Connect with us

National

ಉಪ ರಾಷ್ಟ್ರಪತಿ ಚುನಾವಣೆಗೆ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಘೋಷಿಸಿದ ಬಿಜೆಪಿ

Published

on

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಸಿ.ಪಿ.ರಾಧಾಕೃಷ್ಣನ್​​ ಅವರನ್ನು ಎನ್​ಡಿಎ ಅಭ್ಯರ್ಥಿಯಾಗಿ ಬಿಜೆಪಿ ಅಧಿಕೃತವಾಗಿ ಘೋಷಿಸಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಮೈತ್ರಿಕೂಟವು ತನ್ನ ಅಭ್ಯರ್ಥಿಯನ್ನಾಗಿ ಪ್ರಸ್ತುತ ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಿದರು.

ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್​ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಇದೇ ಸೆಪ್ಟೆಂಬರ್​ 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಹಿಂದೆ ಉಪರಾಷ್ಟ್ರಪತಿಯಾಗಿದ್ದ ಜಗದೀಪ್​ ಧನ್ಕರ್​ ಅವರು ಜುಲೈ 21 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜಗದೀಪ್​ ಧನ್ಕರ್​ ಅವರು ಅನಾರೋಗ್ಯದ ಕಾರಣ ಹೇಳಿ, ಜು. 21 ರಂದು ಪದತ್ಯಾಗ ಮಾಡಿದ್ದರು.

 ಸಿ.ಪಿ.ರಾಧಾಕೃಷ್ಣನ್ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು

ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ (ಸಿ.ಪಿ.ರಾಧಾಕೃಷ್ಣನ್) ಅವರು ತಮಿಳುನಾಡಿನ ತಿರುಪ್ಪೂರಿನಲ್ಲಿ ಅಕ್ಟೋಬರ್​ 20, 1957 ರಂದು ಜನಿಸಿದರು. ಸಿಪಿ ರಾಧಾಕೃಷ್ಣನ್ ಅವರು 16ನೇ ವಯಸ್ಸಿನಿಂದಲೇ ಆರ್‌ಎಸ್‌ಎಸ್ ಮತ್ತು ಜನಸಂಘದಂತಹ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಅಲ್ಲದೇ ರಾಧಾಕೃಷ್ಣನ್​ ಅವರು ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದರು.

1998 ಮತ್ತು 1999 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅವರು ಬಿಜೆಪಿಯಿಂದ ಕಣಕ್ಕೆ ಇಳಿದರು. 1998 ರ ಚುನಾವಣೆಯಲ್ಲಿ 150,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮತ್ತು 1999 ರ ಚುನಾವಣೆಯಲ್ಲಿ 55,000 ಮತಗಳ ಅಂತರದಿಂದ ಗೆದ್ದರು.  ಸಿಪಿ ರಾಧಾಕೃಷ್ಣನ್​ ಅವರು 2024ರಿಂದ ಮಹಾರಾಷ್ಟ್ರದ 24ನೇ ರಾಜ್ಯಪಾಲರಾಗಿದ್ದಾರೆ. 2003 ರಿಂದ 2006ರವರೆಗೆ ತಮಿಳುನಾಡಿನ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷರು ಸಹ ಆಗಿದ್ದರು.

Continue Reading

National

ಸಚಿವ ಸ್ಥಾನಕ್ಕೆ ರಾಮಲಿಂಗ ರೆಡ್ಡಿ ರಾಜೀನಾಮೆ?

Published

on

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕರಿಸಿ ಹೊಸ ಆಡಳಿತಕ್ಕೆ ಮುನ್ನುಡಿ ಬರೆದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಖಾತೆ ಹಂಚಿಕೆಯ ಖ್ಯಾತೆ ಶುರುವಾಗಿದೆ. ಸಚಿವರುಗಳು ತಮಗೆ ಇದೇ ಖಾತೆ ಬೇಕೆಂಬ ಹಠ ಹಿಡಿದು ಕೂತಿದ್ದಾರೆ. ಈ ನಡುವೆ ತಾವು ಬಯಸಿದ ಖಾತೆ ಸಿಗದೇ ಇರುವ ಕಾರಣ ಸಂಪುಟದ ಹಿರಿಯ ಸಚಿವರಲ್ಲಿ ಒಬ್ಬರಾದ ರಾಮಲಿಂಗ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮಾರನೇ ದಿನವೇ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆಯೇ ಬೇಕೆಂದು ರಾಮಲಿಂಗ ರೆಡ್ಡಿ ಪಟ್ಟು ಹಿಡಿದು ಕೂತಿದ್ದಾರೆ. ಆದರೆ ಇದಕ್ಕೆ ಡಿಕೆ ಶಿವಕುಮಾರ್ ಒಪ್ಪಿಗೆ ಸೂಚಿಸಿಲ್ಲ. ಹೀಗಾಗಿ ತಾವು ಬಯಸಿದ ಖಾತೆ ನೀಡದಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದು, ಇದು ರಾಮಲಿಂಗಾರೆಡ್ಡಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಇಂದು ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೊಟ್ಟರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡಿ, ಇಲ್ಲದಿದ್ದರೇ ಸಚಿವ ಸ್ಥಾನವೇ ಬೇಡ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಅಲ್ಲದೆ ಪತ್ರಕರ್ತರೊಂದಿಗೆ ಮಾತನಾಡಿದ್ದ ಸಚಿವ ರಾಮಲಿಂಗಾ ರೆಡ್ಡಿ, “ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದರೆ ನನಗೆ ಸಚಿವ ಸ್ಥಾನವೇ ಬೇಡ” ಎಂದು ನೇರವಾಗಿ ಹೇಳಿದ್ದಾರೆ. ಮೂಲಗಳ ಪ್ರಕಾರ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಅವರ ಪಾಲಾಗಲಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಜಲಸಂಪನ್ಮೂಲಯ ಜವಾಬ್ದಾರಿ ತೆಗೆದುಕೊಳ್ಳುವಂತೆ ಕೋರಲಾಗಿದೆ. ಆದರೆ ಬೆಂಗಳೂರು ನಗರಾಭಿವೃದ್ಧಿ ಖಾತೆಯೇ ಬೇಕು ಎಂದು ಪಟ್ಟು ಹಿಡಿದಿರುವ ರಾಮಲಿಂಗಾ ರೆಡ್ಡಿ, ಈ ಖಾತೆ ದೊರೆಯದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ರಚನೆ ಸಂದರ್ಭದಲ್ಲಿ ಹೈಕಮಾಂಡ್ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲು ನಿರ್ಧರಿಸಿತ್ತು. ಆದರೆ ಆಗಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿ ಅವರ ಮನವೊಲಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಾನು ಪಡೆಯುತ್ತೇನೆ. ನಾನು ಮುಖ್ಯಮಂತ್ರಿಯಾದ ನಂತರ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಿಮಗೆ ಕೊಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಅವರಿಗೆ ಮಾತು ಕೊಟ್ಟಿದ್ದರು. ಆದರೆ ಡಿಕೆಶಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹೀಗಾಗಿ ರಾಮಲಿಂಗ ರೆಡ್ಡಿ ತಮ್ಮ ಪಟ್ಟು ಬಿಡದೆ ರಾಜೀನಾಮೆ ಬೆದರಿಕೆ ಹಾಕಿದ್ದಾರೆ.

Continue Reading

National

ಬಿಜೆಪಿ ತೊರೆಯುವ ಸಾಧ್ಯತೆ: ನಾಳೆ ಸುದ್ದಿಗೋಷ್ಠಿ ಕರೆದ ಅಣ್ಣಾಮಲೈ

Published

on

ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಪ್ರಮುಖ ಮುಖಂಡ ಕೆ.ಅಣ್ಣಾಮಲೈ ಅವರು ಪಕ್ಷದಿಂದ ದೂರವಾಗುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.

ವರದಿಗಳ ಪ್ರಕಾರ, ಅವರು ಜೂನ್ 5ರಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಬಹುದು ಎಂಬ ಊಹಾಪೋಹಗಳು ಹರಡಿವೆ. ಆದರೆ ಇದುವರೆಗೆ ಅಧಿಕೃತ ಘೋಷಣೆ ಬಂದಿಲ್ಲ.

ಇತ್ತೀಚೆಗೆ ಅವರು ದೆಹಲಿಯಲ್ಲಿ ಬಿಜೆಪಿ ಹಿರಿಯ ನಾಯಕರನ್ನು ಭೇಟಿಯಾಗಿ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಪಕ್ಷದ ನಾಯಕತ್ವವು ಅವರನ್ನು ತಡೆಯಲು ಪ್ರಯತ್ನಿಸಿದ್ದು, ರಾಜ್ಯಸಭಾ ಸ್ಥಾನ ಹಾಗೂ ಸಚಿವ ಸ್ಥಾನ ನೀಡುವ ಆಫರ್ ಕೂಡ ನೀಡಲಾಗಿದೆ ಎಂಬ ವರದಿಗಳಿವೆ. ಆದಾಗ್ಯೂ, ಅಣ್ಣಾಮಲೈ ಆ ಆಫರ್‌ಗಳನ್ನು ತಿರಸ್ಕರಿಸಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಇದೇ ನಡುವೆ, ಅವರು ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರನ್ನೂ ಭೇಟಿಯಾದ ನಂತರ ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಈ ಬೆಳವಣಿಗೆಯ ಬಗ್ಗೆ ಆರ್‌ಎಸ್‌ಎಸ್‌  ನಿಲುವು ಕೂಡ ಗಮನ ಸೆಳೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ. ದ್ರಾವಿಡ ರಾಜಕಾರಣದಲ್ಲಿ ಬಿಜೆಪಿ ಸಂಘಟನೆ ಬೆಳೆಸುವಲ್ಲಿ ಅಣ್ಣಾಮಲೈ ಪಾತ್ರ ಪ್ರಮುಖವಾಗಿದ್ದರಿಂದ, ಅವರನ್ನು ಕಳೆದುಕೊಳ್ಳಬಾರದು ಎಂಬ ಅಭಿಪ್ರಾಯವೂ ಕೆಲವು ವಲಯಗಳಲ್ಲಿ ಇದೆ.

ಈಗ ಎಲ್ಲರ ಗಮನ ಜೂನ್ 5ರ ಪತ್ರಿಕಾಗೋಷ್ಠಿಯತ್ತ ಇದೆ. ಅಲ್ಲಿ ಅವರ ಮುಂದಿನ ರಾಜಕೀಯ ನಿರ್ಧಾರ ಸ್ಪಷ್ಟವಾಗುವ ನಿರೀಕ್ಷೆ ಇದೆ.

Continue Reading

National

ಅಫ್ಘಾನಿಸ್ತಾನ ODI ಸರಣಿಗೆ ಭಾರಿ ಹಿನ್ನಡೆ: ವಿರಾಟ್ ಕೊಹ್ಲಿ ಗಾಯದಿಂದ ಹೊರಗೆ

Published

on

ಮುಂಬೈ: ವಿರಾಟ್‌ ಕೊಹ್ಲಿ ಹ್ಯಾಮ್‌ಸ್ಟ್ರಿಂಗ್ ಗಾಯದ ಕಾರಣದಿಂದ   ಟೀಂ ಇಂಡಿಯಾ, ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಬಿಸಿಸಿಐ ಮೂಲಗಳ ಪ್ರಕಾರ, ಐಪಿಎಲ್ ಫೈನಲ್ ವೇಳೆ ಗಾಯಗೊಂಡಿದ್ದ ಕೊಹ್ಲಿ ಸಂಪೂರ್ಣ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.

ಭಾರತ ಮತ್ತು ಅಫ್ಘಾನಿಸ್ತಾನ  ನಡುವಿನ ಏಕದಿನ ಸರಣಿ ಜೂನ್. 13ರಂದು ಧರ್ಮಶಾಲಾದಲ್ಲಿ ಆರಂಭವಾಗಲಿದೆ. ನಂತರದ ಪಂದ್ಯಗಳು ಲಕ್ನೋ ಮತ್ತು ಚೆನ್ನೈನಲ್ಲಿ ನಡೆಯಲಿವೆ.

ಇತ್ತೀಚೆಗೆ ನಡೆದ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪ್ರಶಸ್ತಿ ಗೆಲುವಿನಲ್ಲಿ ಕೊಹ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಫೈನಲ್‌ನಲ್ಲಿ ಜಿಟಿ ವಿರುದ್ಧ ಅಜೇಯ 75 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಇದೇ ಪಂದ್ಯದಲ್ಲಿ ಅವರಿಗೆ ಹ್ಯಾಮ್‌ಸ್ಟ್ರಿಂಗ್ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ವರದಿಯಾಗಿದೆ.

ಈ ಋತುವಿನ ಐಪಿಎಲ್‌ನಲ್ಲಿ ಕೊಹ್ಲಿ 16 ಪಂದ್ಯಗಳಲ್ಲಿ 675 ರನ್‌ಗಳನ್ನು ಕಲೆಹಾಕಿ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿದ್ದರು. ಅವರ ಅನುಪಸ್ಥಿತಿ ಭಾರತದ ಬ್ಯಾಟಿಂಗ್ ಬಲಕ್ಕೆ ದೊಡ್ಡ ಹೊಡೆತವೆಂದು ಪರಿಗಣಿಸಲಾಗಿದೆ.

ಇದರ ನಡುವೆ ಭಾರತ ತಂಡದ ನಾಯಕ ರೋಹಿತ್‌ ಶರ್ಮ ಅವರ ಫಿಟ್ನೆಸ್ ಕೂಡ ಇನ್ನೂ ಸ್ಪಷ್ಟವಾಗಿಲ್ಲ. ಅವರನ್ನು ಅಫ್ಘಾನಿಸ್ತಾನ ಸರಣಿಗೆ ಆಯ್ಕೆ ಮಾಡಲಾಗಿದ್ದರೂ, ಅವರ ಆಯ್ಕೆ ಫಿಟ್ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿದೆ ಎಂದು ಬಿಸಿಸಿಐ ಈಗಾಗಲೇ ತಿಳಿಸಿತ್ತು. ರೋಹಿತ್ ಕೂಡ ಸಂಪೂರ್ಣ ಫಿಟ್ ಆಗದಿದ್ದರೆ, ಸರಣಿಯಲ್ಲಿ ಭಾರತದ ಸವಾಲು ಮತ್ತಷ್ಟು ಹೆಚ್ಚಾಗಬಹುದು.

ಭಾರತ ತಂಡವನ್ನು ಈ ಸರಣಿಯಲ್ಲಿ ಶುಭಮನ್‌ ಗಿಲ್‌ ಮುನ್ನಡೆಸಲಿದ್ದು, ಕೊಹ್ಲಿಯ ಅನುಪಸ್ಥಿತಿಯಲ್ಲಿ ಮಧ್ಯಮ ಕ್ರಮಾಂಕದ ಮೇಲೆ ಹೆಚ್ಚಿನ ಜವಾಬ್ದಾರಿ ಬೀಳಲಿದೆ.

Continue Reading

Trending

error: Content is protected !!