದು ಟಾಂಗ್

**

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಸಿದ್ದರಾಮಯ್ಯ ಅವರು ಕರ್ನಾಟಕದ ಸೊಕ್ಕಿನ ಮನುಷ್ಯ ಟೀಕಾಪ್ರಹಾರ ನಡೆಸಿದೆ. ಅಲ್ಲದೆ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ಯಾವ ಅತೀಂದ್ರ ಶಕ್ತಿ ಅಡ್ಡವಿದೆ ಎಂದು ಪ್ರಶ್ನೆ ಮಾಡಿದೆ.

ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಜೆಡಿಎಸ್ ತಿರುಗೇಟು ನೀಡಿದೆ.

ಗೌಡರ ಕೈ ಅನುಗ್ರಹದ ದ್ಯೋತಕ

ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ.ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ, ಅನುಗ್ರಹದ ದ್ಯೋತಕ. ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯನವರೇ? ಎಂದು ಜೆಡಿಎಸ್, ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.

ಅಪರ ಬ್ರೂಟಸ್ ಎಂದು ಕಿಡಿ

ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ.. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ. ದೇವೇಗೌಡರು ಸಾಮಾಜಿಕ ನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಉಳ್ಳವರು ಆಗಿಲ್ಲದಿದ್ದಿದ್ದರೆ ನೀವು ಈವರೆಗೆ ಏನೇನೋ ಆಗಿದ್ದಿರಲ್ಲಾ… ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು ಎಂದು ಜೆಡಿಎಸ್ ಕುಟುಕಿದೆ.

 

ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ,ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲಬೇಕಾಗುತ್ತದೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ ಎಂದಿದೆ ಜೆಡಿಎಸ್.

 

ಸಿದ್ದಾರಮೆ ಆಟ ಯಾರಿಗೆ ಎಲ್ಲರಿಗೂ ಗೊತ್ತು

ನಿಮ್ಮಂಥ ಆತ್ಮಸಾಕ್ಷಿ ಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ. ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣ(!?)ವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಜನಾದೇಶವನ್ನು ದೇವೇಗೌಡರು ಎಂದೂ ಧಿಕ್ಕರಿಸಿಲ್ಲ. ಶಿರಸಾ ವಹಿಸಿದ್ದಾರೆ. ಅಂತಹ ಆಚಾರ, ವಿಚಾರ, ಸದ್ವಿಚಾರ, ಶಿಷ್ಟಾಚಾರವನ್ನು ನಿಮಗೆ ಕಲಿಸಿದ್ದೇ ಅವರು. ಆದರೆ, ಅಡ್ಡದಾರಿ ಆಯ್ಕೆ ಮಾಡಿಕೊಂಡ ನಿಮಗೆ ಇವೆಲ್ಲಾ ರುಚಿಸುತ್ತಿಲ್ಲ. ಸದ್ಯಕ್ಕೆ ನಿಮಗೆ ನೆಲ ಕಾಣುತ್ತಿಲ್ಲ. ನೆಲವೇ ಬುದ್ದಿ ಕಲಿಸುವ ಕಾಲ ಹತ್ತಿರದಲ್ಲಿದೆ. ಕಾಲ ಕ್ಷಣಿಕ. ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ನೀವು ಚುನಾವಣೆ ಬಂದಾಗಲೆಲ್ಲಾ ಮಾಡುವ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್ & ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುವುದು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಅಡಿದಿರಿ. ಆ ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ!! ಏನಂತೀರಿ? ಎಂದು ಜೆಡಿಎಸ್ ಕೇಳಿದೆ.

ನೈಸ್ ಗೆ’ಅತೀಂದ್ರ ಶಕ್ತಿ’ ಅಡ್ಡವಾಗಿ ಕೂತಿದೆಯಾ?

ದೇವೇಗೌಡರು ಕೇಳಿದ್ದು ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಿರಿ ಎಂದು. ಅವರು ಅದನ್ನೇ ಆಗ್ರಹಿಸಿ ಪತ್ರ ಬರೆದಿದ್ದರು. ನೀವು ಆ ಪಾಯಂಟಿಗೇ ಬರುತ್ತಿಲ್ಲ. ಸತ್ಯದ ಸೊಲ್ಲೆತ್ತದೆ ಸೈಲಂಟಾಗಿ ನೈಸ್ ಅನ್ನು ಪಕ್ಕಕ್ಕೆ ಸರಿಸುತ್ತಿದ್ದೀರಿ. ಯಾಕೆ? ಹೇಳಿಬಿಡಿ ಕಾರಣ ಎಂದಿರುವ ಜೆಡಿಎಸ್; ನೈಸ್ ಯೋಜನೆ ಸರಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ ‘ಅತೀಂದ್ರ ಶಕ್ತಿ’ ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ ಎಂದು ಒತ್ತಾಯ ಮಾಡಿದೆ.

Continue Reading
Click to comment

Leave a Reply

Your email address will not be published. Required fields are marked *

National

ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಕೇಂದ್ರಕ್ಕೆ ಎಚ್‌ಡಿಡಿ ಮನವಿ

Published

on

ನವದೆಹಲಿ: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ರಾಜ್ಯಸಭೆಯಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯಸಭೆಯಲ್ಲಿ ಇಂದು ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಭಾಗವಹಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು.

 

ಈ ವೇಳೆ ರಾಜ್ಯದ ಹಲವು ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರ್ಕಾರಕ್ಕೆ ಕೈಮುಗಿದು ವಿನಂತಿ ಮಾಡಿಕೊಂಡಿದ್ದಾರೆ.

ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ರಾಜ್ಯದ ನೀರಾವರಿ ಬಿಕ್ಕಟ್ಟನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅವರು, ನನ್ನ ರಾಜ್ಯಸಭಾ ಅವಧಿ ಮುಂದಿನ ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ, ನಾವೆಲ್ಲರೂ ಮನುಷ್ಯರು. ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜೊತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನದ್ದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಗಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜೊತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜೊತೆಗೇ ಇರುತ್ತೇವೆ. ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ಹೇಳಿದ್ದಾರೆ.

ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜೊತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಉಲ್ಲೇಖ ಮಾಡಿದ್ದಾರೆ.

ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಹೇಳಿದ್ದಾರೆ.

Continue Reading

Politics

ಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್  ಕಲಾಪ

Published

on

ಬೆಂಗಳೂರು: ವಿಧಾನ ಪರಿಷತ್  ಕಲಾಪ ಇಂದು ಸಹ ಆಡಳಿತ ಮತ್ತು ವಿರೋಧ ಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾಗಿದ್ದು, ಬಿಜೆಪಿ ಎಂಎಲ್‌ಸಿ ಡಾ. ಸಿ.ಟಿ. ರವಿ ವಿಷಾದ ವ್ಯಕ್ತಪಡಿಸಬೇಕು ಎಂಬ ವಿಚಾರ ಇಂದು ಕಲಾಪದಲ್ಲಿ ಸದ್ದು ಮಾಡಿತು. ಹಾಗಾಗಿ ಆಡಳಿತ-ವಿಪಕ್ಷಗಳ ನಡುವೆ ಗಲಾಟೆ ಆಗಿ ಕಲಾಪ ಮುಂದೂಡುವ ಪರಿಸ್ಥಿತಿ ಬಂದಿತ್ತು.

ಕಲಾಪ ಆರಂಭ ಆದ ತಕ್ಷಣ ಶೂನ್ಯ ವೇಳೆ ಕಲಾಪಗಳು ನಡೆದವು. ಶೂನ್ಯ ವೇಳೆ ಮುಗಿದ ಕೂಡಲೇ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ಮಾತಾಡಿ, ನಿನ್ನೆ ನಮ್ಮ ಸದಸ್ಯರು ಪ್ರಧಾನಿ ಮೋದಿ ಅವರ ಬಗ್ಗೆ ಮಾತಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅದರಂತೆ ಸಿ.ಟಿ.ರವಿ ಪಾಕಿಸ್ತಾನದ ನಾಲಿಗೆ ಅಂದಿದ್ದಕ್ಕೆ ವಿಷಾದ ವ್ಯಕ್ತಪಡಿಸಬೇಕೆಂದು ಆಗ್ರಹಿಸಿ ಸಭಾಪತಿಗಳ ಪೀಠ ಮನವಿ ಮಾಡಿದರು. ಆದರೆ ವಿಷಾದ ವ್ಯಕ್ತಪಡಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಲೀಂ ಅಹಮದ್ ಮಾತಿಗೆ ಸಚಿವ ಹೆಚ್.ಕೆ.ಪಾಟೀಲ್ ಸೇರಿ ಕಾಂಗ್ರೆಸ್ ಸದಸ್ಯರು ಧ್ವನಿಗೂಡಿಸಿದರು. ಸಿಟಿ ರವಿ ವಿಷಾದ ವ್ಯಕ್ತಪಡಿಸಬೇಕು. ಇಲ್ಲ ಅಂದರೆ ಸದನದಿಂದ ಹೊರಗೆ ಹಾಕಬೇಕು ಅಂತ ಅಡಳಿತ ಪಕ್ಷದ ಸದಸ್ಯರು ಒತ್ತಾಯಿಸಿದರು. ಇದಕ್ಕೆ ಕೌಂಟರ್ ನೀಡಿದ ವಿಪಕ್ಷ ಸದಸ್ಯರು ಸಿ.ಟಿ.ರವಿ ಪರ ಬ್ಯಾಟಿಂಗ್ ಮಾಡಿದರು.

ಇನ್ನೂ  ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತಾಡಿ, ಸಿ.ಟಿ. ರವಿ ಯಾರ ಹೆಸರು ಉಲ್ಲೇಖ ಮಾಡಿಲ್ಲ.  ರವಿ ಯಾವುದೇ ತಪ್ಪು ಮಾಡಿಲ್ಲ. ಅವರು ಕ್ಷಮೆ ಕೇಳೋ ಅವಶ್ಯಕತೆ ಇಲ್ಲ. ಕೇಳೋದು ಇಲ್ಲ ಎಂದು ತಿಳಿಸಿದರು.

ಛಲವಾದಿ ನಾರಾಯಣಸ್ವಾಮಿ ಮಾತಿಗೆ ಬಿಜೆಪಿ-ಜೆಡಿಎಸ್ ಸದಸ್ಯರು ಧ್ವನಿಗೂಡಿಸಿದರು. ಇದೇ ವೇಳೆ ಮಾತಾಡಿದ ಆಡಳಿತ-ವಿಪಕ್ಷಗಳ ನಡುವೆ ವಿಷಾದದ ಪಟ್ಟು ಜೋರಾಗಿ ನಡೆದು, ಮಾತಿನ ಸಮರಗಳು ನಡೆಯಿತು. ಸಭಾಪತಿ ಪೀಠವೂ ಯಾವುದೇ ನಿರ್ಧಾರ ಮಾಡಲು ಆಗದೇ ಕಲಾಪವನ್ನು ಊಟಕ್ಕೆ ಮುಂದೂಡಿಕೆ ಮಾಡಿದರು.

Continue Reading

Hassan

2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ

Published

on

ಬೆಂಗಳೂರು/ಹಾಸನ: ಎತ್ತಿನಹೊಳೆ ನೀರನ್ನು 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಏತ್ತಿನಹೊಳೆ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಲು ಈ ಮೂರು ಜಿಲ್ಲೆಗಳ ನೀರಿನ ಸಮಸ್ಯೆಗೆ ಪರಿಹಾರ ನೀಡುವುದೇ ಮುಖ್ಯ ಉದ್ದೇಶ. ಈ ಉದ್ದೇಶ ಈಡೇರಬೇಕಾದರೆ ಬಾಕಿ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಲಾಯಿತು.

ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಭೆಯಲ್ಲಿ ಕೋಲಾರ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರಾದ ಎಂಸಿ ಸುಧಾಕರ್ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಭಾಗಿಯಾಗಿದ್ದರು. ಈ ಸಭೆಯಲ್ಲಿ, “2027ರಲ್ಲಿ ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ಮೂಲಕ ಕುಡಿಯುವ ನೀರು ಹರಿಯುವುದನ್ನು ಖಚಿತಪಡಿಸುವಂತೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಲಾಯಿತು.

ಸಚಿವರ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೆಶಕರಾದ ರಾಜೇಶ್ ಅಮ್ಮಿನಭಾವಿ ಹಾಗೂ 3 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಓಗಳು, ಎಸ್ಎಲ್ಓ ಗಳು ಉಪಸ್ಥಿತರಿದ್ದು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೂ ಅಗತ್ಯ ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಯ ಗಡಿಯವರೆಗೆ ತರಲು ಕಾಮಗಾರಿ ಪ್ರಗತಿಯಲ್ಲಿದೆ. ಮುಂದೆ ದೊಡ್ಡಬಳ್ಳಾಪುರದಿಂದ ಕುಂದಾಣ ಮಾರ್ಗವಾಗಿ ಒಂದು ಪೈಪ್‌ ಲೈನ್ ಕೋಲಾರ ಹಾಗೂ ಬಂಗಾರಪೇಟೆ ಕಡೆಗೆ, ಮತ್ತೊಂದು ಪೈಪ್‌ ಲೈನ್ ಚಿಂತಾಮಣಿ ಶ್ರೀನಿವಾಸಪುರ ಮಾರ್ಗವಾಗಿ ಮುಳಬಾಗಿಲು ಕಡೆಗೆ ಅಳವಡಿಸಲು ಕೂಡಲೇ ಕಾಮಗಾರಿ ಆರಂಭಿಸಲು ಸಭೆಯಲ್ಲಿ ಸೂಚಿಸಲಾಯಿತು.

ಈ ಪೈಪ್‌ ಲೈನ್‌ಗಳು ಒಟ್ಟು 261.90 ಕಿ.ಮೀ. ದೂರು ಅಳವಡಿಸಬೇಕಿದೆ. ಪೈಪ್‌ ಲೈನ್ ಅಳವಡಿಸಲು ಅಗತ್ಯವಿರುವ ಭೂ ಸ್ವಾಧೀನವನ್ನು ಕೂಡಲೇ ಮಾಡಲು ಭೂ ಸ್ವಾಧೀನ ಅಧಿಕಾರಿಗಳಿಗೆ ಸೂಚಿಸಲಾಯಿತು. ಭೂ ಸ್ವಾಧೀನ ಆದೇಶ ಹೊರಡಿಸಿದ ಭಾಗದಲ್ಲಿ ಪೈಪ್‌ ಲೈನ್ ಅಳವಡಿಕೆಯನ್ನು ಕೂಡಲೇ ಆರಂಭಿಸಲು ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಮುಂದುವರೆದು, ಕುಡಿಯುವ ನೀರು ಒದಗಿಸಬೇಕಾದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀರು ಶುದ್ದೀಕರಣ ಘಟಕ ಹಾಗೂ ಗ್ರಾಮಗಳಿಗೆ ನೀರು ತಲುಪಿಸುವ ಪೈಪ್‌ ಲೈನ್ಗಳನ್ನು ಅಳವಡಿಸಲು ಅಂದಾಜು ಪಟ್ಟಿ ಹಾಗೂ ಪ್ರಸ್ತಾವನೆಗಳನ್ನು ಕೂಡಲೇ ತಯಾರಿಸಿ ಅನುಮೋದನೆಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಒಟ್ಟಾರೆ 2027ರ ಅಂತ್ಯಕ್ಕೆ ನೀರನ್ನು ಈ ಮೂರೂ ಜಿಲ್ಲೆಗಳಿಗೆ ತಲುಪಿಸಲು ಮತ್ತು ನೀರನ್ನು ಶುದ್ದೀಕರಿಸಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸಂಬಂಧಿತ ಎಲ್ಲಾ ಇಲಾಖೆಗಳು ಸಮನ್ವಯದಿಂದ ಮತ್ತು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತೀರ್ಮಾನಿಸಲಾಯಿತು.

Continue Reading

Trending

error: Content is protected !!