Connect with us

Kodagu

ವಾಹನಕ್ಕೆ ಡಿಕ್ಕಿಯಾದ ಜಿಂಕೆ ಸಾವು

Published

on

ವಾಹನವೊಂದು ಡಿಕ್ಕಿಯಾದ ಪರಿಣಾಮ ಜಿಂಕೆ ಸಾವಿಗೀಡಾಗಿರುವ ಘಟನೆ ಶುಕ್ರವಾರ ಬೆಳಗ್ಗೆ ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುವ ಗುಡ್ಡೆಹೊಸೂರು ಸಮೀಪದ ಆನೆಕಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕುಶಾಲನಗರದಿಂದ ಮಡಿಕೇರಿಯತ್ತ ಬರುತ್ತಿದ್ದ ಮಹೇಂದ್ರ ಎಕ್ಸ್ ಯುವಿ ಕಾರು ಆನೆಕಾಡು ಬಳಿ ತಲುಪಿದಾಗ ಹೆದ್ದಾರಿ ಬದಿಯಲ್ಲಿದ್ದ ಅಂದಾಜು 11 ವರ್ಷ ಪ್ರಾಯದ ಜಿಂಕೆ ಅಡ್ಡದಾಟಿದೆ. ದುರದೃಷ್ಟವಶಾತ್ ವಾಹನ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲಿಯೇ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Kodagu

ನಾಪೋಕ್ಲು ಬಳಿಯ ಐತಿಹಾಸಿಕ ಬಿದ್ದಾಟಂಡ ವಾಡೆಯಲ್ಲಿ ಸಂಭ್ರಮದಿಂದ ಜರುಗಿದ ಪುತ್ತರಿ ಕೋಲಾಟ

Published

on

ವರದಿ : ಝಕರಿಯ ನಾಪೋಕ್ಲು

ನಾಪೋಕ್ಲು : ನಾಪೋಕ್ಲು ಬಳಿಯ ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್ ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ನಡೆದ ಕೋಲಾಟ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

ಬೇತು ಗ್ರಾಮದ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಖಡ್ಗದೊಂದಿಗೆ ದೈವಾಧೀನವಾಗಿ ಸಾಂಪ್ರದಾಯಿಕ ಕಾಪಳಕಳಿ,ಕೊಂಬು,ಕೊಟ್ಟು ವಾಲಗ, ದುಡಿ ಕೊಟ್ಟ್ ಪಾಟ್ ನೊಂದಿಗೆ ಬೇತು ಗ್ರಾಮದ ಕುರುಂಬರಾಟ್ ಎಂಬ ಸ್ಥಳದಿಂದ ಬಿದ್ದಾಟಂಡ ವಾಡೆಗೆ ಗ್ರಾಮಸ್ಥರು ಮೆರವಣಿಗೆಯ ಮೂಲಕ ಬರುತ್ತಿದ್ದಂತೆ ನೂರಂಬಡ ಮಂದ್ ನಲ್ಲಿ ಬಿದ್ದಾಟಂಡ ಕುಟುಂಬದ ಹಿರಿಯರು ಸಾಂಪ್ರದಾಯಿಕ ಉಡುಪು ಧರಿಸಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದರ ಮೂಲಕ ದೇವರ ಕೋಲನ್ನು ಬರಮಾಡಿಕೊಳ್ಳಲಾಯಿತು.

ನೂರಂಬಡ ನಾಡಿಗೆ ಸಂಬಂಧಿಸಿದಂತೆ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಪುತ್ತರಿ ಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ. ಅದರಂತೆ ನಾಲ್ಕು ಗ್ರಾಮದವರು ದುಡಿಕೊಟ್ಟ್ ಪಾಟ್ ನೊಂದಿಗೆ ಬಿದ್ದಾಟಂಡ ವಾಡೆಗೆ ಬರುತ್ತಾರೆ.ಅದರಂತೆ ಮೂಟೇರಿ,ಕೊಳಕೇರಿಯ ಗ್ರಾಮಸ್ಥರು ಬರುತ್ತಿದ್ದಂತೆ ಅವರನ್ನು ಬಿದ್ದಾಟಂಡ ವಾಡೆಗೆ ಬರಮಾಡಿಕೊಳ್ಳಲಾಯಿತು. ಬಳಿಕ ಕೋಲಾಟ ನಡೆಸುವ ಮರದ ಕೆಳಗೆ ದೇವರ ಕೋಲನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿದ ಬಳಿಕ ಸಾಂಪ್ರದಾಯಿಕ ಪುತ್ತರಿ ಕೋಲಾಟಕ್ಕೆ ಚಾಲನೆ ನೀಡಲಾಗಿ ಬಿದ್ದಾಟಂಡ ವಾಡೆಯ ಮಂದ್ ನಲ್ಲಿ ಮೂರು ಗ್ರಾಮಸ್ಥರು ಸೇರಿ ಕೋಲಾಟವನ್ನು ದೇವರ ಉದ್ಘೋಷದೊಂದಿಗೆ ನಡೆಸಿದರು.

ಗ್ರಾಮಸ್ಥರ ಉತ್ಸಾಹ ಹರ್ಷೋದ್ಗಾರಗಳ ನಡುವೆ ನೂರಂಬಡ ಮಂದ್ ನ ಪುತ್ತರಿ ಕೋಲಾಟದ ಸಂಭ್ರಮವನ್ನು ನೆರೆದ ಜನರು ಕಣ್ತುಂಬಿಕೊಂಡರು. ಇದೇ ವಾಡೆಯಲ್ಲಿ ಎರಡನೇ ದಿನ ಚಿಕ್ಕ ಕೋಲಾಟವನ್ನು ಇದೇ ಮೂರು ಗ್ರಾಮಸ್ಥರು ಸೇರಿ ನಡೆಸಿದ ಬಳಿಕ ಕೋಲನ್ನು ಮಕ್ಕಿಶಾಸ್ತಾವು ದೇವಾಲಯಕ್ಕೆ ಒಪ್ಪಿಸುವುದರೊಂದಿಗೆ ಹಬ್ಬ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ.

ಕಾಪಳಕಳಿ

ಪುತ್ತರಿಹಬ್ಬದಲ್ಲಿ ಕಾಪಳಕಳಿಗೆ ಹೆಚ್ಚು ಪ್ರಾಮುಖ್ಯತೆ ಇದೆ. ಪುತ್ತರಿ ಹಬ್ಬದಂದು ಬೇತು ಗ್ರಾಮದ ಮಕ್ಕಿಶಾಸ್ತಾವು ದೇವಾಲಯಕ್ಕೆ ಅಡಗಿದ ಕೆಂಬಟ್ಟಿ ಜನಾಂಗದವರು ಕಾಪಳ ವೇಷವನ್ನು ಧರಿಸುತ್ತಾರೆ.ಮೈಗೆ ಕಪ್ಪು ಬಣ್ಣದ ಮಸಿಯನ್ನು ಬಳಿದು ಕೈಯಲ್ಲಿ ಅಂಗರೆ ಕೋಲು ಹಿಡಿದು ವಾದ್ಯಕ್ಕೆ ತಕ್ಕಂತೆ ಕುಣಿಯುತ್ತಾರೆ. ಈ ವೇಷ ಎರಡು ಮೂರು ದಿನಗಳ ಕಾಲ ಇದ್ದು, ಊರಿನ ಎಲ್ಲಾ ಮನೆಗಳಿಗೆ ತೆರಳುವುದು ಸಾಂಪ್ರದಾಯಿಕವಾಗಿ ನಡೆದು ಬಂದಿರುತ್ತದೆ. ಕೋಲಾಟ ಕಾರ್ಯಕ್ರಮದಲ್ಲಿ ಊರಿನ ಪರ ಊರಿನ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ಕೋಲಾಟ ಕಾರ್ಯಕ್ರಮಕ್ಕೆ ಮೆರಗು ನೀಡಿದರು.ಕಾರ್ಯಕ್ರಮದಲ್ಲಿ ಬಿದ್ದಾಟಂಡ ಕುಟುಂಬದ ಪ್ರಮುಖರಾದ ರಮೇಶ್ ಚಂಗಪ್ಪ ಹಾಗೂ ಬೇತು ಗ್ರಾಮದ ಕೊಂಡಿರ ಕುಟುಂಬದ ಗಣೇಶ್ ಅವರು ನಾಡ್ ಮಂದ್ ನಲ್ಲಿ ನಡೆಯುವ ಕೋಲಾಟದ ಇತಿಹಾಸದ ಕುರಿತು ಮಾಹಿತಿ ನೀಡಿದರು.

Continue Reading

Kodagu

ಪುತ್ತರಿ ಪ್ರಯುಕ್ತ ದೇವಟ್ ಪರಂಬುವಿನಲ್ಲಿ ಸಿಎನ್‌ಸಿಯಿಂದ ಗೌರವ ನಮನ ಸಲ್ಲಿಕೆ

Published

on

ಮಡಿಕೇರಿ: ಕೊಡಗಿನ ಸುಗ್ಗಿ ಹಬ್ಬ ಪುತ್ತರಿಯ ಹಿನ್ನೆಲೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವರ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪಾ ನಮನ ಸಲ್ಲಿಸಿದ್ದಾರೆ.


ಪುತ್ತರಿ ದಿನ ಕೊಯ್ಲು ಮಾಡಿದ ಕದಿರನ್ನು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಪಟ್ಟಮಾಡ ಕುಶ, ಮಂದಪಂಡ ಮನೋಜ್ ಹಾಗೂ ನಂದೇಟಿರ ಮೋಹನ್ ಸುಬ್ಬಯ್ಯ ಅವರುಗಳು ಸ್ಮಾರಕಗಳಿಗೆ ಕಟ್ಟಿ ಪುಷ್ಪ ನಮನ ಸಲ್ಲಿಸಿದರು.


ನಂತರ ಮಾತನಾಡಿದ ಎನ್.ಯು.ನಾಚಪ್ಪ ಅವರು ಹಿರಿಯರಿಗೆ ಗೌರವ ಅರ್ಪಿಸಿ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯದ ಪರವಾದ ಸಿಎನ್‌ಸಿಯ ಹೋರಾಟಕ್ಕೆ ಬೆಂಬಲ ಕೋರಲಾಯಿತು ಎಂದರು.

Continue Reading

Kodagu

ಸಂಭ್ರಮ, ಸಡಗರದಿಂದ ನಡೆದ ಇತಿಹಾಸ ಪ್ರಸಿದ್ಧದ ‘ಕೈಮುಡಿಕೆ ಪುತ್ತರಿ ಕೋಲ್ ಮಂದ್

Published

on

ಪೊನ್ನಂಪೇಟೆ : ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್ ಈ ಮೂರು ನಾಡುಗಳು ಒಂದೆಡೆ ಸೇರಿ ನಡೆಸುವ ಇತಿಹಾಸ ಪ್ರಸಿದ್ಧದ ‘ಕೈಮುಡಿಕೆ ಪುತ್ತರಿ ಕೋಲ್ ಮಂದ್’ ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಅವರ ಮುಂದಾಳತ್ವದಲ್ಲಿ ಸಂಭ್ರಮದಿಂದ ನಡೆಯಿತು.

ಮೂರು ನಾಡಿನ ತಕ್ಕ ಮುಖ್ಯಸ್ಥರು ಮೂರು ಕಡೆಯಿಂದ ಪಟ್ಟು ಹಿಡಿದು ಓಡಿ ಬಂದು ಮಂದ್ ಮಧ್ಯ ಭಾಗದಲ್ಲಿರುವ ಆಲದ ಮರಕ್ಕೆ ಕೋಲು ಬಾರಿಸುವ ಮೂಲಕ ಮಂದ್’ಗೆ ಚಾಲನೆ ನೀಡಲಾಯಿತು. ನಂತರ ಮೂರು ನಾಡಿನವರು ಒಟ್ಟಾಗಿ ಸೇರಿ ಪುತ್ತರಿ ಕೋಲು ಹೊಡೆಯುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಬಾಚಿರಣಿಯಂಡ ಅಪ್ಪಣ್ಣ ಹಾಗೂ ಅಖಿಲ ಕೊಡವ ಸಮಾಜ ಪೊಮ್ಮಕಡ ಪರಿಷತ್ ಅಧ್ಯಕ್ಷೆ ಬಾಚಿರಣಿಯಂಡ ರಾಣು ಅಪ್ಪಣ್ಣ ದಂಪತಿಗಳನ್ನು ಕೈಮುಡಿಕೆ ಮಂದ್ ಪರವಾಗಿ ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಬಾಚಿರಣಿಯಂಡ ಅಪ್ಪಣ್ಣ ಅವರು, ಈ ಸಡಗರ ಸಂಭ್ರಮ ಹಬ್ಬದ ವಾತಾವರಣ ನೋಡಿದರೇ ತಮ್ಮ ಬಾಲ್ಯದ ದಿನಗಳು ನೆನಪಾಗುವುದಲ್ಲದೆ ಹಲವಾರು ವರ್ಷಗಳ ಕಾಲ ಮಂದ್ ಮಾನಿಯಲ್ಲಿ ಆಡಿದ ಸಂಭ್ರಮ ನೆನಪಾಗುತ್ತದೆ. ಹಿಂದಿನ ಕಾಲದಲ್ಲಿ ಹಲವಾರು ಮಂದ್ ಇದ್ದರೂ ಬೊಟ್ಟಿಯತ್ ನಾಡಿನ ಕೈ ಮುಡಿಕೆ ಕೋಲ್ ಮಂದ್ ಬಹಳ ಪ್ರಸಿದ್ಧಿಯನ್ನು ಪಡೆದಿತ್ತು. 54 ವರ್ಷಗಳ ಹಿಂದೆ ಈ ಮಂದ್ ಗೆ ಭೇಟಿ ನೀಡಿದ್ದೆ. ಅಲ್ಲದೆ ಕಳೆದ 28 ವರ್ಷಗಳ ಹಿಂದೆ ಈ ಜಾಗಕ್ಕೆ ಭೇಟಿ ನೀಡಿ ಇದರ ಇತಿಹಾಸದ ಬಗ್ಗೆ ಅಧ್ಯಯನ ನಡೆಸಿದ್ದೆವು ಎಂದು ಆ ದಿನಗಳನ್ನು ಮೆಲುಕು ಹಾಕಿದರು. ಕೊಡವ ಸಂಸ್ಕೃತಿ ಆಚಾರ ವಿಚಾರವನ್ನು ಬೆಳೆಸುವಲ್ಲಿ ಈ ಮಂದ್ ಶ್ರಮಿಸುತ್ತಿದೆ. ಕೊಡಗಿನಲ್ಲಿರುವ ಹಲವಾರು ಮಂದ್ ಅಭಿವೃದ್ದಿ ಕಾಣದೇ ಮುಚ್ಚಿಹೋಗಿವೆ. ಆದರೆ ಹಿಂದಿನ ಕಾಲದಂತೆಯೇ ಸಂಭ್ರಮ ಸಡಗರದಿಂದ ಕಾರ್ಯನಿರ್ವಹಿಸುತ್ತಿರುವ ಕೈಮುಡಿಕೆ ಮಂದ್ ಗಮನಿಸಿದರೇ ಕೊಡವರ ಸಂಸ್ಕೃತಿ, ಆಚಾರ ವಿಚಾರ ಉತ್ತುಂಗಕ್ಕೆ ತಲುಪುವುದರಲ್ಲಿ ಸಂಶಯವಿಲ್ಲವೆಂದು ದೃಢವಾಗಿದೆ ಎಂದು ನುಡಿದರು.

ಮತ್ತೋರ್ವ ಮುಖ್ಯ ಅತಿಥಿ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಅವರು ಮಾತನಾಡಿ, ನಾನು ಹುಟ್ಟಿಬೆಳೆದ ನಾಡಿನಲ್ಲಿ ನನಗೆ ದೊರಕಿರುವ ಸನ್ಮಾನ ನಿಜಕ್ಕೂ ಖುಷಿಕೊಟ್ಟಿದೆ. ಕೊಡಗಿನ ಆಚಾರ, ವಿಚಾರ, ಪದ್ಧತಿ, ಪರಂಪರೆ ಉಳಿಸಿ ಬೆಳೆಸಿ ಕಿರಿಯರಿಗೆ ತಿಳುವಳಿಕೆ ನೀಡಿರುವುದು ನಮ್ಮ ಹಿರಿಯರು. ಹಲವಾರು ಮಂದ್ ಮಾನಿಗಳು ಮುಚ್ಚಿ ಹೋಗಿರುವ ಸಂದರ್ಭದಲ್ಲಿಯೂ ಈ ಕೈಮುಡಿಕೆ ಮಂದ್ ಕಂಬದಂತೆ ನಿಂತು ಕೊಡವರ ಆಚಾರ ವಿಚಾರವನ್ನು ಬೆಳೆಸುತ್ತಾ ಬಂದಿದೆ. ಇಷ್ಟು ವರ್ಷದವರೆಗೂ ಆಚಾರ ವಿಚಾರವನ್ನು ಪ್ರೋತ್ಸಾಹಿಸಿ ಬೆಳೆಸಿ ಕೈಮುಡಿಕೆ ಮಂದ್ ಅನ್ನು ಹಾಗೆಯೇ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಚಾರ. ಈ ನಾಡಿನ ಜನರ ಸೇವೆಯನ್ನು ಮೆಚ್ಚುವಂಥದ್ದು ಹಾಗೆಯೇ ನನಗೂ ಈ ಸಂದರ್ಭದಲ್ಲಿ ನಿಮ್ಮೊಡನೆ ಸಂತೋಷದಿಂದ ಕಳೆಯಲು ಅವಕಾಶ ಮಾಡಿಕೊಟ್ಟಿರುವುದು ಸಂತೋಷ ತಂದಿದೆ ಸೂರ್ಯ ಚಂದ್ರ, ಕಲ್ಲು ಕಾವೇರಿ ಹುಲ್ಲು ಭೂಮಿ ಇರುವವರೆಗೂ ಈ ಕೈಮುಡಿಕೆ ಮಂದ್ ನ ಕೀರ್ತಿ ಜಗತ್ತಿನೆಲ್ಲೆಡೆ ಬೆಳಗುವಂತಾಗಲಿ ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಬೊಟ್ಟಿಯತ್ ಮೂಂದ್ ನಾಡ್ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಮಾತನಾಡಿ ಹಿಂದಿನ ಕಾಲದಲ್ಲಿ ಮಂದ್ ಹಾಗೂ ಮುಂದ್ ಎಂಬ ಎರಡು ಪ್ರಾಮುಖ್ಯ ಸ್ಥಳಗಳಿದ್ದವು. ಮಂದ್ ನಲ್ಲಿ ಊರು ಕೇರಿಯ ವ್ಯಾಜ್ಯಗಳು ಬಗ್ಗೆ ಹರಿಯದಿದ್ದರೆ ಮುಂದ್ ನಲ್ಲಿ ಕುಟುಂಬದ ವ್ಯಾಜ್ಯಗಳು ಬಗ್ಗೆ ಹರಿಯುತ್ತಿದ್ದವು. ಈ ಮಂದ್ ಮೂರು ನಾಡಿಗೆ ಸೇರಿರುವ ಜಾಗವಾಗಿದ್ದರು ಬೊಟ್ಟಿಯತ್ ನಾಡ್ ನಲ್ಲಿದ್ದು ವೀರ ಪಡೆಯಾಳಿ ಜನಿಸಿರುವ ಈ ಮಣ್ಣಿನಲ್ಲಿ ಜನರಲ್ ತಿಮ್ಮಯ್ಯ ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು, ಕೋಲಾಟ ಆಡಿರುವುದು ಹೆಮ್ಮೆಯ ವಿಚಾರ. ಕೊಡವರ ಆಚಾರ ವಿಚಾರ ಉಡುಗೆ ತೊಡುಗೆಗೆ ಧಕ್ಕೆ ಉಂಟಾದ ಸಂದರ್ಭದಲ್ಲಿ ನಡುಪು ಕಾರ್ಯಕ್ರಮ ಏರ್ಪಡಿಸುವ ಸಂದರ್ಭದಲ್ಲಿ ಮೊದಲಿಗೆ ಇದೇ ಮಂದ್‌ನಲ್ಲಿ ಕೊಡವರು ಹಾಗೂ ಮೂಲ ನಿವಾಸಿಗಳು ಸಭೆ ಸೇರಿ ಸಾವಿರಾರು ಸಂಖ್ಯೆಯಲ್ಲಿ ಕೊಡಗಿನ ಮೂಲ ನಿವಾಸಿಗಳು ನಡುಪು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಂದ್ ಮಾನಿ ಯಲ್ಲಿ ಸೇರುವ ಕೊಡವ ಬಾಂಧವರು ಕೊಡವರ ಸಾಂಪ್ರದಾಯಿಕ ಉಡುಪಿನಲ್ಲಿ ಭಾಗವಹಿಸಬೇಕು. ಇಂದಿನ ಕಾರ್ಯಕ್ರಮದಲ್ಲಿ ಯುವಕರು ಕೊಡವರ ಸಾಂಪ್ರದಾಯಿಕ ಉಡುಪಿನಲ್ಲಿ ಬಾರದೇ ಇರುವುದು ಬೇಸರದ ಸಂಗತಿಯಾಗಿದೆ. ಕೊಡವರ ಉಡುಪು ಕೇವಲ ಮದುವೆ ಸಮಾರಂಭಗಳಿಗೆ ಸೀಮಿತವಲ್ಲ ಮಂದ್ ಎಂಬ ದೇವರ ಸ್ಥಾನಕ್ಕೆ ಕೊಡವರು ತಮ್ಮ ಸಾಂಪ್ರದಾಯಿಕ ಉಡುಪಿನಲ್ಲಿ ಬರದಿದ್ದ ಮೇಲೆ ಬೇರೆ ಯಾವ ಕಾರ್ಯಕ್ಕಾಗಿ ಕೊಡವರ ಉಡುಪು ಇದೆ ಎಂದು ಪ್ರಶ್ನಿಸಿದರಲ್ಲದೆ, ಮಂದ್ ಮಾನಿಗೆ ಬರುವಾಗ ಕೊಡವರ ಸಾಂಪ್ರದಾಯಿಕ ಉಡುಪು ಧರಿಸಿ ಬರಬೇಕೆಂದು ಮನವಿ ಮಾಡಿದರು.


ಪೊನ್ನಂಪೇಟೆ ಕೊಡವ ಪೊಮ್ಮಕಡ ಕೂಟ, ಕಾವೇರಿ ಕಾಲೇಜ್ ವಿದ್ಯಾರ್ಥಿಗಳು, ಅಪ್ಪಚ್ಚಕವಿ ವಿದ್ಯಾರ್ಥಿಗಳು, ಕುತ್ತ್ ನಾಡ್ ಪೊಮ್ಮಕ್ಕ, ಲಯನ್ಸ್ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಮೂರು ನಾಡಿನವರಿಂದ ಉಮ್ಮತಾಟ್, ಬೊಳಕಾಟ್, ಕತ್ತಿಯಾಟ್, ಪರೆಯಕಳಿ, ಬಾಳೋ ಪಾಟ್, ಗ್ರೂಪ್ ಡಾನ್ಸ್, ಕೊಡವ ಪಾಟ್ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಕಣ್ಮನ ಸೆಳೆಯಿತು.

ಈ ಸಂದರ್ಭ ಬೇರಳಿನಾಡ್ ತಕ್ಕ ಮಳುವಂಡ ಭುವೇಶ್ ದೇವಯ್ಯ, ಕುತ್ತ್ ನಾಡ್ ತಕ್ಕ ಪಂದಿಮಾಡ ರಮೇಶ್ ಅಚ್ಚಪ್ಪ, ಮೂಂದ್ ನಾಡ್ ಗೌರವ ಕಾರ್ಯದರ್ಶಿ ನಾಳಿಯಮ್ಮಂಡ ಉಮೇಶ್ ಕೇಚಮ್ಮಯ್ಯ, ಬೇರಳಿನಾಡ್ ಕಾರ್ಯದರ್ಶಿ ಅಪ್ಪಂಡೇರಂಡ ಮೋಹನ್, ಬೊಟ್ಟಿಯತ್ ನಾಡ್ ಸಹ ಕಾರ್ಯದರ್ಶಿ ತೀತಮಾಡ ಶಿವಮಣಿ ಕರುಂಬಯ್ಯ, ಕುತ್ತ್ ನಾಡ್ ಸಹ ಕಾರ್ಯದರ್ಶಿ ತೀತಮಾಡ ಗಣೇಶ್ (ಗಾಂಧಿ), ಹಳ್ಳಿಗಟ್ಟ್ ಊರು ತಕ್ಕ ಚಮ್ಮಟೀರ ಪ್ರವೀಣ್ ಉತ್ತಪ್ಪ, ಅಚ್ಚಿಯಂಡ ವೇಣು ಗೋಪಾಲ್, ಅರ್ವತೋಕ್ಲು ಊರು ತಕ್ಕ ಕಾಡ್ಯಮಾಡ ಮೋತಿ ಅಪ್ಪಚ್ಚು, ಕುಂದ ಊರು ತಕ್ಕ ಕೋಡಂದೆರ ಸುಬ್ಬಯ್ಯ, ಈಚೂರು ಊರು ತಕ್ಕ ತೀತಮಾಡ ಉಮೇಶ್, ಮುಗುಟಗೇರಿ ಊರು ತಕ್ಕ ಮನೆಯಪಂಡ ಬೆಳ್ಯಪ್ಪ, ಬೇರಳಿನಾಡಿನ ತಕ್ಕ ಅಪ್ಪಂಡೇರಂಡ ಅಶೋಕ್, ಕೊಂಗಂಡ ಡೆಟ್ರನ್, ಮೂಕಚಂಡ ಚುಮ್ಮಿ ದೇವಯ್ಯ, ಬೋಳಡಿಚಂಡ ಕಿರಣ್ ಸೇರಿದಂತೆ ಇತರ ತಕ್ಕಮುಖ್ಯಸ್ಥರು ಉಪಸ್ಥಿತರಿದ್ದರು.

Continue Reading

Trending

error: Content is protected !!