Connect with us

Mandya

ಜಿಲ್ಲೆಯಲ್ಲಿ ಹರಡುತ್ತಿರುವ ಡೆಂಗ್ಯೂ ರೋಗವನ್ನು ನಿಯಂತ್ರಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

Published

on

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ರೋಗ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಗ್ಯೂ ನಿಯಂತ್ರಣ ದಿನದ ಪ್ರಯುಕ್ತ ಡೆಂಗ್ಯೂ ನಿಯಂತ್ರಣ ಕುರಿತು ಅಂತರ ಇಲಾಖೆಯ ಸಮನ್ವಯ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಹಾಸ್ಟೆಲ್ ಗಳಿಗೆ ಮಕ್ಕಳಿಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸುವಂತೆ ತಿಳಿಸಿ, ಹಾಸ್ಟಲ್ ಗಳ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದರು.

ಜಿಲ್ಲೆಯಲ್ಲಿ 189 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಳೆಯ ಟೈರ್, ತೆಂಗಿನ ಚಿಪ್ಪುಗಳು ಮುಂತಾದ ವಸ್ತುಗಳನ್ನು ತೆರವುಗೊಳಿಸಿ. ಶುದ್ಧ ಕುಡಿಯುವ ನೀರನ್ನು ಬಳಸಿ ಎಂದರು.

ಮಳೆಗಾಲ ಪ್ರಾರಂಭವಾಗಿದ್ದು, ಸ್ಥಳೀಯ ಸಂಸ್ಥೆಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ರಸ್ತೆ ಹಾಗೂ ಚರಂಡಿಗಳನ್ನು ಪರಿಶೀಲಿಸಿ, ಎಲ್ಲಿಯೋ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ನೋಡಿಕೊಳ್ಳಿ ಎಂದರು.

ಡೆಂಗ್ಯೂ ಪ್ರಕರಣಗಳು ಹೆಚ್ಚು ವರದಿಯಾಗುವ ಸ್ಥಳಗಳನ್ನು ಗುರುತಿಸಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಡೆಂಗ್ಯೂ ರೋಗ ಹರಡದಂತೆ ನಿಯಂತ್ರಿಸಿ ಎಂದರು.

ಸಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಲು ಸಾರ್ವಜನಿಕರಿಗೆ ಶುದ್ಧ, ಸುರಕ್ಷಿತ ಕುಡಿಯುವ ನೀರನ್ನು ಪೂರೈಸುವುದು ಮುಖ್ಯ. ಸ್ಥಳೀಯ ಸಂಸ್ಥೆಗಳು ನೀರನ್ನು ಪರೀಕ್ಷಿಸಿ ವರದಿ ಪಡೆದ ತಕ್ಷಣ ಆರೋಗ್ಯ ಇಲಾಖೆಯೊಂದಿಗೆ ಹಂಚಿಕೊಂಡು ವಿಶ್ಲೇಷಣೆ ನಡೆಸಿ, ನೀರಿನಲ್ಲಿ ರೋಗವಾಹಕ ಅಂಶಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬಹುದು ಎಂದರು.

ಶಾಲೆಯ 100 ಮೀ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧ

ಜಿಲ್ಲೆಯಲ್ಲಿರುವ ಶಾಲಾ, ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿರುವ ಅಂಗಡಿಗಳಲ್ಲಿ ತಂಬಾಕು ಮಾರಾಟ ಕಂಡು ಬಂದಲ್ಲಿ, ಅಂಗಡಿಗಳ ಪರವಾನಗಿ ರದ್ದು ಪಡಿಸುವಂತೆ ತಿಳಿಸಿದರು.

ಕೆಲವು ಶಾಲೆಯ ಸುತ್ತಮುತ್ತ ತಂಬಾಕು ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದೆ. ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ತಮ್ಮ ಶಾಲೆಯ ಸುತ್ತಮುತ್ತಲು 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟವಾಗುತ್ತಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದರು.

ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು ಎಂದು ಹೇಳಿದರು.

ತಂಬಾಕು ಮಾರಾಟ ಮಾಡುವವರು ಇನ್ನೂ ಮುಂದೆ ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯತಿಗಳಲ್ಲಿ ತಂಬಾಕು ಮಾರಾಟ ರಹದಾರಿ ಪಡೆಯಬೇಕಿರುತ್ತದೆ. ಇದಕ್ಕೆ ನಗರ ಸ್ಥಳೀಯ ಸಂಸ್ಥೆಗಳು ಸಮಿತಿ ರಚಿಸಿಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ 2023 ರ ಏಪ್ರಿಲ್ ಮಾಹೆಯಿಂದ ಮಾರ್ಚ್ 2024 ರ ವರೆಗೆ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 88 ಕಡೆ ಕೋಟ್ಪಾ ದಾಳಿ ನಡೆಸಿ ರೂ 1,34,860 ಹಣ ದಂಡ ವಿಧಿಸಿದೆ. 1,031 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ರಕ್ತದಾನ ಶಿಬಿರ ಹೆಚ್ಚು ಆಯೋಜಿಸಿ

ಜಿಲ್ಲೆಯಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಎನ್.ಎಸ್.ಎಸ್ ಅಧಿಕಾರಿಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ, ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚು, ಸಾರ್ವಜನಿಕರು ನಾಯಿ ಕಡಿತಕ್ಕೆ ಒಳಗಾದ ತಕ್ಷಣ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಿ ಇಲ್ಲವಾದಲ್ಲಿ ರೇಬಿಸ್ (rabies) ಗೆ ತಿರುಗಿ ಸಾವು ಸಂಭವಿಸಬಹುದು ಎಂದರು.

ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯಿತಿ/ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆಯನ್ನು ಕೈಗೊಳ್ಳಬೇಕು. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಮಾಂಸ ಮಾರಾಟ ಮಾಡುವ ಅಂಗಡಿಗಳಲ್ಲಿನ ತ್ಯಾಜ್ಯಗಳನ್ನು ಸೂಕ್ತವಾಗಿ ವಿಲೇವಾರಿ ಮಾಡುವಂತೆ ಸೂಕ್ತ ಕ್ರಮ ವಹಿಸಿ ಎಂದು ತಿಳಿಸಿದರು.

ಸಾಕು ಪ್ರಾಣಿಗಳನ್ನು ಸಾಕುವ ಕುಟುಂಬದವರಿಗೆ ರೇಬಿಸ್ ಕಾಯಿಲೆ ಬಗ್ಗೆ ಅರಿವು ಮೂಡಿಸಿ. ನಾಯಿ ಕಚ್ಚಿದ ನಂತರ ಚಿಕಿತ್ಸೆ ಪಡೆಯದಿದ್ದರೆ ಸಾವು ಖಚಿತ ಎಂಬ ಬೋರ್ಡ್ ಅನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಆರ್.ಸಿ.ಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಮ್.ಎನ್ ಆಶಾಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಸ್.ರಾಜಮೂರ್ತಿ, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕ ಸಿ.ಚೆಲುವಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಶಾಲಾ ಜಾಗ ಖಾಸಗಿ ವ್ಯಕ್ತಿಯ ಹೆಸರಿಗೆ : ಬಿಇಓ ರಿಂದ ಸ್ಥಳ ಪರಿಶೀಲನೆ

Published

on

ಶ್ರೀರಂಗಪಟ್ಟಣ : ತಾಲೂಕಿನ ಹುಲಿಕೆರೆ ಗ್ರಾಮದ ಸರ್ವೆ ನಂ 101/16 ರ 1 ಎಕರೆ ಶಾಲಾ ಜಾಗವು ಖಾಸಗಿ ವ್ಯಕ್ತಿಯ ಹೆಸರಿಗೆ ವರ್ಗಾವಣೆಗೊಂಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ಶಾಲಾ ಜಾಗವನ್ನು ಬದಲಾವಣೆ ಮಾಡಿ ಖಾಸಗಿ ವ್ಯಕ್ತಿ ಹೆಸರಿಗೆ ವರ್ಗಾಯಿಸಿರುವ ಕುರಿತು ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳ ಆದೇಶದನ್ವಯ ಕ್ಷೇತ್ರ ಶಿಕ್ಷಣಾಧಿಕಾರಿ ಗ್ರಾಮಕ್ಕೆ ತೆರಳಿ ಪರಿಶೀಲಿಸಿದರು.

1956 ರಲ್ಲಿ ಹುಲಿಕೆರೆ ಗ್ರಾಮದ ಪಟೇಲ್ ದಾಸೇಗೌಡ ಎಂಬುವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 1 ಎಕರೆ ಜಾಗವನ್ನು ನೀಡಿ ಖಾತೆ ಮಾಡಿಸಿದ್ದರು. 2022ರ ತನಕ ಈ ಜಾಗವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸರಿನಲ್ಲಿ ಖಾತೆ ಹೊಂದಿದ್ದು, 2023 ರಲ್ಲಿ ಏಕಾಏಕಿ ಖಾಸಗಿ ವ್ಯಕ್ತಿ ಹೆಸರಿಗೆ ಖಾತೆ ಮಾಡಲಾಗಿದೆ. ಈ ಕುರಿತು ಹುಲಿಕೆರೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದಾಖಲೆಗಳ ಸಮೇತ ದೂರು ನೀಡಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಈ ಕುರಿತು ತನಿಖೆ ನಡೆಸಿ ಸ್ಥಳ ಪರಿಶೀಲನೆ ಮಾಡಿ ವರದಿ ನೀಡಲು ತಹಶೀಲ್ದಾರ್ ಗೆ ಆದೇಶ ಮಾಡಿದ್ದರು. ಈ ಹಿನ್ನಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ನೇತೃತ್ವದಲ್ಲಿ , ಭೂಪನ ಇಲಾಖೆಯ ಎ.ಡಿ.ಎಲ್ ಮೇಘಾ, ಕಂದಾಯ ಇಲಾಖೆಯ ರಾಜಸ್ವ ನೀರಿಕ್ಷಕ ಪ್ರಸನ್ನ ಒಳಗೊಂಡ ತಂಡ ಸ್ಥಳ ಪರಿಶೀಲನೆ ನಡೆಸಿ, ಸ್ಥಳಿಯರಿಂದ ಮಾಹಿತಿ ಸಂಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎ.ಡಿ.ಎಲ್.ಆರ್ ಮೇಘಾ ಈಗಲೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸರಲ್ಲಿ ಒಂದು ಎಕರೆ ಜಾಗದ ಖಾತೆ ಹೊಂದಿದೆ. ಆತಂಕ ಬೇಡ ಜಿಲ್ಲಾಧಿಕಾರಿಗಳ ಆದೇಶದಂತೆ ತಹಶೀಲ್ದಾರ್ ಮಾರ್ಗದರ್ಶನದಲ್ಲಿ ಸರ್ವೇ ನಡೆಸಿ ವರದಿ ನೀಡಲಾಗುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಮಾತನಾಡಿ, ಶಾಲೆಗೆ ಸೇರಿದ ಜಾಗ ಸರ್ಕಾರದ ಆಸ್ತಿಯಾಗಿದೆ. ಅತಿಕ್ರಮಣ ಹಾಗೂ ವರ್ಗಾವಣೆ ಕಾನೂನು ಬಾಹಿರವಾಗಿ ನಡೆಸಿದ್ದು, ಸರ್ವೇ ನಂತರ ತಿಳಿಯಲಿದೆ. ಈಗಿರುವ ಜಾಗದಲ್ಲಿ ಯಾರು ಅತಿಕ್ರಮ ಮಾಡದಂತೆ ಸೂಚಿಲಾಗುತ್ತದೆ ಎಂದರು.

ಹುಲಿಕರೆ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಚೆಲವರಾಜು, ಮುಖಂಡ ಶ್ರೀನಿವಾಸ ಅಧಿಕಾರಿಗಳಿಗೆ ದಾಖಲೆ ಸಮೇತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಸದಸ್ಯೆ ರೇಶ್ಮಾಬಾನು ಸ್ಥಳಕ್ಕಾಗಮಿಸಿ ನಮ್ಮ ಮುಸ್ಲಿಂ ಸಮುದಾಯಕ್ಕೆ ಸೇರಿದ ಜಾಗ ಕೂಡ ಖಾಸಗಿ ವ್ಯಕ್ತಿಯ ಹೆಸರಿಗೆ ಮಾಡಿರುವುದು ಕಂಡು ಬಂದಿದೆ ಎಂದು ದೂರಿದರು.

ರಾಜ ಸ್ವ ನೀರಿಕ್ಷಕ ಪ್ರಸನ್ನ, ಗ್ರಾಮ ಲೆಕ್ಕಾಧಿಕಾರಿ ರಘು ಸೇರಿದಂತೆ, ಹುಲಿಕರೆ ಗ್ರಾಮಸ್ಥರು, ಮುಖಂಡರು ಇತರರು ಇದ್ದರು.

Continue Reading

Mandya

ಕಾನೂನಾತ್ಮಕ ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರದ ಭರವಸೆ : ಸಚಿವ ಎನ್. ಚಲುವರಾಯಸ್ವಾಮಿ

Published

on

ನಾಗಮಂಗಲ : ಜನಸಾಮಾನ್ಯರಿಗೆ ತಮ್ಮ ಸ್ಥಳದಲ್ಲಿ ಕಾನೂನಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಜನಸ್ಪಂದನಾ ಕಾರ್ಯಕ್ರಮ ಸೂಕ್ತವಾಗಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.

ತಾಲೂಕಿನ ದೇವಲಾಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರು ನಿಮ್ಮೂರಿನ ಸಮಸ್ಯೆಗಳನ್ನು ತಿಳಿಸಿದರೆ ಕಾನೂನಾತ್ಮಕವಾಗಿ ಸ್ಥಳದಲ್ಲೇ ಪರಿಹಾರ ನೀಡುವ ಜೊತೆಗೆ ನ್ಯಾಯ ದೊರಕಿಸುವ ಪ್ರಯತ್ನ ಮಾಡಲಾಗುವುದು ಎಂದರು.

ಸಾಮಾಜಿಕ ಸಮಾನತೆ ನಿರ್ಮಾಣದ ಹಾದಿಯಲ್ಲಿ ಗ್ಯಾರಂಟಿ ಯೋಜನೆಗಳ ಅಭಿವೃದ್ಧಿ ಜನರ ಆರ್ಥಿಕ ಅಭಿವೃದ್ಧಿಗೆ ನೇರ ಪರಿಹಾರ ಒದಗಿಸುತ್ತಿದ್ದು, ಸರ್ಕಾರದ ಈ ಮಹತ್ವಕಾಂಕ್ಷೆ ಯೋಜನೆ ಬಡಜನರ ಆಶಾಕಿರಣವಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಸಚಿವರು ಭೀಮನಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ತಹಸೀಲ್ದಾರ್ ಆದರ್ಶ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಮುಡ್ಲಿಗೌಡ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್, ಸಚಿನ್ ಚೆಲುವರಾಯಸ್ವಾಮಿ, ಸುನಿಲ್, ಲಕ್ಷ್ಮಿಕಾಂತ್ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಶಾಲಾ ಮಕ್ಕಳಿಗೆ ಅರಿವು

Published

on

ಶ್ರೀರಂಗಪಟ್ಟಣ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಮಕ್ಕಳು ಪೋಷಕರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಿದರೆ ತಾಲ್ಲೂಕಿನಲ್ಲಿ ನಡೆಯುವ ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಬಹುದಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಸಲಹೆ ನೀಡಿದರು.

ತಾಲೂಕಿನ ಬಲ್ಲೆನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಬಲ್ಲೆನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಿದ್ದ “ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ” ಉದ್ದೇಶಿಸಿ ಮಾತನಾಡಿದರು.

ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ತುಂಬಾ ಗಂಭೀರ ಸ್ವರೂಪದಾಗಿದ್ದು, ತಂದೆ, ತಾಯಿ, ಸಂಬಂಧಿಕರ ಅಭಿಪ್ರಾಯದ ಮೇರೆಗೆ ಬಾಲ್ಯ ವಿವಾಹ ನಡೆಯುತ್ತವೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ಗಂಭೀರ ಪರಿಣಾಮಗಳ ಬಗ್ಗೆ ಹಾಗೂ ಕಾಯ್ದೆ ಬಗ್ಗೆ ತಿಳುವಳಿಕೆ ನೀಡಿದಾಗ ಮಾತ್ರ ಬಾಲ್ಯ ವಿವಾಹ ತಡೆಗಟ್ಟಲು ಸಾಧ್ಯ. ಬಾಲ್ಯ ವಿವಾಹದಿಂದ ಹೆಣ್ಣು ಮಕ್ಕಳ ಮೇಲೆ ಮಾನಸಿಕವಾಗಿ ದೈಹಿಕವಾಗಿ ಗಂಭೀರ ಪರಿಣಾಮ ಬೀರಿ ಜೀವನ ಹಾಳಾಗುವಂತೆ ಮಾಡುತ್ತದೆ. ಇಂತಹ ಪ್ರಕರಣಗಳು ಕಂಡು ಬಂದರೆ 1098/112 ಸಹಾಯವಾಣಿ ಮೂಲಕ ವಿಷಯಗಳನ್ನು ಅಧಿಕಾರಿಗಳಿಗೆ ತಿಳಿಸಬೇಕು ಎಂದರು.

ಬಾಲ್ಯ ವಿವಾಹ ಕಂಡುಬಂದಲ್ಲಿ ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವವರು ಸೇರಿದಂತೆ ಮಗುವಿನ ಪೋಷಕರಿಗೆ,ಮಗುವಿನ ಜವಾಬ್ದಾರಿ ಹೊತ್ತವರಿಗೆ, ಭಾಗವಹಿಸಿದ ಇತರರ ವಿರುದ್ಧ ಪ್ರಕರಣ ದಾಖಲಿಸುತ್ತಾರೆ. ಆದ್ದರಿಂದ ಮಕ್ಕಳು ಬಾಲ್ಯ ವಿವಾಹಕ್ಕೆ ಒಳಗಾಗದೆ ಸಂಪೂರ್ಣ ಶಿಕ್ಷಣ ಪಡೆಯಬೇಕು.ಬಾಲ್ಯ ವಿವಾಹವಾದಲ್ಲಿ ಸಣ್ಣ ವಯಸ್ಸಿನಲ್ಲೇ ಗರ್ಭಿಣಿಯಾಗಿ ಕಡಿಮೆ ತೂಕದ ಮಗ ಮಗುವಿನ ಜನನ,ತಾಯಿ ಮರಣ, ಶಿಶು ಮರಣ, ಬುದ್ಧಿಮಾಂದ್ಯತೆ ಮಗು ಹುಟ್ಟುವ ಸಾಧ್ಯತೆ ಇದೆ. ಜೊತೆಗೆ ವಯಸ್ಸಿಗೆ ಮೀರಿದ ಜವಾಬ್ದಾರಿ ಹೊರಿಸಿದಂತಾಗುತ್ತದೆ. ದೈಹಿಕ ಬೆಳವಣಿಗೆಗೆ ಕುಂಠಿತವಾಗುತ್ತದೆ ಎಂದು ಹೇಳಿದರು.

ರಕ್ತ ಹೀನತೆ ಉಂಟಾಗಿ ಕಡಿಮೆ ತೂಕದ ಮಗುವಿನ ಜನನದ ಸಾಧ್ಯತೆ ಇದೆ ಹಾಗೆಯೇ ಗರ್ಭ ಚೀಲಕ್ಕೆ ಪೆಟ್ಟು ಬೀಳುವ ಕಾರಣ ಎಳೆಯ ವಯಸ್ಸಿನಲ್ಲಿ ಗರ್ಭಕೋಶ ತೆಗೆಯುವ ಸಂದರ್ಭ ಒದಗುತ್ತದೆ. ಎಳೆವಯಸ್ಸಿನಲ್ಲಿ ಮುಪ್ಪಾದಂತೆ ಕಾಣುತ್ತಾರೆ. ಭಯ ಭೀತ ವಾತಾವರಣದಲ್ಲಿ ಬದುಕುತ್ತಾರೆ ಹಾಗಾಗಿ ಎಲ್ಲರೂ ಸೇರಿ ಈ ಬಾಲ್ಯ ವಿವಾಹವನ್ನು ತಡೆಗಟ್ಟಿ ಬಾಲ್ಯ ವಿವಾಹ ಮುಕ್ತ ಶ್ರೀರಂಗಪಟ್ಟಣ ತಾಲೂಕನ್ನಾಗಿ ಘೋಷಿಸಲು ನಾವೆಲ್ಲರೂ ಸನ್ನದ್ಧರಾಗೋಣ ಎಂದರು.

ನಂತರ ಬಾಲ್ಯ ವಿವಾಹ ತಡೆ ಕುರಿತು ಮಕ್ಕಳಿಂದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸೆಲ್ವಿ ಎಂ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪದ್ಮ,ಆಶಾ ಕಾರ್ಯಕರ್ತೆ ಸುಗುಣ ಹಾಗೂ ಸಹ ಶಿಕ್ಷಕರು, ಶಾಲಾ ಮಕ್ಕಳು ಇದ್ದರು.

Continue Reading

Trending

error: Content is protected !!