Politics
ಡಿ.27 ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ: ಡಿ.ಕೆ ಶಿವಕುಮಾರ್

ಬೆಂಗಳೂರು, ಡಿ.25
“27ರಂದು ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರಿಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಳಗಾವಿ ಕ್ಲಬ್ ರಸ್ತೆಯ ಸಿಪಿಇಡಿ ಶಾಲಾ ಮೈದಾನದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಬುಧವಾರ ಮಾತನಾಡಿದರು.
“ಈ ಪ್ರದೇಶವನ್ನು ಮಹಾತ್ಮಾ ಗಾಂಧೀಜಿ ನವನಗರ ಎಂದು ಘೋಷಣೆ ಮಾಡಿದ್ದೇವೆ. 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಬಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ. 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಚಾರ. ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್ ಲಾಲ್ ನೆಹರು ಅವರು ಅಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರೂ ಸೇರಿ ಬೆಳಗಾವಿಯಲ್ಲಿ ಈ ಅಧಿವೇಶನ ಮಾಡಿದ್ದರು. ಅಂದು 80 ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ.” ಎಂದು ತಿಳಿಸಿದರು.
“ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ಈ ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ. ಇಂದಿನ ಪರಿಸ್ಥಿತಿಯಲ್ಲಿ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು. ದೇಶಕ್ಕೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಈ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಿದ್ದೇವೆ” ಎಂದು ತಿಳಿಸಿದರು.
“ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು, ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಹಾಲಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ಸಂಸತ್ ಸದಸ್ಯರು, ಶಾಸಕರು, ರಾಜ್ಯದುದ್ದಗಲದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದೇವೆ” ಎಂದು ಹೇಳಿದರು.
ಕಾರ್ಯಕ್ರಮದ ವಿವರಗಳು:
“1924ರ ಅಧಿವೇಶನದ ದಾಖಲೆಗಳನ್ನು ಸಂಗ್ರಹಿಸಿದ್ದು, ಅದನ್ನು ಪುಸ್ತಕ ಮಾಡಿ ನಾಳೆ ಬಿಡುಗಡೆ ಮಾಡುತ್ತಿದ್ದೇವೆ. 26ರಂದು ಬೆಳಗ್ಗೆ 10 ಗಂಟೆಗೆ ವೀರ ಸೌಧದಲ್ಲಿ ಗಾಂಧಿ ಅವರ ಪುತ್ಥಳಿ ಅನಾವರಣ ಮಾಡಲಾಗುವುದು. ಜತೆಗೆ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಬೆಳಗ್ಗೆ 10.45ಕ್ಕೆ ಖಾದಿ ಮೇಳವನ್ನು ಉದ್ಘಾಟನೆ ಮಾಡಲಾಗುವುದು. 11.15ಕ್ಕೆ ಗಂಗಾಧರ ದೇಶಪಾಂಡೆ ಅವರ ಸ್ಮಾರಕವನ್ನು ನಾನು ಹಾಗೂ ಮುಖ್ಯಮಂತ್ರಿಗಳು ಅನಾವರಣ ಮಾಡಲಿದ್ದೇವೆ. ನಂತರ ಗಂಗಾಧರ ದೇಶಪಾಂಡೆ ಅವರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಮಧ್ಯಾಹ್ನ 3 ಗಂಟೆಗೆ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ರಾತ್ರಿ 7ಕ್ಕೆ ಎಐಸಿಸಿ ಅಧ್ಯಕ್ಷರಿಂದ ಭೋಜನಕೂಟ ಏರ್ಪಡಿಸಲಾಗಿದೆ.
27ರಂದು ಬೆಳಗ್ಗೆ 10.30ಕ್ಕೆ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆಯನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಅನಾವರಣಗೊಳಿಸಲಿದ್ದಾರೆ. ಮುಖ್ಯಮಂತ್ರಿಗಳು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಭಾಧ್ಯಕ್ಷರಾದ ಯು.ಟಿ ಖಾದರ್ ಹಾಗೂ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಮುಖಂಡತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಪಕ್ಷದ ನಾಯಕರಿಗೆ ಆಹ್ವಾನ ನೀಡಲಾಗುವುದು. ಸ್ಥಳೀಯ ನಾಯಕರು, ರಾಜ್ಯದ ಎಲ್ಲಾ ಸಂಸದರನ್ನು ನಾವು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. 12 ಗಂಟೆಗೆ ಮುಖ್ಯಮಂತ್ರಿಗಳಿಂದ ಔತನಕೂಟ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಮಾವೇಶ ನಡೆಯಲಿದೆ” ಎಂದು ತಿಳಿಸಿದರು.
ಬೆಳಗಾವಿಯಲ್ಲಿ ದೀಪಾಲಂಕಾರ
“ಬೆಳಗಾವಿ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಎಸ್ಕಾಂನವರು ಬೆಳಗಾವಿ ನಗರದಲ್ಲಿ ದೀಪಾಲಂಕಾರ ಮಾಡಿದ್ದು, ಬಹಳ ಉತ್ತಮವಾಗಿ ಅಲಂಕಾರ ಮಾಡಿದ್ದಾರೆ. ರಾಜ್ಯದ ಜನತೆ ಅದರಲ್ಲೂ ಕಿತ್ತೂರು ಕರ್ನಾಟಕ ಭಾಗದ ಜನ ಈ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. 1904ರಲ್ಲಿ ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಆರಂಭವಾಗಿದ್ದು, 1924ರಲ್ಲಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿತ್ತು. ಅದರ ಫೋಟೋಗಳು ನಮ್ಮ ಬಳಿ ಇದೆ. ವಿಜಯನಗರದ ವಿರೂಪಾಕ್ಷ ದೇಗುಲ ಮಾದರಿಯ ದೀಪಾಲಂಕಾರದ ಫೋಟೋ ಲಭ್ಯವಾಗಿದೆ. ಅದೇ ರೀತಿ ಈ ಬಾರಿಯೂ ದೀಪಾಲಂಕಾರ ಮಾಡಲಾಗಿದೆ” ಎಂದು ತಿಳಿಸಿದರು.
“ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರನ್ನು ಸೇವಾದಳದ ಕಾರ್ಯಕರ್ತರು ಪಾದಯಾತ್ರೆ ಮೂಲಕ ಸಭೆಯ ಜಾಗಕ್ಕೆ ಗೌರವಯುತ ಪಥಸಂಚಲನದ ಮೂಲಕ ಕರೆದೊಯ್ಯಲಿದ್ದಾರೆ. ನಂತರ ಸಭೆಯಲ್ಲಿ ನಮ್ಮ ನಾಯಕರು ವಿವಿಧ ವಿಚಾರಗಳ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡಲಿದ್ದಾರೆ” ಎಂದರು.
ವರ್ಷಪೂರ್ತಿ ಗಾಂಧಿ ಭಾರತ ಕಾರ್ಯಕ್ರಮ
“ಸರ್ಕಾರ ಹಾಗೂ ಪಕ್ಷದ ವತಿಯಿಂದ ರಾಜ್ಯಾದ್ಯಂತ ಈ ಶತಮಾನೋತ್ಸವ ಗಾಂಧಿ ಭಾರತ ಕಾರ್ಯಕ್ರಮ ಆಚರಿಸಲಾಗುವುದು. ಶಾಲಾ ಕಾಲೇಜುಗಳಲ್ಲಿ ಚರ್ಚಾಸ್ಪರ್ಧೆ ನಡೆಸಲಾಗುವುದು. ಗಾಂಧಿ ತತ್ವ, ಆಚಾರ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗುವುದು. ಪಕ್ಷ ಹಾಗೂ ಸರ್ಕಾರದ ವತಿಯಿಂದ ಈಗಾಗಲೇ ಗಾಂಧಿ ಜಯಂತಿ ಅಂಗವಾಗಿ ಕಳೆದ ಅಕ್ಟೋಬರ್ 2ರಂದು ಗಾಂಧಿ ನಡಿಗೆ ಪಾದಯಾತ್ರೆ ಮಾಡಿದ್ದೇವೆ, ವಿಧಾನಸೌಧದಲ್ಲಿ ಶಾಲಾ ಮಕ್ಕಳ ಜತೆ ಸಂವಾದ ಕಾರ್ಯಕ್ರಮ ಮಾಡಲಾಗಿದೆ” ಎಂದು ತಿಳಿಸಿದರು.
ಪ್ರಶ್ನೋತ್ತರ:
ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆ ಶಾಸಕರಿಗೆ ಯಾಕೆ ಜವಾಬ್ದಾರಿ ನೀಡಿಲ್ಲ ಎಂದು ಕೇಳಿದಾಗ, “ಬೆಳಗಾವಿ ಶಾಸಕರಿಗೆ ಸಂಘಟನೆಯ ಜವಾಬ್ದಾರಿ ನೀಡಿದ್ದೇವೆ. ಅವರಿಗೆ ಈಗಾಗಲೇ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ” ಎಂದು ತಿಳಿಸಿದರು.
ಕಾರ್ಯಕಾರಿ ಸಮಿತಿ ಸಭೆ ಚರ್ಚಾ ವಿಷಯಗಳೇನು ಎಂದು ಕೇಳಿದಾಗ, “ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಈ ಸಭೆಯ ಚರ್ಚಾ ವಿಷಯಗಳನ್ನು ಅಂದು ತೀರ್ಮಾನ ಮಾಡಲಿದ್ದಾರೆ. ಈಗಾಗಲೇ ಕರಡು ಸಮಿತಿ ಸಭೆ ನಡೆಯುತ್ತಿದ್ದು, ಏನೆಲ್ಲಾ ವಿಚಾರ ಚರ್ಚೆ ಮಾಡಬೇಕು ಎಂದು ಸಭೆ ಮಾಡುತ್ತಿದ್ದಾರೆ” ಎಂದು ತಿಳಿಸಿದರು.
ಅಂಬೇಡ್ಕರ್ ಗೆ ಅಪಮಾನ ಮಾಡಿರುವ ವಿಚಾರ ಕಾರ್ಯಾಕಾರಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗುವುದೇ ಎಂದು ಕೇಳಿದಾಗ, “27ರಂದು ನಡೆಯಲಿರುವ ಸಮಾವೇಶ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂದು ಹೆಸರಿಟ್ಟಿದ್ದೇವೆ” ಎಂದು ಉತ್ತರಿಸಿದರು.
2 ದಿನಗಳ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುತ್ತೀರಾ ಎಂದು ಕೇಳಿದಾಗ, “ನಾವು ಅದನ್ನು ಮಾಡಲು ಸಾಧ್ಯವಿಲ್ಲ. ಕಾರ್ಯಕ್ರಮ ನಡೆಯುವ ಮೈದಾನದ ಪಕ್ಕದಲ್ಲಿ ಶಾಲೆ ಇರುವ ಕಾರಣ ನಿಮ್ಮ ಸಲಹೆ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.
ಪೊಲೀಸ್ ಆಯುಕ್ತರ ಕಚೇರಿ ಭೇಟಿ ಬಗ್ಗೆ ಕೇಳಿದಾಗ, “ನಾನು ಹಾಗೂ ಗೃಹಮಂತ್ರಿಗಳು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಬಂದಿದ್ದೇವೆ. ಸುಮಾರು 3 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ವಾಹನಗಳ ನಿಲುಗಡೆ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿ ಬಂದಿದ್ದೇನೆ” ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ಯಾವಾಗ ಆಗಮಿಸಲಿದ್ದಾರೆ ಎಂದು ಕೇಳಿದಾಗ, “ಅವರ ಆಗಮನದ ವಿವರವನ್ನು ನಾವು ಸದ್ಯದಲ್ಲೇ ನೀಡುತ್ತೇವೆ. ಅವರು ಉಳಿದುಕೊಳ್ಳಲು ಸರ್ಕಿಟ್ ಹೌಸ್ ಹಾಗೂ ಬೇರೆ ಕಡೆ ವ್ಯವಸ್ಥೆ ಮಾಡಲಾಗಿದೆ. ಭದ್ರತೆ ದೃಷ್ಟಿಯಿಂದ ನಾವು ವ್ಯವಸ್ಥೆ ಮಾಡಿದ್ದೇವೆ” ಎಂದು ತಿಳಿಸಿದರು.
ಬಸವಣ್ಣನ ನಾಡಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದು, ಜೈ ಬಸವ ಎಂದು ಸಮಾವೇಶದ ಹೆಸರಿನಲ್ಲಿ ಸೇರಿಸಬಹುದಿತ್ತಲ್ಲವೇ ಎಂದು ಕೇಳಿದಾಗ, “ನಿಮ್ಮ ಸಲಹೆ ಬಗ್ಗೆ ಗಮನಹರಿಸುತ್ತೇವೆ” ಎಂದರು.
ಗಾಂಧಿ ಮದ್ಯಪಾನ ವಿರೋಧ ಮಾಡಿದ್ದರು ರಾಜ್ಯದಲ್ಲಿ ಮದ್ಯಪಾನ ನಿಷೇಧ ಮಾಡುತ್ತೀರಾ ಎಂದು ಕೇಳಿದಾಗ, “ಆಗಿನ ಕಾಲವೇ ಬೇರೆ, ಈಗಿನ ಕಾಲವೇ ಬೇರೆ. ಆಗ ಖಾದಿ ಹಾಕುತ್ತಿದ್ದರು. ಈಗ ನೀವೆಲ್ಲ ಬೇರೆ ಬಟ್ಟೆ ಹಾಕುತ್ತಿಲ್ಲವೇ” ಎಂದು ತಿಳಿಸಿದರು.
ಖಾದಿಗೆ ಉತ್ತೇಜನ ನೀಡುವ ಕಾರ್ಯಕ್ರಮ ಕೈಗೊಂಡಿದ್ದೀರಾ ಎಂದು ಕೇಳಿದಾಗ, “ಖಾದಿ ಪ್ರಚಾರ ಮಾಡಲು ಖಾದಿ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ” ಎಂದು ತಿಳಿಸಿದರು.
ಶೆಟ್ಟರ್ ಮನೆಗೆ ರತ್ನಗಂಬಳಿ ಹಾಸೋಣ
ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಗೌರವಯುತವಾಗಿ ಆಹ್ವಾನ ಮಾಡಿಲ್ಲ ಎಂಬ ಜಗದೀಶ್ ಶೆಟ್ಟರ್ ಅವರ ಆರೋಪದ ಬಗ್ಗೆ ಕೇಳಿದಾಗ, “ಅವರ ಮನೆವರೆಗೂ ರತ್ನಗಂಬಳಿ ಹಾಕಿಸೋಣ. ನನ್ನ ಸಮ್ಮುಖದಲ್ಲೇ ಮುಖ್ಯಮಂತ್ರಿಗಳು ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಆರ್.ಅಶೋಕ್, ನಾರಾಯಣಸ್ವಾಮಿ, ಸಭಾಪತಿಗಳಿಗೆ ಆಹ್ವಾನ ನೀಡಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಸೇರಿಸಿದ್ದೇವೆ. ಆ ಕಾರ್ಯಕ್ರಮ ಬಿಡಿ, ಅವರ ಸರ್ಕಾರ ಇದ್ದಾಗ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡಲು ಅವರಿಂದ ಸಾಧ್ಯವಾಗಿಲ್ಲ. ಅವರ ಬೀಗರಿಗೆ ಸರಿಯಾಗಿ ಅಂತ್ಯಸಂಸ್ಕಾರ ಮಾಡಲು ಸಾಧ್ಯವಾಗಲಿಲ್ಲವಲ್ಲ, ಅದರ ಬಗ್ಗೆ ಅವರು ಮೊದಲು ಮಾತನಾಡಲಿ. ಆಗ ಬಿಜೆಪಿ ನಾಯಕರರು ಯಾರೂ ಮಾತನಾಡಲಿಲ್ಲ. ವಿಶೇಷ ಮಿಲಿಟರಿ ವಿಮಾನದಲ್ಲಿ ಪಾರ್ಥೀವ ಶರೀರ ತಂದು ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ಮಾಡಲು ಆಗಲಿಲ್ಲ. ಆಗ ಶೆಟ್ಟರ್ ಅವರ ಬಾಯಿಗೆ ಏನಾಗಿತ್ತು” ಎಂದು ತಿರುಗೇಟು ನೀಡಿದರು.
ಶೆಟ್ಟರ್ ನೇತೃತ್ವದಲ್ಲಿ ಕಾರ್ಯಕ್ರಮ ಮಾಡಲಿ, ನಾನು ಸೇವಕನಂತೆ ಕೆಲಸ ಮಾಡುವೆ
ಗಾಂಧಿ ಮೇಲೆ ಪ್ರೀತಿ ಇದ್ದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಕಾರ್ಯಕ್ರಮ ಮಾಡಿದ್ದರೆ 500 ಕೋಟಿ ಖರ್ಚು ಮಾಡಲು ಸಿದ್ಧವಿದ್ದೆವು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈಗಲೂ ಮಾಡಲಿ. ನಾವು ಈ ಕಾರ್ಯಕ್ರಮವನ್ನು ಒಂದು ವರ್ಷಗಳ ಕಾಲ ಆಚರಣೆ ಮಾಡುತ್ತೇವೆ. ಅವರು ಕೂಡ ಈ ಕಾರ್ಯಕ್ರಮ ಮಾಡಲಿ ಎಂದು ಮಾಧ್ಯಮಗಳ ಮೂಲಕ ನಮ್ರತೆಯಿಂದ ಜನರ ಪರವಾಗಿ ಮನವಿ ಮಾಡುತ್ತೇನೆ. ಅವರೇ ಮುಂದಾಳತ್ವ ವಹಿಸಿಕೊಂಡು ಕಾರ್ಯಕ್ರಮ ಮಾಡಲಿ, ಅವರ ಹಿಂದೆ ನಿಂತು ನಾವು ಸೇವಕರಂತೆ ಕೆಲಸ ಮಾಡುತ್ತೇವೆ” ಎಂದರು.
ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವೆನೆ ಹೋಗಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯದಲ್ಲಿ ನಾವು ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ತಮ್ಮ ಜವಾಬ್ದಾರಿಯಿಂದ ಕಾರ್ಯಕ್ರಮ ಮಾಡಲಿ. ದೇಶದ ನೋಟಿನಲ್ಲಿ ಗಾಂಧಿ ಅವರ ಚಿತ್ರ ಏಕಿದೆ? ಅವರಿಗೆ ಗಾಂಧಿ ಬಗ್ಗೆ ಅರಿವಿಲ್ಲವೇ? ಗಾಂಧಿ ಅವರ ಹಕ್ಕನ್ನು ಬಿಜೆಪಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅವರಿಗೆ ಸ್ವಾತಂತ್ರ್ಯ ಹೋರಾಟದ ಇತಿಹಾಸವಿಲ್ಲ. ಸ್ವಾತಂತ್ರ್ಯ ಹೋರಾಟದ ಇತಿಹಾಸವಿರುವುದು ಕಾಂಗ್ರೆಸಿಗರಿಗೆ ಮಾತ್ರ” ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್ಸಿಎಲ್ ಗಮನಕ್ಕೆ ತಂದಿದ್ದೇನೆ.
Politics
ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು
“ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.
ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ” ಎಂದರು.
“ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ” ಎಂದು ತಿಳಿಸಿದರು.
ಮಾಧ್ಯಮಗಳ ಮುಂದೆ ಹೇಳಿಕೆಯಿಂದ ಪ್ರಯೋಜನವಿಲ್ಲ:
“ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ. ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ. ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದು ಕೇಳಿದರು.
ಯಾರೇ ಇರಲಿ, ಹೋಗಲಿ ಪಕ್ಷ ಇರುತ್ತದೆ
“ಈ ಪಕ್ಷವನ್ನು ಕೇವಲ ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ. ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ. ಮಹಾತ್ಮಾ ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರವನ್ನು ತ್ಯಾಗ ಮಾಡಿದ್ದಾರೆ. ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟರು ಅವರು ಯಾವ ಅಧಿಕಾರ ಪಡೆದಿದ್ದಾರೆ? ನಾವು ಅವರನ್ನೆಲ್ಲ ಸ್ಮರಿಸಬೇಕು. ಹೀಗಾಗಿ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ. ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಸಧ್ಯಕ್ಕೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆಯಲ್ಲಿದ್ದು, ಇದರ ಪರಿಶೀಲನೆಗೆ ಸುರ್ಜೆವಾಲ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ನಿಮ್ಮ ಪ್ರಶ್ನೆಗಳು ಏನೇ ಇದ್ದರೂ ಅವರನ್ನು ಕೇಳಿ” ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನೆ ಮಾಡುವುದು ಸರಿಯಲ್ಲ
ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿ ಎಂದು ಕೇಳಿದಾಗ, “ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು. ಈ ವಿಚಾರವಾಗಿ ಅವರ ಬಳಿ ಕೇಳಿ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು” ಎಂದು ತಿಳಿಸಿದರು.
Politics
ರಾಜ್ಯ ಹೆದ್ದಾರಿ ಯೋಜನೆಗಳ ಬಗ್ಗೆ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಹಲವಾರು ಮನವಿಗಳನ್ನು ಸಲ್ಲಿಸಿ ಆದಷ್ಟು ಬೇಗ ಕ್ರಮ ವಹಿಸುವಂತೆ ಕೋರಿದರು.
ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ ನಿತಿನ್ ಗಡ್ಕರಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಕುಮಾರಸ್ವಾಮಿ ಅವರು; ರಾಜ್ಯದಲ್ಲಿ ಹಲವಾರು ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಆಗಬೇಕಿದ್ದು, ಆ ಬಗ್ಗೆ ಕ್ರಮ ವಹಿಸಬೇಕು ಎಂದು ಹತ್ತಕ್ಕೂ ಹೆಚ್ಚು ಯೋಜನೆಗಳ ಮನವಿ ಪತ್ರಗಳನ್ನು ಸಲ್ಲಿಸಿದರು. ಈ ಪೈಕಿ ಕೆಲ ಯೋಜನೆಗಳ ಬಗ್ಗೆ ತಕ್ಷಣವೇ ಖುದ್ದಾಗಿ ಗಮನ ಹರಿಸುವುದಾಗಿ ಗಡ್ಕರಿ ಅವರು ಭರವಸೆ ನೀಡಿದರು.
ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಮುಂತಾದ ಜಿಲ್ಲೆಗಳ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಸಾರಿಗೆ ಸಚಿವರ ಜತೆ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು.
ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಸಾರಿಗೆ ಸಚಿವರು; ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಗಡ್ಕರಿ ಅವರು ಭರವಸೆ ನೀಡಿದರು ಎಂಬುದಾಗಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಮಂಡ್ಯದ ಹೊರ ವರ್ತುಲ ರಸ್ತೆ:
ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ ಮಾಡುವುದು, ಅದರ ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ಮಂಡ್ಯ ನಗರದ ಎಲ್ಲಾ ಜಂಕ್ಷನ್ ಗಳು, ಪಾದಚಾರಿ ಮಾರ್ಗಗಳನ್ನೂ ಅಭಿವೃದ್ಧಿ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಕೋರಿದರು.
ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.
ಜೇವರ್ಗಿ- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ ಮಾಡುವ ಬಗ್ಗೆಯೂ ಸಚಿವರು ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.
ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ; ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು; ,ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69, NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಯೋಜನೆಗಳ ಬಗ್ಗೆಯೂ ಸಚಿವರು ಸಾರಿಗೆ ಸಚಿವರ ಗಮನ ಸೆಳೆದರು.
-
Mysore19 hours ago
ಲೋಕಾಯುಕ್ತ ಬಲೆಗೆ ಬಿದ್ದ ಬೆಟ್ಟದಪುರ ಸಬ್ ಇನ್ಸ್ಪೆಕ್ಟರ್ ಶಿವಶಂಕರ್
-
Kodagu19 hours ago
ಸುಗ್ರಿವಾಜ್ಞೆ ಅನುಷ್ಠಾನಕ್ಕೂ ಮೊದಲು ಬಡವರ ಸಾಲಮನ್ನಾ ಮಾಡಲಿ: ಯುವ ಜೆಡಿಎಸ್ ಆಗ್ರಹ
-
Kodagu22 hours ago
ಯುವ ಕಾಂಗ್ರೆಸ್ಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಅನೂಪ್ ಕುಮಾರ್
-
Mysore19 hours ago
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಕೆ ಮಾಡಬೇಕು: ಪುರುಷೋತ್ತಮ ಬಿಳಿಮಲೆ
-
Mandya19 hours ago
ಮತ್ತತ್ತಿ: ಕಾವೇರಿ ನದಿಯಲ್ಲಿ ಮುಳುಗಿ ಯುವತಿಯರು ಸಾ**ವು
-
Mandya21 hours ago
ಸಕ್ಕರೆ ಕಾರ್ಖಾನೆಗಳು ರೈತರಿಗೆ 14 ದಿನದೊಳಗಾಗಿ ಹಣ ಪಾವತಿ ಮಾಡಿ: ಡಾ.ಕುಮಾರ
-
Tech12 hours ago
ಅತ್ಯಂತ ಶಕ್ತಿಶಾಲಿ ಕ್ಯಾಮೆರಾ ಹೊಂದಿರುವ ಮಧ್ಯಮ ಬೆಲೆಯ ವಿವೋ ಕಂಪನಿಯ Vivo V50 ಹೊಸ ಫೋನ್ ಬಿಡುಗಡೆ : ಬೆಲೆ ಎಷ್ಟು?
-
Hassan17 hours ago
ಹಾಸನ ವಿಮಾನ ನಿಲ್ದಾಣದ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ: ಎಚ್ಡಿ ಕುಮಾರಸ್ವಾಮಿ