Politics
ಜೆಡಿಎಸ್ ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

ಪಕ್ಷ ಸೇರಿದ ವಿಶ್ರಾಂತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರಿಗೆ ಹಿರಿಯ ಉಪಾಧ್ಯಕ್ಷ ಸ್ಥಾನ
ವೆಂಕಟರಾವ್ ನಾಡಗೌಡರಿಗೆ ಮಹಾ ಪ್ರಧಾನ ಕಾರ್ಯದರ್ಶಿ ಹುದ್ದೆ
ಐವರು ಕಾರ್ಯಾಧ್ಯಕ್ಷರು, ಮೂವರು ಹಿರಿಯ ಉಪಾಧ್ಯಕ್ಷರ ನೇಮಕ; ಶಾಸಕ ರವಿಕುಮಾರ್ ಖಜಾಂಚಿ
*
ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಐವರು ಕಾರ್ಯಾಧ್ಯಕ್ಷರು:
ಅಲ್ಕೊಡ್ ಹನುಮಂತಪ್ಪ, ಸಿ.ಬಿ.ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟೀಲ್ (ರಾಜೂಗೌಡ), ಸಾ.ರಾ.ಮಹೇಶ್, ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ನರೆಬೋ
ಹಿರಿಯ ಉಪಾಧ್ಯಕ್ಷರು:
ಡಾ.ಶ್ರೀನಿವಾಸ ಮೂರ್ತಿ, ರವೀಂದ್ರ ಶ್ರೀಕಂಠಯ್ಯ, ಸೋಮಣ್ಣ ಗೌಡ ಪಾಟೀಲ್, ಜ್ಯೋತಿ ಪ್ರಕಾಶ್ ಮಿರ್ಜಿ
ಉಪಾಧ್ಯಕ್ಷರು:
ಕೆ.ಎಂ.ತಿಮ್ಮರಾಯಪ್ಪ, ರಾಜಾ ವೆಂಕಟಪ್ಪ ನಾಯಕ ದೊರೆ, ಕರೆಮ್ಮ ಜಿ..ನಾಯಕ, ಚೌಡರೆಡ್ಡಿ ತೂಪಲ್ಲಿ, ಸುನೀತಾ ಚೌಹಾಣ್, ಕೆ.ಬಿ.ಪ್ರಸನ್ನ ಕುಮಾರ್, ಟಿ. ಎ.ಶರವಣ
ಮಹಾ ಪ್ರಧಾನ ಕಾರ್ಯದರ್ಶಿ:
ವೆಂಕಟರಾವ್ ನಾಡಗೌಡ
ಖಜಾಂಚಿ:
ಬಿ.ಎನ್.ರವಿಕುಮಾರ್
ಪ್ರಧಾನ ಕಾರ್ಯದರ್ಶಿಗಳು:
ಎ. ಪಿ.ರಂಗನಾಥ್, ಅರ್ ಪ್ರಕಾಶ್, ಸಯ್ಯದ್ ರೋಷನ್ ಅಬ್ಬಾಸ್, ರೆಹಮತುಲ್ಲಾ ಖಾನ್, ಸುಧಾಕರ್ ಲಾಲ್, ಶಿವಕುಮಾರ ನಾಟೀಕಾರ್, ಶಾರದಾ ಅಪ್ಪಾಜಿಗೌಡ, ರೂತ್
ಮನೋರಮಾ, ಮಲ್ಲೇಶ್ ಬಾಬು, ವೀರಭದ್ರಪ್ಪ ಹಲರವಿ
ಕಾರ್ಯದರ್ಶಿಗಳು:
ಮಹಂತಯ್ಯಮಠ, ಶಂಸಿ ತಬ್ರಾಜ್, ಐಲಿನ್ ಜಾನ್ ಮಠಪತಿ, ಬಿ.ಕಾಂತರಾಜ್, ಡಾ.ವಿಜಯ ಕುಮಾರ್, ಡಾ.ಶೀಲಾ ನಾಯಕ್, ರೋಷನ್ ಬಾವಾಜಿ, ಚಂದ್ರಕಾಂತ್ ಶೇಕಾ, ಕನ್ಯಾಕುಮಾರಿ, ಸಿದ್ದಬಸಪ್ಪ ಯಾದವ್
*
ಜಿಲ್ಲಾಧ್ಯಕ್ಷರ ನೇಮಕ:
ಐದು ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಮೂರು ವಿಭಾಗಗಳಿಗೆ ರಾಜ್ಯಾಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರನ್ನು ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಶ್ಮಿ ರಾಮೇಗೌಡ ಅವರನ್ನು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಾಜು ನಾಯಕ ಅವರನ್ನು ಯುವ ಜನತಾದಳದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಶಿಕ್ಷಕರ ಕ್ಷೇತ್ರದ ಚುನಾವಣೆ ಉಸ್ತುವಾರಿ:
ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಆಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಣದಲ್ಲಿರುವ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರ ಗೆಲುವಿಗೆ ಶ್ರಮಿಸಲು ಮೂವರು ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಬೆಂಗಳೂರು ನಗರದ ಮಾಜಿ ಅಧ್ಯಕ್ಷ ಆರ್ ಪ್ರಕಾಶ್ ಅವರಿಗೆ ಈ ಹೊಣೆ ವಹಿಸಲಾಗಿದೆ.
ಸರಣಿ ಸಭೆಗಳು, ಮುಖಂಡರಿಗೆ ಖಡಕ್ ಸೂಚನೆ:
ಪಕ್ಷದ ಕಚೇರಿ ಜೆ ಪಿ ಭವನದಲ್ಲಿ ಸರಣಿ ಸಭೆಗಳು ನಡೆದವು. ಮೊದಲು ರಾಜ್ಯ ಕೋರ್ ಕಮಿಟಿ ಸಭೆ ನಡೆದು, ಪಕ್ಷದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಯಿತು. ಅಲ್ಲದೆ, ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಅಲ್ಲದೆ, ಶಿಕ್ಷಕರ ಕ್ಷೇತ್ರ ಹಾಗೂ ಲೋಕಸಭೆ ಚುನಾವಣೆಯ ಉಸ್ತುವಾರಿಗಳ ಹೆಸರುಗಳನ್ನು ಅಂತಿಮಗೊಳಿಸಲಾಯಿತು.
ಕೋರ್ ಕಮಿಟಿ ಸಭೆಯಲ್ಲಿ ಜಿಟಿ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ಆಲ್ಕೊಡ್ ಹನುಮಂತಪ್ಪ, ಹೆಚ್.ಕೆ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಎ.ಮಂಜು, ನೆಮಿರಾಜ್ ನಾಯಕ್, ದೊಡ್ಡಪ್ಪ ಗೌಡ ಪಾಟೀಲ್, ರಾಜಾ ವೆಂಕಟಪ್ಪ ನಾಯಕ ದೊರೆ, ಸುನೀತಾ ಚೌಹಾಣ್, ಡಿ.ನಾಗರಾಜಯ್ಯ, ಡಿಸಿ ತಮ್ಮಣ್ಣ, ಕೆ.ಎಂ.ಕೃಷ್ಣಾರೆಡ್ಡಿ, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಕೆ.ಎ.ತಿಪ್ಪೇಸ್ವಾಮಿ, ಚಂದ್ರಶೇಖರ್, ಪ್ರಸನ್ನ ಕುಮಾರ್, ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲಹರವಿ, ಸೂರಜ್ ನಾಯಕ್ ಸೋನಿ ಅವರು ಭಾಗಿಯಾಗಿದ್ದರು.
ತದ ನಂತರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಕೃಷ್ಣಪ್ಪ, ನೇಮಿರಾಜ್,ರಾಜೂಗೌಡ, ಕರೆಮ್ಮ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ನಗರ ಜನತಾದಳ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಎಲ್ಲಾ ಶಾಸಕರು, ಮಾಜಿ ಶಾಸಕರು ಹಾಜರಿದ್ದರು.
ಮಿರ್ಜಿ ಅವರಿಗೆ ನೂತನ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದ್ದು, ಅವರಿಗೆ ಹಿರಿಯ ಉಪಾಧ್ಯಕ್ಷ ಹುದ್ದೆ ಕೊಡಲಾಗಿದೆ.
*
//ಪಕ್ಷ ಸೇರಿದ ಜ್ಯೋತಿ ಪ್ರಕಾಶ್ ಮಿರ್ಜಿ//
ಜೆಡಿಎಸ್ ಪಕ್ಷ ಸೇರಿದ ವಿಶ್ರಾಂತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಮತ್ತಿತರೆ ನಾಯಕರು ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು.
Politics
ನೆಲ – ಜಲ – ಭಾಷೆ ವಿಚಾರದಲ್ಲಿ ನಾನು ಕನ್ನಡಿಗ, ರಾಜಕಾರಣಿ ಅಲ್ಲ: ಸಿದ್ದರಾಮಯ್ಯ

ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ.
ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಉದ್ಭವವಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ನಾನು ನಿಮ್ಮ ಮನೆಗೆ ಬಂದು ಕೈಹಿಡಿದು ಕರೆದುಕೊಂಡು ಬಂದು ಸರ್ವಪಕ್ಷಗಳ ಸಭೆ ನಡೆಸಿದ್ದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ.
ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ. ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳುಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ.
ನೀರಾವರಿ ವಿಚಾರದಲ್ಲಿ ನ್ಯಾಯಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ಸನ್ಮಾನ್ಯ ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ತಿಳಿದುಕೊಂಡಿದ್ದೇನೆ.
ಮಹದಾಯಿ ಜಲಾನಯನ ಪ್ರದೇಶದ ಕಳಸಾ ನಾಲೆ ಯೋಜನೆಯ ರೂ.995.30 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ (ಡಿಪಿಆರ್ )ಗೆ 2023ರ ಮಾರ್ಚ್ ನಲ್ಲಿಯೇ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ 26,925 ಹೆಕ್ಟೇರ್ ಅರಣ್ಯಪ್ರದೇಶದ ಸ್ವಾಧೀನ ಪ್ರಕ್ರಿಯೆ ಗೋವಾ ರಾಜ್ಯದ ಆಕ್ಷೇಪದ ಕಾರಣದಿಂದಾಗಿ ಕುಂಟುತ್ತಾ ಸಾಗಿದೆ. ಪ್ರಸ್ತುತ ಈ ಪ್ರಕ್ರಿಯೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (ಎನ್ ಬಿಡಬ್ಯುಎಲ್ ) ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ)ದ ಪರಿಶೀಲನೆಯಲ್ಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಅನುಮೋದನೆ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟೀಕರಣ ನೀಡಿರುವ ಕಾರಣ ಶೀಘ್ರವಾಗಿ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಾಗಿದೆ.
ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.
ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ. ಈ ನೀರಿನ ಪಾಲಿನಲ್ಲಿ 130 ಟಿಎಂಸಿಯನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಿಗೆ ನೀರುಣಿಸುವ ರೂ.51,148 ಸಾವಿರ ವೆಚ್ಚದ ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಆದರೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿರುವ ಪ್ರತಿವಾದಿ ರಾಜ್ಯಗಳ ಆಕ್ಷೇಪಣಾ ಅರ್ಜಿಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ನ್ಯಾಯಮಂಡಳಿಯ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ನಿರಾಕರಿಸುತ್ತಾ ಬಂದಿದೆ. ಈ ಯೋಜನೆಯ ಅನಿವಾರ್ಯತೆಯನ್ನು ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟು ಶೀಘ್ರವಾಗಿ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಿದರೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂಬ ಪ್ರಸ್ತಾವವನ್ನು ಸಲ್ಲಿಸಲು ಅನುಕೂಲವಾಗುತ್ತದೆ.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಈ ಘೋಷಣೆಯ ಪ್ರಸ್ತಾವಕ್ಕೆ ಸಾರ್ವಜನಿಕ ಹೂಡಿಕೆ ಸಮಿತಿ ಈಗಾಗಲೇ ಅಂಗೀಕಾರ ನೀಡಿದೆ. ಆದರೆ ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಾ ಕೂತಿದೆ.
ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮತ್ತು 400 ಮೆಗಾವಾಟ್ ವಿದ್ಯುತ್ ಉತ್ಪಾದನೆಗಾಗಿಯೇ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯ ವಿವರಗಳೆಲ್ಲ ನಿಮಗೆ ಬಾಯಿಪಾಠದಲ್ಲಿರಬಹುದು. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ದೊರಕಿಸಿಕೊಟ್ಟರೆ ಬೆಂಗಳೂರು ನಿವಾಸಿಗಳು ಸದಾ ನಿಮಗೆ ಋಣಿಯಾಗಿರುತ್ತಾರೆ.
ಕೃಷ್ಣಾ ಮತ್ತು ಕಾವೇರಿ ನದಿಗಳ ಜೋಡಣೆಯ ನೀರಾವರಿ ಯೋಜನೆಯ ಬಗ್ಗೆ ನಿಮ್ಮ ಕಳಕಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಈ ವಿಷಯದಲ್ಲಿ ನೀವು ನಡೆಸುವ ಹೋರಾಟಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಮಾತ್ರವಲ್ಲ ಸಮಸ್ತ ಕರ್ನಾಟಕ ನಿಮ್ಮ ಜೊತೆ ಇರುತ್ತದೆ. ಆದರೆ ಹೊಸ ನೀರಾವರಿ ಯೋಜನೆಗಳನ್ನು ಪ್ರಾರಂಭಿಸುವ ಮೊದಲು ಅಪೂರ್ಣ ಸ್ಥಿತಿಯಲ್ಲಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ.
ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯನ್ನು ಸದ್ಯ ನೀರಾವರಿ ಕ್ಷೇತ್ರಕ್ಕಷ್ಟೇ ಸೀಮಿತಗೊಳಿಸುತ್ತಿದ್ದೇನೆ. ಇನ್ನು ತೆರಿಗೆ ಹಂಚಿಕೆ, ಪ್ರಕೃತಿ ವಿಕೋಪ ಪರಿಹಾರ, ಕುಡಿಯುವ ನೀರು ಪೂರೈಕೆ, ರೈಲ್ವೆ ಯೋಜನೆಗಳ ವಿಚಾರದಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕವನ್ನು ಶತ್ರು ರಾಜ್ಯದಂತೆ ನಡೆಸಿಕೊಳ್ಳುತ್ತಿದೆ. ಈ ವಿಚಾರಗಳು ಕೂಡಾ ನಿಮಗೆ ಗೊತ್ತಿರುವುದರಿಂದ ಸಂಸತ್ ನಲ್ಲಿ ಈ ಬಗ್ಗೆ ನೀವು ದನಿ ಎತ್ತುತ್ತೀರಿ ಎಂದು ರಾಜ್ಯದ ಜನರು ನಿರೀಕ್ಷಿಸಿದ್ದರು.
ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ.
ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಡವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ.

ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್ಸಿಎಲ್ ಗಮನಕ್ಕೆ ತಂದಿದ್ದೇನೆ.
Politics
ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು
“ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.
ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ” ಎಂದರು.
“ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ” ಎಂದು ತಿಳಿಸಿದರು.
ಮಾಧ್ಯಮಗಳ ಮುಂದೆ ಹೇಳಿಕೆಯಿಂದ ಪ್ರಯೋಜನವಿಲ್ಲ:
“ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ. ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ. ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದು ಕೇಳಿದರು.
ಯಾರೇ ಇರಲಿ, ಹೋಗಲಿ ಪಕ್ಷ ಇರುತ್ತದೆ
“ಈ ಪಕ್ಷವನ್ನು ಕೇವಲ ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ. ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ. ಮಹಾತ್ಮಾ ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರವನ್ನು ತ್ಯಾಗ ಮಾಡಿದ್ದಾರೆ. ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟರು ಅವರು ಯಾವ ಅಧಿಕಾರ ಪಡೆದಿದ್ದಾರೆ? ನಾವು ಅವರನ್ನೆಲ್ಲ ಸ್ಮರಿಸಬೇಕು. ಹೀಗಾಗಿ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ. ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಸಧ್ಯಕ್ಕೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆಯಲ್ಲಿದ್ದು, ಇದರ ಪರಿಶೀಲನೆಗೆ ಸುರ್ಜೆವಾಲ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ನಿಮ್ಮ ಪ್ರಶ್ನೆಗಳು ಏನೇ ಇದ್ದರೂ ಅವರನ್ನು ಕೇಳಿ” ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನೆ ಮಾಡುವುದು ಸರಿಯಲ್ಲ
ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿ ಎಂದು ಕೇಳಿದಾಗ, “ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು. ಈ ವಿಚಾರವಾಗಿ ಅವರ ಬಳಿ ಕೇಳಿ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು” ಎಂದು ತಿಳಿಸಿದರು.
-
Kodagu22 hours ago
ಬೇಳೂರು ಬಾಣೆಯಲ್ಲಿ ಸ್ಟೇರಿಂಗ್ ಲಾಕ್ : ಕಾರು ಪಲ್ಟಿ
-
Kodagu19 hours ago
ಕೊಡಗಿನ ಭರವಸೆಯ ಪ್ರತಿಭೆ ವರ್ತ ಕಾಳಿ ಕಿರುಚಿತ್ರದ ನಿರ್ದೇಶಕ: ಕೃತಾರ್ಥ ಮಂಡೆಕುಟ್ಟಂಡ
-
State15 hours ago
ಬಿಜೆಪಿ ಶೋಕಾಸ್ ನೋಟಿಸ್ ಕುರಿತು ಶಾಸಕ ಎಸ್ಟಿಎಸ್ ಫಸ್ಟ್ ರಿಯಾಕ್ಷನ್
-
Mysore18 hours ago
ಎಲ್ಲಾ ಪಕ್ಷದವರ ಮೇಲೂ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ: ಯತೀಂದ್ರ ಸಿದ್ದರಾಮಯ್ಯ
-
Mandya13 hours ago
ಎಂ.ಕೆ.ಸೋಮಶೇಖರ್ಗೆ ರಾಜ್ಯಮಟ್ಟದ ಛಾಯಗ್ರಾಹಕ ಹಾಗೂ ಕಲಾವಿದ ಪ್ರಶಸ್ತಿ ಪ್ರಧಾನ
-
State12 hours ago
ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
-
Mandya17 hours ago
ಭೂ ದಾಖಲೆ ಹೊಂದಿರುವವರನ್ನು ಓಕ್ಕಲೆಬ್ಬಿಸಬೇಡಿ : ಎನ್ ಚೆಲುವರಾಯಸ್ವಾಮಿ
-
Hassan16 hours ago
1 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನರೆವೇರಿಸಿದ ಸ್ವರೂಪ್ ಪ್ರಕಾಶ್