State
ಇದು ಡಿಪಿಆರ್ ಬಜೆಟ್!; ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಈ ಬಜೆಟ್ ಮೂಲಕ ಸಿದ್ದರಾಮಯ್ಯ ರಾಜ್ಯದ ವಿನಾಶಕ್ಕೆ ಬುನಾದಿ ಹಾಕಿದ್ದಾರೆ.
ಬಿಜೆಪಿ ಬಜೆಟ್ ವೇಳೆ ಸಿದ್ದರಾಮಯ್ಯ ಕಿವಿಗೆ ಹೂವು ಇಟ್ಟುಕೊಂಡಿದ್ದರು; ಈಗ 7 ಕೋಟಿ ಕನ್ನಡಿಗರ ಕಿವಿಗೆ ಹೂವು ಇಟ್ಟಿದ್ದಾರೆ!!
*
ಬೆಂಗಳೂರು: ಇದು ಡಿಪಿಆರ್ ಬಜೆಟ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಟ್ಟ ಪ್ರತಿಕ್ರಿಯೆ ಇದು.
ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸರಕಾರದಿಂದ ಯವುದಾದರೂ ಯೋಜನೆ ಜಾರಿ ಮಾಡುವ ಮುನ್ನ ಸಮಗ್ರ ಯೋಜನಾ ವರದಿ (DPR) ಅಂತ ಮಾಡುತ್ತಾರೆ. ಆ DPR ಆದ ಮೇಲೆ ಏನೆಲ್ಲಾ ಆಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಜೆಟ್ ಕೂಡ ಹಾಗೆಯೇ ಇದೆ ಎಂದರು.
ಈ ಬಜೆಟ್ ಅನ್ನು ನೋಡಿದರೆ ಇದು ನಾಳೆ ಬಾ ಸರಕಾರದಂತೆ ಇದೆ ಎಂದು ಅವರು ಟೀಕಿಸಿದರು.
ಬಜೆಟ್ ಓದುವಾಗಲೇ ನನಗೆ ಅನಿಸಿದ್ದು ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ಅವರು ಗ್ಯಾರಂಟಿಯ ಗುಂಗಿನಿಂದ ಇನ್ನೂ ಹೊರಗೇ ಗೆ ಬಂದಿಲ್ಲ. 10 ತಿಂಗಳು ಕಳೆದರೂ ಇನ್ನೂ ಗ್ಯಾರಂಟಿಗಳ ಬಗ್ಗೆಯೇ ಕನವರಿಕೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.
ವಿಶ್ವಾಸ ಮೂಡುತ್ತಿಲ್ಲ:
ಸಿದ್ದರಾಮಯ್ಯ ಅವರ 15ನೇ ಬಜೆಟ್ ಇದು. ರಾಜ್ಯದ ಇತಿಹಾಸದಲ್ಲಿ 15 ಬಜೆಟ್ ಗಳನ್ನು ಮಂಡಿಸುವವರು ಮುಂದೆ ಬರುತ್ತಾರೋ ಇಲ್ಲವೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ಆಡಳಿತದಲ್ಲಿ ಸಾಕಷ್ಟು ಅನುಭವ ಇದೆ. ಆದರೆ, ಬಜೆಟ್ ನೋಡಿದರೆ ಯಾವುದೇ ರೀತಿಯ ವಿಶ್ವಾಸ ಮೂಡುತ್ತಿಲ್ಲ ಈ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.
ಬಜೆಟ್ ಮೂಲಕ ರಾಜ್ಯದ ವಿನಾಶಕ್ಕೆ ಬುನಾದಿ:
ಸರಕಾರದ ಖಜಾನೆ ಖಾಲಿ ಆಗಿದೆ ಅಂತ ನಾವು ಹೇಳಲ್ಲ. ಜನರು ಸಮೃದ್ದಿಯಾಗಿ ಖಜಾನೆ ತುಂಬಿಸಿದ್ದಾರೆ. ಈ ಬಜೆಟ್ ನೋಡಿದರೆ ಜನರು ನಾವು ಎಷ್ಟು ತಪ್ಪು ಮಾಡಿದ್ದೇವೆ ಇವರನ್ನು ಗೆಲ್ಲಿಸಿ ಎಂದು ಜನ ಅಂದುಕೊಂಡಿದ್ದಾರೆ. ಕೇಂದ್ರ ಸರಕಾರ ಅಮೃತಕಾಲ ಅಂದರೆ ಸಿದ್ದರಾಮಯ್ಯ ಅವರು ವಿನಾಶಕಾಲ ಎಂದು ಹೇಳಿದರು. ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.
ಏಳು ಕೋಟಿ ಜನರ ಕಿವಿಗೆ ಹೂವು:
ಹಿಂದಿನ ಬಿಜೆಪಿ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಾಗ ಸದನಕ್ಕೆ ಬರುವಾಗ ಕಿವಿಗೆ ಹೂವು ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು. ಈಗ ಅದೇ ಹೂವನ್ನ 7 ಕೋಟಿ ಜನರ ಕಿವಿಗೆ ಇಟ್ಟಿದ್ದಾರೆ. ಈ ಬಜೆಟ್ ನೋಡಿದರೆ ‘ನಾಳೆ ಬಾ ಸರಕಾರ ‘ ದಂತೆ ಕಾಣುತ್ತಿದೆ ಎಂದು ಅವರು ಕಿಡಿಕಾರಿದರು.
ಕೇಂದ್ರ ಸರಕಾರಕ್ಕೆ ಅವರು ನಿತ್ಯವೂ ಬೈತಾರೆ. ಆದರೆ ಅದೇ ಕೇಂದ್ರಕ್ಕೆ ಮನವಿ ಮಾಡುತ್ತೇವೆ ಅನ್ನುತ್ತಾರೆ. ಬಜೆಟ್ ಪುಸ್ತಕದ ಪ್ರತಿ ಪುಟದಲ್ಲಿಯೂ ಕೇಂದ್ರ ಸರಕಾರವನ್ನು ಬೈದಿದ್ದಾರೆ. ಒಂದು ಸುಳ್ಳನ್ನು ಸತ್ಯ ಮಾಡಬೇಕಾದಾರೆ ನೂರು ಬಾರಿ ಸುಳ್ಳು ಹೇಳು ಎನ್ನುವ ಮಾತಿದೆ. ಅದೇ ಕೆಲಸವನ್ನು ಈಗ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಇಂತಹ ಕೆಟ್ಟ ಸರಕಾರ ಈ ದೇಶದಲ್ಲಿ ಯಾವತ್ತೂ ಬಂದಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.
ಜನರ ಮೇಲೆ ಸಿಎಂಗೆ ಸಿಟ್ಟಿದೆ, ಬಜೆಟ್ ನಲ್ಲಿ ಅದು ಕಾಣುತ್ತಿದೆ:
ನಾಡಿನ ಜನರ ಮೇಲೆ ಸಿದ್ದರಾಮಯ್ಯಗೆ ಆಕ್ರೋಶ ಇದ್ದಂತೆ ಇದೆ. ಆ ಸಿಟ್ಟನ್ನು ಬಜೆಟ್ನಲ್ಲಿ ತೋರಿಸಿದ್ದಾರೆ. ಇಷ್ಟೇ ಈ ಬಜೆಟ್ ನ ಸಾರಾಂಶ. ಅಷ್ಟೇ ಅಲ್ಲದೆ, ಸಿದ್ದರಾಮಯ್ಯಗೆ ಜೆಡಿಎಸ್, ಬಿಜೆಪಿ, ಕೇಂದ್ರದ ಮೇಲೆ ಇಷ್ಟು ದಿನ ಆಕ್ರೋಶ ಇತ್ತು ಅಂತ ಅಂದುಕೊಂಡಿದ್ದೆ. ಆದರೆ ಈ ಬಜೆಟ್ ನೋಡಿದರೆ ಸಿದ್ದರಾಮಯ್ಯ ಅವರಿಗೆ 7 ಕೋಟಿ ಕನ್ನಡಿಗರ ಮೇಲೆ ಆಕ್ರೋಶ ಇದೆ ಅಂತ ಅರ್ಥವಾಗುತ್ತದೆ ಎಂದರು ಕುಮಾರಸ್ವಾಮಿ ಅವರು
State
ಸಭಾಧ್ಯಕ್ಷ ಯು ಟಿ ಖಾದರ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ

ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್ ಗುಡ್ ಫ್ರೈಡೇ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಮೌಲ್ಯ ಮಾಪನ ಕರ್ತವ್ಯಕ್ಕೆ ವಿನಾಯಿತಿ,ಸಭಾಧ್ಯಕ್ಷ ಯು ಟಿ ಖಾದರ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ
ಪವಿತ್ರ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರು ಎಸ್ ಎಸ್ ಎಲ್ ಸಿ ಮೌಲ್ಯ ಮಾಪನದ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು.ಈ ಬಗ್ಗೆ ಯು ಟಿ ಖಾದರ್ ರವರ ಬಳಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ ಶಿಕ್ಷಕಿಯರು ಸರಕಾರದ ಜೊತೆ ಮಾತುಕತೆ ನಡೆಸಿ ವಿನಾಯಿತಿ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು.
ಈ ಬಗ್ಗೆ ಶಿಕ್ಷಣ ಇಲಾಖೆಯ ಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು ಟಿ ಖಾದರ್ ಈಸ್ಟರ್ ಗುಡ್ ಫ್ರೈಡೇ ದಿನಗಳಾದ ಗುರುವಾರ,ಶುಕ್ರವಾರ ಹಾಗೂ ಭಾನುವಾರ ಕರ್ತವ್ಯಕ್ಕೆ ವಿನಾಯಿತಿ ನೀಡುವಂತೆ ಸೂಚನೆ ನೀಡಿದ್ದರು.
ಅದರಂತೆ ಶಿಕ್ಷಣ ಇಲಾಖೆಯು ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ವಿನಾಯಿತಿ ನೀಡಿ ಉಳಿದ ದಿನಗಳಲ್ಲಿ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.
State
ಸಿದ್ದರಾಮಯ್ಯ ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುತ್ತಿದ್ದಾರೆ: ಆರ್.ಅಶೋಕ್

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಆಗ್ರಹಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಆಶೋಕ್ ಅವರು, ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ತಮ್ಮ ತಕರಾರೇನು? ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕ ಮತ್ತು ಪಾರದರ್ಶಕ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನು ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?. ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ತಾವು ಈ ವರದಿ ಜಾರಿ ಬಾಣ ಬಿಟ್ಟಿರುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನೆಸಿದ್ದಾರೆ.
ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ? ಕೇವಲ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಜನಾಂಗಕ್ಕೆ ಸೇರಿದ ಉಪಜಾತಿಗಳನ್ನು ಬೇರ್ಪಡಿಸಲಾಗಿದೆ. ಇದೇ ಮಾನದಂಡ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳಿಗೆ ಏಕೆ ಅನುಸರಿಸಿಲ್ಲ? ಇದರ ಹಿಂದಿನ ಹುನ್ನಾರ ಏನು? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
State
ಮತೀಯ ದ್ವೇಷ ಹುಟ್ಟಿಸಬೇಕೆಂಬ ಏಕೈಕ ದುರುದ್ದೇಶದಿಂದ ಮೋದಿ ಸುಳ್ಳು ಹೇಳುತ್ತಿದ್ದಾರೆ: ಸಿಎಂ

ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ ವಿಷಾದನೀಯವಾದುದು. ಮತೀಯ ದ್ವೇಷ ಹುಟ್ಟಿಸಬೇಕೆಂಬ ಏಕೈಕ ದುರುದ್ದೇಶದಿಂದ ಈ ರೀತಿಯ ಸುಳ್ಳುಗಳನ್ನು ಹೇಳುವ ಮಟ್ಟಕ್ಕೆ ದೇಶದ ಪ್ರಧಾನಿ ಇಳಿಯಬಾರದಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರ ಭಾಷಣದ ವಿರುದ್ಧ ಕಿಡಿಕಾರಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾಷಣ ಮತ್ತು ಬರವಣಿಗೆಗಳ ಹನ್ನೆರಡು ಸಂಪುಟಗಳನ್ನು ಮಹಾರಾಷ್ಟ್ರ ಸರ್ಕಾರ ವರ್ಷಗಳ ಹಿಂದೆಯೇ ಪ್ರಕಟಮಾಡಿದೆ. ಅವುಗಳ ಕನ್ನಡ ಅನುವಾದವನ್ನು ನಮ್ಮ ಸರ್ಕಾರವೇ ಮುದ್ರಿಸಿದೆ. ಅಲ್ಲೆಲ್ಲಾದರೂ ಧರ್ಮಾಧಾರಿತ ಮೀಸಲಾತಿ ಬೇಡ ಇಲ್ಲವೇ ಬೇಕು ಎನ್ನುವ ಅಂಬೇಡ್ಕರ್ ಅವರ ಅಭಿಪ್ರಾಯದ ಉಲ್ಲೇಖ ಇದ್ದರೆ ಅದನ್ನು ಪ್ರಧಾನಿ ಮೋದಿಯವರು ದೇಶದ ಜನರ ಮುಂದಿಡಬೇಕು, ಇಲ್ಲವಾದರೆ ಇಂತಹದ್ದೊಂದು ಸುಳ್ಳನ್ನು ಹೇಳಿರುವುದಕ್ಕಾಗಿ ದೇಶದ ಜನರ ಕ್ಷಮೆಯಾಚಿಸಬೇಕು.
ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಖಂಡಿತ ಧರ್ಮಾಧಾರಿತವಾದುದ್ದಲ್ಲ ಎನ್ನುವ ಸರಳವಾದ ಸತ್ಯವನ್ನು ನರೇಂದ್ರ ಮೋದಿ ಅವರು ಅರ್ಥಮಾಡಿಕೊಳ್ಳದೆ ಹೋಗಿರುವುದು ದುರಂತವೇ ಸರಿ. ಮುಸ್ಲಿಮರಿಗೆ ಅವರೊಳಗಿನ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿಯುವಿಕೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡಲಾಗಿದೆಯೇ ಹೊರತು ಅದು ಧರ್ಮಾಧರಿತವಾದುದ್ದಲ್ಲ. ಇದನ್ನು ನಾನು ಹಲವು ಬಾರಿ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಹೇಳಿದ್ದೇನೆ.
ಬಿಜೆಪಿಯ ಮಿತ್ರ ಪಕ್ಷವಾದ ತೆಲುಗುದೇಶಂ ಪಕ್ಷದ ನಾಯಕರು ಮತ್ತು ಆಂದ್ರಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರೇ ಬಹಿರಂಗವಾಗಿ ಮುಸ್ಲಿಂ ಮೀಸಲಾತಿಯನ್ನು ಬೆಂಬಲಿಸುತ್ತಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ.
ಮುಸ್ಲಿಂಮರಲ್ಲಿನ ಹಿಂದುಳಿಯುವಿಕೆಯ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಸನ್ಮಾನ್ಯ ನರೇಂದ್ರ ಮೋದಿ ಅವರು ತಿಳಿದುಕೊಳ್ಳಲು ಬಯಸುವುದಾದರೆ ಈ ಬಗ್ಗೆಯೇ ಅಧ್ಯಯನ ಮಾಡಿರುವ ಸಾಚಾರ್ ಸಮಿತಿಯ ವರದಿಯನ್ನು ಪರಿಶೀಲಿಸುವ ಕಷ್ಟ ತೆಗೆದುಕೊಳ್ಳಬೇಕು. ಆ ವರದಿಯ ಪ್ರಕಾರ ಶಿಕ್ಷಣ ಮತ್ತು ಉದ್ಯೋಗದ ಕ್ಷೇತ್ರಗಳಲ್ಲಿ ಮುಸ್ಲಿಂಮರ ಪ್ರಾತಿನಿಧ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗಿಂತಲೂ ಕಡಿಮೆ ಇದೆ.
ಮುಸ್ಲಿಂ ಸಮುದಾಯದ ಹಿತರಕ್ಷಣೆಗಾಗಿಯೇ ತಲಾಖ್ ನಿಷೇಧ ಮಾಡಿದ್ದೇವೆ, ವಕ್ಪ್ ಕಾಯ್ದೆಗೆ ತಿದ್ದುಪಡಿ ಮಾಡಿದ್ದೇವೆ ಎಂದು ಒಂದೆಡೆ ತಮ್ಮನ್ನು ಮುಸ್ಲಿಂ ಸಮುದಾಯದ ಸುಧಾರಕರಂತೆ ತಮ್ಮನ್ನು ಬಿಂಬಿಸಿಕೊಳ್ಳುತ್ತಿರುವ ನರೇಂದ್ರ ಮೋದಿ ಅವರು ಇನ್ನೊಂದೆಡೆ ಬಜರಂಗ ದಳದ ಕಾರ್ಯಕರ್ತನಂತೆ ಕೋಮುದ್ವೇಷವನ್ನು ಉಗುಳುತ್ತಿರುವುದು ಅವರು ಕೂತಿರುವ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ.
ವಕ್ಪ್ ಬೋರ್ಡಿನಲ್ಲಿ ಮುಸ್ಲಿಂಮೇತರರನ್ನು ಕಡ್ಡಾಯವಾಗಿ ಸದಸ್ಯರನ್ನಾಗಿ ಮಾಡುವ ತಿದ್ದುಪಡಿ ಕೋಮುದ್ವೇಷದಿಂದ ಕೂಡಿರುವುದು ಮೇಲ್ನೋಟದಲ್ಲಿಯೇ ಸಾಬೀತಾಗುತ್ತದೆ. ಇದೇ ಮಾನದಂಡವನ್ನು ಮುಂದಿನ ದಿನಗಳಲ್ಲಿ ಹಿಂದೂ ಮಠ-ಮಂದಿರಗಳಿಗೂ ವಿಸ್ತರಿಸಬೇಕೆಂಬ ಬೇಡಿಕೆ ಹುಟ್ಟಿಕೊಂಡರೆ ಸಮಾಜದಲ್ಲಿ ಅನವಶ್ಯಕವಾಗಿ ಧರ್ಮ-ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುವುದಿಲ್ಲವೇ? ದೇಶದ ಪ್ರಧಾನಿಯಾದವರು ಇಂತಹ ಸಂಘರ್ಷಗಳನ್ನು ನಿಯಂತ್ರಿಸಲು ಪ್ರಯತ್ನಿಸಬೇಕೇ ಹೊರತು ಹುಟ್ಟುಹಾಕುವುದಲ್ಲ.
ಕರ್ನಾಟಕದಲ್ಲಿ ದಲಿತರ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಂಮರಿಗೆ ನೀಡಲಾಗಿದೆ ಎನ್ನುವ ಇನ್ನೊಂದು ಸುಳ್ಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂತಹ ಆಧಾರ-ತಲೆಬುಡ ಇಲ್ಲದ ಆರೋಪಗಳನ್ನು ಮಾಡುವಾಗ ಪ್ರಧಾನಿಯವರು ಕನಿಷ್ಠ ವಾಸ್ತವಾಂಶಗಳನ್ನು ತಿಳಿದುಕೊಳ್ಳುವ ಪ್ರಯತ್ನವನ್ನಾದರೂ ಮಾಡಬೇಕಲ್ಲವೇ?
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆಯೇ ಹೊರತು ಕಡಿಮೆ ಮಾಡಿಲ್ಲ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ಶಿಫಾರಸಿನ ಆಧಾರದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ ಮೂರರಿಂದ ಏಳಕ್ಕೆ ಹೆಚ್ಚಿಸಲಾಗಿದೆ. ಹೀಗಿರುವಾಗ ಅವರಿಂದ ಕಿತ್ತುಕೊಳ್ಳುವುದೇನು ಬಂತು? ಇಂತಹ ಮೂಲಭೂತ ಮಾಹಿತಿಯೂ ಇಲ್ಲದ ಪ್ರಧಾನಿ ಮೋದಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ತಮ್ಮ ಘನತೆಯನ್ನು ತಾವೇ ಹಾಳುಗೆಡಹುತ್ತಿದ್ದಾರೆ.
-
Mandya21 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Kodagu18 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar21 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Chamarajanagar21 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu15 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar12 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur15 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Kodagu13 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ