Connect with us

Mandya

ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಯಲು ಕ್ರಮ ಜರುಗಿಸಿ: ಜಿಲ್ಲಾಧಿಕಾರಿ

Published

on

ಮಂಡ್ಯ: ‌ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಇಲಾಖೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ತಡೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮನ್ವಯ ಹಾಗೂ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಮಂಡ್ಯ ಜಿಲ್ಲೆಯಲ್ಲಿ ಒಟ್ಟು 60 ಬಾಲ್ಯ ವಿವಾಹ ಕುರಿತು ಬಂದ ದೂರುಗಳಲ್ಲಿ 46 ಬಾಲ್ಯ ವಿವಾಹವನ್ನು ತಡೆಯಲಾಗಿದೆ. ಮಂಡ್ಯ ತಾಲ್ಲೂಕಿನಲ್ಲಿ – 12, ಮದ್ದೂರು – 3, ಮಳವಳ್ಳಿ – 1, ಶ್ರೀರಂಗಪಟ್ಟಣ – 4, ಕೆ ಆರ್ ಪೇಟೆ – 12, ನಾಗಮಂಗಲ – 5, ಪಾಂಡವಪುರ ತಾಲ್ಲೂಕಿನಲ್ಲಿ – 9 ಪ್ರಕರಣಗಳನ್ನು ತಡೆಯಲಾಗಿದ್ದು, ಉಳಿದ 14 ಪ್ರಕರಣಗಳನ್ನು ಎಫ್ ಐ ಆರ್ ನಲ್ಲಿ ದಾಖಲು ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ 14 ಬಾಲ್ಯ ವಿವಾಹ ಪ್ರಕರಣಗಳು ಜರುಗಿರುವುದು ತಲೆ ತಗ್ಗಿಸುವ ಸಂಗತಿಯಾಗಿದೆ. ಈ ಬಗ್ಗೆ ಏನೇನು ಕ್ರಮ ಕೈಗೊಂಡಿದ್ದೀರಿ ಎಂದು ಸಂಬಂಧಪಟ್ಟವರನ್ನು ವಿಚಾರಿಸಿದರು.

ಬಾಲ್ಯ ವಿವಾಹದ ಕಾರಣ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರು ಹೆಚ್ಚಾಗಿದ್ದಾರೆ. ಜಿಲ್ಲೆಯಲ್ಲಿ ಶಾಲೆಬಿಟ್ಟ ಹೆಣ್ಣು ಮಕ್ಕಳ ಸಂಖ್ಯೆಯನ್ನು ಪಟ್ಟಿಮಾಡಿ ಹಾಗೂ 15 ದಿನಗಳಿಗಿಂತ ಹೆಚ್ಚು ಸತತವಾಗಿ ಶಾಲೆಗೆ ಗೈರು ಹಾಜರಾಗುವ ಹೆಣ್ಣು ಮಕ್ಕಳ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಎಲ್ಲಾ ತಾಲ್ಲೂಕಿನ ಬಿಇಒ ಗಳಿಗೆ ತಿಳಿಸಿದರು.

18 ವರ್ಷದೊಳಗಿನ ಹೆಣ್ಣು ಮಕ್ಕಳು ಆಧಾರ್ ಕಾರ್ಡ್ ನಲ್ಲಿ ವಯಸ್ಸನ್ನು ಬದಲಾಯಿಸಿಕೊಂಡು ಸುಳ್ಳು ವಯಸ್ಸಿನ ದಾಖಲೆಗಳನ್ನು ಆಸ್ಪತ್ರೆಗೆ ನೀಡುತ್ತಿರುವುದು ಕೇಳಿ ಬರುತ್ತಿದೆ. ಈ ರೀತಿಯ ಆಧಾರ್ ಕಾರ್ಡ್ ನಲ್ಲಿ ಸುಳ್ಳು ವಯಸ್ಸನ್ನು ಬದಲಾವಣೆ ಮಾಡುವುದು ಕಂಡು ಬಂದಲ್ಲಿ ಅಥವಾ ಸಹಕರಿಸುವವರು ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಪ್ರತಿ ಗ್ರಾಮ ಪಂಚಾಯಿತಿ, ತಾಲ್ಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡಂತೆ ಸಮನ್ವಯ ಸಮಿತಿಯನ್ನು ಈ ಹಿಂದೆಯೇ ರಚಿಸಲಾಗಿದೆ. ಬಾಲ್ಯ ವಿವಾಹ, ಬಾಲ ಗರ್ಭಿಣಿ ಹಾಗೂ ಹೆಣ್ಣು ಭ್ರೂಣ ಪತ್ತೆಯ ವಿಚಾರಗಳ ಬಗ್ಗೆ ಪ್ರತಿ 2 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಬೇಕು ಎಂದರು.

ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ತೀವ್ರ ನಿಗಾ

ಜಿಲ್ಲೆಯಲ್ಲಿ ಯಾವುದೇ ಭ್ರೂಣ ಹತ್ಯೆ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಿ. ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ತೀವ್ರ ನಿಗಾ ಇಟ್ಟು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಸಂಬಂಧಪಟ್ಟ ಇಲಾಖೆಗೆ ತಿಳಿಸಿದರು.

ಕೆಲವು ತಂದೆ ತಾಯಿಗಳಿಗೆ ತಮ್ಮ ಮನೆಯ ಹೆಣ್ಣು ಮಕ್ಕಳಿಗೆ ಆದಷ್ಟು ಬೇಗ ಮದುವೆ ಮಾಡಿ ಜವಾಬ್ದಾರಿಯಿಂದ ಮುಕ್ತವಾಗಬೇಕು ಅನ್ನೋ ಭಾವನೆ, ಶಿಕ್ಷಣದ ಕೊರತೆ, ಮೂಡ ನಂಬಿಕೆಗಳಿಂದ ಕೆಲವು ಪೋಷಕರು ಬಾಲ್ಯ ವಿವಾಹಕ್ಕೆ ಮನಸೋಲುತ್ತಾರೆ. ಕೆಲವು ವೇಳೆ ಪ್ರೇಮ ಪ್ರಕರಣಗಳ ಕಾರಣದಿಂದಲೂ ಬಾಲ ಗರ್ಭಿಣಿಯರು ಸೃಷ್ಟಿಯಾಗುತ್ತಾರೆ. ಕಾರಣ ಯಾವುದೇ ಇರಲಿ, 18 ವರ್ಷ ತುಂಬುವುದಕ್ಕಿಂತಾ ಮೊದಲು ಗರ್ಭಿಣಿ ಆಗುವ ಬಾಲಕಿಯರು ಹಲವು ದೈಹಿಕ, ಮಾನಸಿಕ ಸಂಕಷ್ಟ ಅನುಭವಿಸುತ್ತಾರೆ ಎಂದು ಹೆಣ್ಣು ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದರು.

ಬಾಲ ಗರ್ಭಿಣಿಯರಿಗೆ ರಕ್ತಹೀನತೆ, ಗರ್ಭಾವಸ್ಥೆಯ ಅಧಿಕ ರಕ್ತದೊತ್ತಡ, ಕಡಿಮೆ ಜನನ ತೂಕ, ಶಿಶು ಮರಣದ ಹೆಚ್ಚಿನ ಪ್ರಮಾಣ, ಖಿನ್ನತೆ, ಪ್ರಿ-ಎಕ್ಲಾಂಪ್ಸಿಯಾ, ಮಾನಸಿಕ ಆರೋಗ್ಯ ಅಸ್ವಸ್ಥತೆಗಳು, ನವಜಾತ ಶಿಶುವಿನ ಸಾವು ಸಂಭವಿಸುತ್ತದೆ. ಈ ಬಗ್ಗೆ ಆರೋಗ್ಯ ಇಲಾಖೆ ಅವರು ಸಹ ಜಾಗೃತಿ ಮೂಡಿಸಿ ಎಂದರು

ಬಾಲ ತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆ ಮಾಡುವಂತೆ ಸೂಚಿಸಿದರು.

ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪ್ರತಿ ಗ್ರಾಮು ಸಭೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ಜಿಲ್ಲೆಯಲ್ಲಿರುವ ಶಾಲೆಗಳ ಮುಖ್ಯಸ್ಥರು, ವಸತಿ ನಿಲಯಗಳ ಮೇಲ್ವಿಚಾರಕರು,ದೇವಸ್ಥಾನದ ಮುಖ್ಯಸ್ಥರು, ಮುದ್ರಣಾಲಯದ ಮಾಲೀಕರಿಗೆ, ಕಲ್ಯಾಣ ಮಂಟಪಗಳ ವ್ಯವಸ್ಥಾಪಕರು, ಸಾಮೂಹಿಕ ವಿವಾಹಗಳ ಆಯೋಜಕರು, ಧಾರ್ಮಿಕ ಮುಖಂಡರುಗಳಿಗೆ ಬಾಲ್ಯ ವಿವಾಹ ತಡೆಗಟ್ಟಲು ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಸಭೆ ಕರೆದು ತಿಳಿಸಿ ಎಂದರು.

ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್ ಅವರು ಮಾತನಾಡಿ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಪಿಯುಸಿ ನಲ್ಲಿ ಪ್ರವೇಶ ಪಡೆಯದೆ ಇರುವ ವಿದ್ಯಾರ್ಥಿಗಳ ಬಗ್ಗೆ ವಿಚಾರಿಸಿ ಮುಖ್ಯವಾಗಿ ಹೆಣ್ಣು ಮಕ್ಕಳ ಬಗ್ಗೆ ಮಾಹಿತಿ ಪಡೆದು ವರದಿ ಸಲ್ಲಿಸಬೇಕು. ಈಗಾಗಲೇ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಇನ್ನೂ ಹೆಚ್ಚಾಗಿ ಬಲವರ್ಧನೆಯಾಗಬೇಕು ಎಂದರು.

ಸಭೆಯಲ್ಲಿ ಡಿ.ವೈ.ಎಸ್.ಪಿ ಗಂಗಾಧರ ಸ್ವಾಮಿ, ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕರಾದ ರಾಜಮೂರ್ತಿ ಎಸ್, ಆರ್ ಸಿ ಎಚ್ ಒ ಅಧಿಕಾರಿ ಡಾ ಅನಿಲ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್ ಶಿವರಾಮೇಗೌಡ, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಸಮಾಜ ಕಲ್ಯಾಣಾಧಿಕಾರಿ ಡಾ.ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading

Mandya

ಜ.23 ರಂದು ಬೃಹತ್ ರಕ್ತದಾನ ಶಿಬಿರ : ನಟರಾಜ್

Published

on

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಭಾಷ್‌ ಚಂದ್ರಬೋಸ್ ಅವರ ೧೨೮ನೇ ಜನ್ಮದಿನದ ಸ್ಮರಣಾರ್ಥ ನಿರಂತರ ೨೪ ಗಂಟೆಗಳ ಕಾಲ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜನವರಿ ೨೩ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೀವಧಾರೆ ಟ್ರಸ್ಟ್‌ನ ನಟರಾಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್‌ನ ವತಿಯಿಂದ ಇದುವರೆಗೂ ೩೪೪ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು, ೪೩ ಸಾವಿರ ಯೂನಿಟ್ ರಕ್ತವನ್ನು ಸಂಗ್ರಹಿಸಿ ಯೋಧರ ಆಸ್ಪತ್ರೆಯನ್ನೂ ಒಳಗೊಂಡಂತೆ ಸರ್ಕಾರಿ ರಕ್ತನಿಧಿ ಕೇಂದ್ರಗಳಿಗೆ ನಿರಂತರವಾಗಿ ಕಾಲಕಾಲಕ್ಕೆ ಸಂಗ್ರಹಿಸಿದ ರಕ್ತ ಒದಗಿಸುತ್ತಿದೆ ಎಂದರು.

ಜನವರಿ ೨೩ರ ಬೆಳಿಗ್ಗೆ ೦೮ ಪ್ರಾರಂಭವಾಗುವ ರಕ್ತದಾನ ಶಿಬಿರ ಜನವರಿ ೨೪ರ ಬೆಳಿಗ್ಗೆ ೦೮ ಗಂಟೆ ವರೆಗೂ ನಡೆಯಲಿದೆ. ರಕ್ತದಾನ ಶಿಬಿರ ಸಂಬಂಧ ೧೨೮ ಹಳ್ಳಿಗಳಿಗೆ ಭೇಟಿ ಪ್ರಚಾರ ಮಾಡಲಾಗಿದೆ. ಜನವರಿ ೧೮ರಂದು ನಗರದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ಮೂಲಕ ಪ್ರಚಾರ ಮಾಡಲಾಗಿದೆ. ಟ್ರಸ್ಟ್‌ನಿಂದ ನಡೆಯುವ ೩೪೫ನೇ ರಕ್ತದಾನ ಶಿಬಿರದಲ್ಲಿ ೧೫೦೦ ಯುನಿಟ್ ಸಂಗ್ರಹವಾಗುವ ನಿರೀಕ್ಷೆಯಿದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕಾರ್ಯಕ್ರಮದಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಲಾಗಿದ್ದು, ಸರ್ಕಾರಿ ಆಸ್ಪತ್ರೆಯಿಂದ ರಕ್ತ ಸಂಗ್ರಹಿಸಲು ವೈದ್ಯ ಸಿಬ್ಬಂದಿಗಳು ೩ ಪಾಳಯದಲ್ಲಿ ಕಾರ್ಯನಿರ್ವಹಿಸಲಿದ್ದು, ಸರ್ಕಾರಿ ಆಸ್ಪತ್ರೆಯಿಂದ ೧೫೦ ಹಾಸಿಗೆ ವ್ಯವಸ್ಥೆಯನ್ನು ಒದಗಿಸಲಾಗುವುದು. ಸಂಗ್ರಹವಾದ ರಕ್ತವನ್ನು ಸೈನಿಕ ಆಸ್ಪತ್ರೆಗೆ ಬೇಕಾಗಿರುಷ್ಟು ತಲುಪಿಸಲಾಗುವುದು. ಉಳಿದ ಎಲ್ಲ ರಕ್ತವನ್ನು ಸರ್ಕಾರಿ ರಕ್ತ ನಿಧಿ ಕೇಂದ್ರ ಹಾಗೂ ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಗಣೇಶ್, ಅಭಿ, ಮಹದೇವ, ಉದಯ್, ರವಕುಮಾರ್, ಕುಮಾರ್, ಅನ್ವೇಶ್ ಇದ್ದರು.

Continue Reading

Mandya

ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿವರ್ಷ ಒಂದು ತಾಲ್ಲೂಕಿಗೆ ಅಂದಾಜು ರೂ 220 ಕೋಟಿ : ಎನ್ ಚಲುವರಾಯಸ್ವಾಮಿ

Published

on

ಮಂಡ್ಯ : ಹಲವಾರು ವಿರೋಧಗಳ ನಡುವೆ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಯಿತು. ಈ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಅವರು ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಜನರು ಕಚೇರಿಗಳಿಗೆ ಅಲೆದಾಟುವಂತಿಲ್ಲ‌. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತದೆ ಎಂದರು.

ಸಮಸ್ಯೆ ಪರಿಹಾರವಾದ ನಂತರ ಪರಿಹಾರವಾಗಿದೆ ಎಂದು ಯಾರು ಅಭಿನಂದನೆ ಸಲ್ಲಿಸುವುದಿಲ್ಲ. ಹೊಸ ಸಮಸ್ಯೆಗಳ ಪರಿಹಾರಕ್ಕೆ ಅರ್ಜಿ ಸಲ್ಲಿಕೆಯಾಗುತ್ತದೆ‌. ಸಾರ್ವಜನಿಕರ ಕೆಲಸ ಮಾಡುವುದು ಜನಪ್ರತಿನಿಧಿಗಳ ಕೆಲಸ ಎಂಬ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು ಎಂದರು.

ಕರ್ನಾಟಕ ರಾಜ್ಯ ಸಾರ್ವಜನಿಕರಿಗೆ ನೀಡುವ ಕಾರ್ಯಕ್ರಮಗಳಿಗೆ ಸಂಗ್ರಹಿಸುವ ಫಲಾನುಭವಿಗಳ ವಿವರಗಳ ಬಗ್ಗೆ ಬೇರೆ ರಾಜ್ಯಗಳು ಮೆಚ್ಚುಗೆ ವ್ಯಕ್ತಪಡಿಸಿ, ವಿವರ ಸಂಗ್ರಹಿಸಲು ರೂಪಿಸಿರುವ ತಂತ್ರಜ್ಞಾನ ವನ್ನು ಹಂಚಿಕೊಳ್ಳುವಂತೆ ಮನವಿ ಸಲ್ಲಿಸಿರುವುದು ಹರ್ಷದಾಯಕ ವಿಷಯವಾಗಿದೆ ಎಂದರು.

ಕೊಪ್ಪ ಹೋಬಳಿಯಲ್ಲಿ ಇದು ಎರಡನೇ ಬಾರಿಗೆ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸ್ವೀಕರಿಸುವ ಕುಂದು ಕೊರತೆ ಅರ್ಜಿಗಳನ್ನು ಕಾನೂನು ಚೌಕಟ್ಟಿನಲ್ಲಿ ಪರಿಹರಿಸಲಾಗುವುದು ಎಂದರು.

ಕೊಪ್ಪದಲ್ಲಿ ಬೇಡಿಕೆ ಇರುವ ಪೊಲೀಸ್ ಠಾಣೆ ನಿರ್ಮಾಣ, ನಾಡ ಕಚೇರಿ ಹಾಗೂ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದಲ್ಲದೇ ಪಂಚಾಯಿತಿ ಕಚೇರಿ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಸುಮಾರು 1 ಕೋಟಿ ವೆಚ್ಚವಾಗಲಿದೆ ಎಂದರು.

ಸಹಕಾರ ಸಂಘದ ಮೂಲಕ ರೂ 1 ಕೋಟಿ ಸಾಲ

ಕೊಪ್ಪ ಹಾಗೂ ಸುತ್ತಮುತ್ತಲಿನ 16 ಹಳ್ಳಿಗಳ ಕೃಷಿ ಪತ್ತಿನ ಸಹಕಾರ ಸಂಘ ಹಲವಾರು ಕಾರಣಗಳಿಂದ ಕೆಲಸ ಸ್ಥಗಿತಗೊಳಿಸಿತ್ತು. ಇದನ್ನು ಸರಿಪಡಿಸಿ ರೈತರು ಹಾಗೂ ಮಹಿಳೆಯರಿಗೆ ಆರ್ಥಿಕವಾಗಿ ಸದೃಢರಾಗಲು ಬಡ್ಡಿ ರಹಿತವಾಗಿ 1 ಕೋಟಿ ರೂ ವರೆಗೆ ಸಾಲ ನೀಡಲಾಗಿದೆ. ಇದಕ್ಕೆ ನಬಾಡ್೯ ವಿಧಿಸುವ ಬಡ್ಡಿಯನ್ನು ಸರ್ಕಾರ ಭರಿಸುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ಹೈನುಗಾರಿಕೆ ಕೃಷಿ ಸಂಬಂಧಿಸಿದ ಇಲಾಖೆಗಳ ಮೂಲಕ ಕೊಪ್ಪ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಸುಮಾರು 2000 ಫಲಾನುಭವಿಗಳಿಗೆ 1.96 ಕೋಟಿ ರೂ ಸಹಾಯಧನ ನೀಡಲಾಗಿದೆ ಎಂದರು.

ಪೌತಿ ಖಾತೆ ಆಂದೋಲನಕ್ಕೆ ಸಂಬಂಧಿಸಿದಂತೆ ಕಳೆದ ಒಂದುವರೆ ತಿಂಗಳಿನಿಂದ ಕೊಪ್ಪ ವ್ಯಾಪ್ತಿಯಲ್ಲಿ 1275 ಅರ್ಜಿ ಸ್ವೀಕರಿಸಿ ಸುಮಾರು 443 ಪೌತಿ ಖಾತೆ ಮಾಡಿಕೊಡಲಾಗಿದೆ. ಪೌತಿ ಖಾತೆ ಮಾಡಿಸಿಕೊಳ್ಳಲು ರೈತರು ಸಹ ಆಸಕ್ತಿ‌ ತೋರಿಸಿ ಮುಂದೆ ಬರಬೇಕು. ದಾಖಲೆ, ಆರ್.ಟಿ.ಸಿ ಗಳು ಸರಿಯಿದ್ದರೆ ಮಾತ್ರ ಬ್ಯಾಂಕ್ ಅಥವಾ ಸೊಸೈಟಿಗಳಿಂದ ಸಾಲ ಪಡೆಯಲು ಸಾಧ್ಯ ಎಂದರು.

ರೈತರ ಭೂಮಿ ಹಾಗೂ ಇನ್ನಿತರೆ ದಾಖಲೆಗಳನ್ನು ಕಂದಾಯ ಇಲಾಖೆ ಡಿಜಟಲ್ ಮಾಡುವ ಭೂ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ 36 ಲಕ್ಷ ದಾಖಲೆಗಳನ್ನು ಡಿಜಟಲೀಕರಣ ಮಾಡಲಾಗಿದೆ ಎಂದರು.

ಕಂದಾಯ ಇಲಾಖೆಯಲ್ಲಿ ಜನಪರ ಕೆಲಸಗಳು ನಡೆಯುತ್ತಿದ್ದು, ಸುಮಾರು 67 ಲಕ್ಷ ಪೌತಿ ಖಾತೆ, ಹಲವಾರು ವರ್ಷಗಳಿಂದ ಬಾಕಿ ಇದ್ದ ಕೋಟ್೯ ಪ್ರಕರಣಗಳನ್ನು ಒಂದು ವರ್ಷದಲ್ಲಿ 16000 ವಿಲೇವಾರಿ ಮಾಡಲಾಗಿದೆ. 18 ಲಕ್ಷ ಆರ್.ಟಿ.ಸಿ ಗಳಿಗೆ ಆಧಾರ್ ಜೋಡಣೆ ಕೆಲಸ ಮಾಡಲಾಗಿದೆ ಎಂದರು.

ಇತಿಹಾಸದಲ್ಲೇ ಮೊದಲ ಬಾರಿಗೆ ನಿರಂತರ 154 ದಿನಗಳು ಕೆ.ಆರ್.ಎಸ್ ನಲ್ಲಿ ನೀರು ತುಂಬಿರುವುದು ಸಂತೋಷದ ವಿಷಯವಾಗಿದೆ. ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗಿದೆ ಬೆಳಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲು ಪ್ರಾರಂಭಿಸಲಾಗಿದೆ. ರೈತರು ಬಿತ್ತನೆ ಕೆಲಸಗಳನ್ನು ಪ್ರಾರಂಭಿಸುವಂತೆ ತಿಳಿಸಿದರು.

ರೈತರಿಗೆ ಹೆಚ್ಚು ಉಪಯುಕ್ತವಾಗಲಿ ಎಂದು ರೈತರು ಹೆಚ್ಚಿರುವ ಜಿಲ್ಲೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ನಲ್ಲಿ ಪ್ರಾರಂಭಿಸಲಾಗುವುದು. ಇಲ್ಲಿ ಕೃಷಿ ತಜ್ಞರು ರೈತರಿಗೆ ಹಲವಾರು ಉಪಯುಕ್ತ ಮಾಹಿತಿಯನ್ನು ನೀಡಲಿದ್ದಾರೆ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜನರ ಸಮಸ್ಯೆಗಳನ್ನು ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಎರಡನೇ ಬಾರಿಗೆ ಕೊಪ್ಪದಲ್ಲಿ ಆಯೋಜಿಸಲಾಗಿದ್ದು, ಈ ಹಿಂದೆ ಸ್ವೀಕೃತವಾರ ಕುಂದು ಕೊರತೆ ಅರ್ಜಿಗಳಿಗೆ ಪರಿಹಾರ ಒದಗಿಸಲಾಗಿದೆ.

ಕಂದಾಯ ಇಲಾಖೆ ಚುರುಕಾಗಿ ಕೆಲಸ ನಿರ್ವಹಿಸುತ್ತಿದ್ದು, ಸ್ವಯಂ ಪ್ರೇರಿತವಾಗಿ ಪೌತಿ ಖಾತೆ ಆಂದೋಲನ, ಪೋಡಿ ದುರಸ್ತಿ, ಆಧಾರ ಸೀಡಿಂಗ್ ಕೆಲಸಗಳನ್ನು ಮನೆ ಮನೆಗೆ ಭೇಟಿ ನೀಡಿ ದಾಖಲೆ ಸಂಗ್ರಹಿಸಿಕೊಂಡು ಮಾಡಿಕೊಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ಉಪವಿಭಾಗಾಧಿಕಾರಿ ಶಿವ ಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಕೊಪ್ಪದಲ್ಲಿ ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡ ಉದ್ಘಾಟನೆ

Published

on

ಮಂಡ್ಯ : ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಕೊಪ್ಪದಲ್ಲಿ ನಿರ್ಮಿಸಲಾಗಿದ್ದ ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕೆಳೆದ ಐದು ವರ್ಷದಿಂದ ದುರಸ್ಥಿಯಲ್ಲಿ ಇದ್ದ ಕೊಪ್ಪ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡವನ್ನು ಕೆಡವಿ, ರೈತರಿಗೆ ಸಾರ್ವಜನಿಕರು ಅನುಕೂಲವಾಗುವಂತೆ
ನೂತನ ಕಟ್ಟಡ ನಿರ್ಮಿಸಿರುವುದು ಸಂತಸ ಎಂದು ಹೇಳಿದರು.

ಇದೇ ವೇಳೆ ವ್ಯವಸಾಯ ಸಂಘದ ಸದಸ್ಯರು ವಿವಿಧ ಬೇಡಿಕೆಗಳನ್ನು ಕೃಷಿ ಸಚಿವರ ಮುಂದಿಟ್ಟರು. ಮುಂದಿನ ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂತೋಷ್, ಕೆ, ಆರ್ ಪೇಟೆ ಮಾಜಿ ಶಾಸಕ ಚಂದ್ರಶೇಖರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Trending

error: Content is protected !!