Connect with us

Mandya

ಹಿಂದೂ ಕಾರ್ಯಕರ್ತರಿಗೆ ನೋಟೀಸ್ : ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Published

on

ಮಂಡ್ಯ : ಕೆರಗೋಡು ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದ ಹನುಮ ಭಕ್ತರ ಮೇಲೆ ರಾಜಕೀಯ ಪ್ರಭಾವಕ್ಕೊಳಗಾಗಿ ನಿರಂತರ ದಬ್ಬಾಳಿಕೆ ಮಾಡುತ್ತಿರುವ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡುವಂತೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕೆರಗೋಡು ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಗ್ರಾಮದ ಬಸ್ ನಿಲ್ದಾಣ ಸಮೀಪದ ವೃತದಿಂದ ಮೆರವಣಿಗೆ ಹೊರಟು, ಜೈ ಶ್ರೀ ರಾಮ್ ಘೋಷಣೆಗಳೊಂದಿಗೆ ಪೊಲೀಸ್ ಠಾಣೆವರೆಗೆ ತೆರಳಿ ಪೊಲೀಸರು ನೀಡಿದ್ದ ನೋಟಿಸ್ ಗೆ ಉತ್ತರಿಸಿದರು.

ಕೆರಗೋಡು ಗ್ರಾಮದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಹನುಮ ಧ್ವಜ ಸ್ತಂಬದಲ್ಲಿ ಹನುಮ ಧ್ವಜ ಹಾರಾಟ ಮಾಡಲಾಗಿತ್ತು, ಇದಕ್ಕೆ ಜಿಲ್ಲಾಡಳಿತದಿಂದ ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಹನುಮ ಧ್ವಜ ಹಾರಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದಾಗ ಹನುಮ ಧ್ವಜ ಉಳಿವಿಗಾಗಿ ಸಾವಿರಾರು ಹನುಮ ಭಕ್ತರು ಹೋರಾಟ ಮಾಡಿದ್ದರು.

ರಾಜ್ಯ ಸರ್ಕಾರ ಹಾಗೂ ಸಚಿವ, ಶಾಸಕರ ಒತ್ತಡಕ್ಕೆ ಮಣಿದು ಹನುಮ ಧ್ವಜ ತೆರವು ಮಾಡಿ ರಾಷ್ಟ್ರಧ್ವಜ ಹಾರಿಸಿದ್ದರು. ಅಂದು ಹೋದ ಅಧಿಕಾರಿಗಳು ಇಂದಿಗೂ ಸಹ ಇತ್ತ ತಲೆ ಹಾಕದೆ ರಾಷ್ಟ್ರಧ್ವಜವನ್ನು ಸಹ ಹಾರಿಸದೆ ಅಗೌರವ ತೋರುತ್ತಿದ್ದಾರೆ.

ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದವರ ಮೇಲೆ ಶಾಸಕರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಒತ್ತಡಕ್ಕೆ ಒಳಗಾಗಿರುವ ಪೊಲೀಸರು ಅಮಾಯಕರ ಮೇಲೆ ದೌರ್ಜನ್ಯ,ದಬ್ಬಾಳಿಕೆ ಮಾಡುತ್ತಿದ್ದಾರೆ. ಜೈ ಶ್ರೀ ರಾಮ್ ಘೋಷಣೆ ಕೂಗಿದವರನ್ನು ಠಾಣೆಗೆ ಕರೆಸಿ ಬೆದರಿಕೆ ಹಾಕಲಾಗುತ್ತಿದೆ. ಅಷ್ಟೇ ಅಲ್ಲದೆ ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದ ಬಾಲಕೃಷ್ಣ, ಶಿವು, ಕಾರ್ತಿಕ್ ಹಾಗೂ ಹರೀಶ್ ಎಂಬುವವರಿಗೆ ನಿಮ್ಮನ್ನು ಏಕೆ ರೌಡಿ ಶೀಟರ್ ಪಟ್ಟಿಗೆ ಸೇರಿಸಬಾರದು ಎಂದು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೌಡಿಶೀಟರ್ ಪಟ್ಟಿಗೆ ಸೇರ್ಪಡೆ ಮಾಡಲು ಅದಕ್ಕೆ ಆದ ನಿಯಮಾವಳಿಗಳಿವೆ. ಆದರೆ ಅದನ್ನೆಲ್ಲ ಗಾಳಿಗೆ ತೂರಿ ಯಾವುದೇ ಕ್ರಿಮಿನಲ್ ಅಪರಾಧ ಇಲ್ಲದಿದ್ದರೂ, ಹನುಮ ಧ್ವಜ ಹೋರಾಟದಲ್ಲಿ ಬಾಗಿಯಾಗಿದ್ದಾರೆ ಎಂಬ ಏಕೈಕ ಕಾರಣಕ್ಕೆ ರೌಡಿಶೀಟರ್ ಪಟ್ಟಿಗೆ ಸೇರಿಸಲು ಪೋಲಿಸ್ ಅಧಿಕಾರಿಗಳು ಮುಂದಾಗಿದ್ದಾರೆ. ಇದು ಯಾವ ನ್ಯಾಯ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರಲ್ಲದೆ, ಕೆರಗೋಡು ಠಾಣೆಯ ಸಬ್ ಇನ್ ಸ್ಪೆಕ್ಟರ್, ಸರ್ಕಲ್ ಇನ್ ಸ್ಪೆಕ್ಟರ್ ಹಾಗೂ ಡಿವೈಎಸ್ ಪಿ ವಿನಾಕಾರಣ ಕಿರುಕುಳ ನೀಡುತ್ತಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗುರಿ ಮಾಡಲಾಗಿದೆ ಎಂದು ಕಿಡಿಕಾರಿದರು.

ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ ಯುವಕರನ್ನು ಹೆದರಿಸಿ,ಬೆದರಿಸುವ ಕೆಲಸಕ್ಕೆ ಪೊಲೀಸರು ಮುಂದಾಗಿದ್ದು, ಹನುಮಧ್ವಜ ವಿಚಾರದಲ್ಲಿ ಜಿಲ್ಲಾಡಳಿತ ನಮ್ಮಗಳ ವಿರುದ್ಧ ನಿಂತಾಗ ಕಾನೂನಾತ್ಮಕ ಹೋರಾಟದಿಂದ ನ್ಯಾಯ ಪಡೆಯಲು ಮುಂದಾಗಿದ್ದು, ಆದರೆ ಪೊಲೀಸರು ಕೆರಗೋಡು ಮತ್ತು ಸುತ್ತಮುತ್ತಲ ಗ್ರಾಮದ ಯುವಜನರಲ್ಲಿ ಬೀತಿ ವಾತಾವರಣ ಸೃಷ್ಟಿಸುತ್ತಿದೆ. ಈ ಕೂಡಲೇ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದರು.

ಪೊಲೀಸರ ನೋಟಿಸ್ ಗೆ ಉತ್ತರ ನೀಡುತ್ತೇವೆ, ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಮಾಯಕ ಯುವಕರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲು ಮುಂದಾದರೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಬಿ.ಆರ್.ರಾಮಚಂದ್ರ, ರಘು ನಂದನ್, ವಸಂತಕುಮಾರ್, ಯೋಗೇಶ್, ನರಸಿಂಹಮೂರ್ತಿ, ವಿರೂಪಾಕ್ಷ, ಬಾಲು ಚಿಕ್ಕ ಬಳ್ಳಿ, ಶ್ರೀನಿವಾಸ್ ಸೇರಿತೆ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಜ.23 ರಂದು ಬೃಹತ್ ರಕ್ತದಾನ ಶಿಬಿರ : ನಟರಾಜ್

Published

on

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಭಾಷ್‌ ಚಂದ್ರಬೋಸ್ ಅವರ ೧೨೮ನೇ ಜನ್ಮದಿನದ ಸ್ಮರಣಾರ್ಥ ನಿರಂತರ ೨೪ ಗಂಟೆಗಳ ಕಾಲ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜನವರಿ ೨೩ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೀವಧಾರೆ ಟ್ರಸ್ಟ್‌ನ ನಟರಾಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್‌ನ ವತಿಯಿಂದ ಇದುವರೆಗೂ ೩೪೪ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು, ೪೩ ಸಾವಿರ ಯೂನಿಟ್ ರಕ್ತವನ್ನು ಸಂಗ್ರಹಿಸಿ ಯೋಧರ ಆಸ್ಪತ್ರೆಯನ್ನೂ ಒಳಗೊಂಡಂತೆ ಸರ್ಕಾರಿ ರಕ್ತನಿಧಿ ಕೇಂದ್ರಗಳಿಗೆ ನಿರಂತರವಾಗಿ ಕಾಲಕಾಲಕ್ಕೆ ಸಂಗ್ರಹಿಸಿದ ರಕ್ತ ಒದಗಿಸುತ್ತಿದೆ ಎಂದರು.

ಜನವರಿ ೨೩ರ ಬೆಳಿಗ್ಗೆ ೦೮ ಪ್ರಾರಂಭವಾಗುವ ರಕ್ತದಾನ ಶಿಬಿರ ಜನವರಿ ೨೪ರ ಬೆಳಿಗ್ಗೆ ೦೮ ಗಂಟೆ ವರೆಗೂ ನಡೆಯಲಿದೆ. ರಕ್ತದಾನ ಶಿಬಿರ ಸಂಬಂಧ ೧೨೮ ಹಳ್ಳಿಗಳಿಗೆ ಭೇಟಿ ಪ್ರಚಾರ ಮಾಡಲಾಗಿದೆ. ಜನವರಿ ೧೮ರಂದು ನಗರದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ಮೂಲಕ ಪ್ರಚಾರ ಮಾಡಲಾಗಿದೆ. ಟ್ರಸ್ಟ್‌ನಿಂದ ನಡೆಯುವ ೩೪೫ನೇ ರಕ್ತದಾನ ಶಿಬಿರದಲ್ಲಿ ೧೫೦೦ ಯುನಿಟ್ ಸಂಗ್ರಹವಾಗುವ ನಿರೀಕ್ಷೆಯಿದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕಾರ್ಯಕ್ರಮದಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಲಾಗಿದ್ದು, ಸರ್ಕಾರಿ ಆಸ್ಪತ್ರೆಯಿಂದ ರಕ್ತ ಸಂಗ್ರಹಿಸಲು ವೈದ್ಯ ಸಿಬ್ಬಂದಿಗಳು ೩ ಪಾಳಯದಲ್ಲಿ ಕಾರ್ಯನಿರ್ವಹಿಸಲಿದ್ದು, ಸರ್ಕಾರಿ ಆಸ್ಪತ್ರೆಯಿಂದ ೧೫೦ ಹಾಸಿಗೆ ವ್ಯವಸ್ಥೆಯನ್ನು ಒದಗಿಸಲಾಗುವುದು. ಸಂಗ್ರಹವಾದ ರಕ್ತವನ್ನು ಸೈನಿಕ ಆಸ್ಪತ್ರೆಗೆ ಬೇಕಾಗಿರುಷ್ಟು ತಲುಪಿಸಲಾಗುವುದು. ಉಳಿದ ಎಲ್ಲ ರಕ್ತವನ್ನು ಸರ್ಕಾರಿ ರಕ್ತ ನಿಧಿ ಕೇಂದ್ರ ಹಾಗೂ ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಗಣೇಶ್, ಅಭಿ, ಮಹದೇವ, ಉದಯ್, ರವಕುಮಾರ್, ಕುಮಾರ್, ಅನ್ವೇಶ್ ಇದ್ದರು.

Continue Reading

Mandya

ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿವರ್ಷ ಒಂದು ತಾಲ್ಲೂಕಿಗೆ ಅಂದಾಜು ರೂ 220 ಕೋಟಿ : ಎನ್ ಚಲುವರಾಯಸ್ವಾಮಿ

Published

on

ಮಂಡ್ಯ : ಹಲವಾರು ವಿರೋಧಗಳ ನಡುವೆ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಯಿತು. ಈ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಅವರು ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಜನರು ಕಚೇರಿಗಳಿಗೆ ಅಲೆದಾಟುವಂತಿಲ್ಲ‌. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತದೆ ಎಂದರು.

ಸಮಸ್ಯೆ ಪರಿಹಾರವಾದ ನಂತರ ಪರಿಹಾರವಾಗಿದೆ ಎಂದು ಯಾರು ಅಭಿನಂದನೆ ಸಲ್ಲಿಸುವುದಿಲ್ಲ. ಹೊಸ ಸಮಸ್ಯೆಗಳ ಪರಿಹಾರಕ್ಕೆ ಅರ್ಜಿ ಸಲ್ಲಿಕೆಯಾಗುತ್ತದೆ‌. ಸಾರ್ವಜನಿಕರ ಕೆಲಸ ಮಾಡುವುದು ಜನಪ್ರತಿನಿಧಿಗಳ ಕೆಲಸ ಎಂಬ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು ಎಂದರು.

ಕರ್ನಾಟಕ ರಾಜ್ಯ ಸಾರ್ವಜನಿಕರಿಗೆ ನೀಡುವ ಕಾರ್ಯಕ್ರಮಗಳಿಗೆ ಸಂಗ್ರಹಿಸುವ ಫಲಾನುಭವಿಗಳ ವಿವರಗಳ ಬಗ್ಗೆ ಬೇರೆ ರಾಜ್ಯಗಳು ಮೆಚ್ಚುಗೆ ವ್ಯಕ್ತಪಡಿಸಿ, ವಿವರ ಸಂಗ್ರಹಿಸಲು ರೂಪಿಸಿರುವ ತಂತ್ರಜ್ಞಾನ ವನ್ನು ಹಂಚಿಕೊಳ್ಳುವಂತೆ ಮನವಿ ಸಲ್ಲಿಸಿರುವುದು ಹರ್ಷದಾಯಕ ವಿಷಯವಾಗಿದೆ ಎಂದರು.

ಕೊಪ್ಪ ಹೋಬಳಿಯಲ್ಲಿ ಇದು ಎರಡನೇ ಬಾರಿಗೆ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸ್ವೀಕರಿಸುವ ಕುಂದು ಕೊರತೆ ಅರ್ಜಿಗಳನ್ನು ಕಾನೂನು ಚೌಕಟ್ಟಿನಲ್ಲಿ ಪರಿಹರಿಸಲಾಗುವುದು ಎಂದರು.

ಕೊಪ್ಪದಲ್ಲಿ ಬೇಡಿಕೆ ಇರುವ ಪೊಲೀಸ್ ಠಾಣೆ ನಿರ್ಮಾಣ, ನಾಡ ಕಚೇರಿ ಹಾಗೂ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದಲ್ಲದೇ ಪಂಚಾಯಿತಿ ಕಚೇರಿ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಸುಮಾರು 1 ಕೋಟಿ ವೆಚ್ಚವಾಗಲಿದೆ ಎಂದರು.

ಸಹಕಾರ ಸಂಘದ ಮೂಲಕ ರೂ 1 ಕೋಟಿ ಸಾಲ

ಕೊಪ್ಪ ಹಾಗೂ ಸುತ್ತಮುತ್ತಲಿನ 16 ಹಳ್ಳಿಗಳ ಕೃಷಿ ಪತ್ತಿನ ಸಹಕಾರ ಸಂಘ ಹಲವಾರು ಕಾರಣಗಳಿಂದ ಕೆಲಸ ಸ್ಥಗಿತಗೊಳಿಸಿತ್ತು. ಇದನ್ನು ಸರಿಪಡಿಸಿ ರೈತರು ಹಾಗೂ ಮಹಿಳೆಯರಿಗೆ ಆರ್ಥಿಕವಾಗಿ ಸದೃಢರಾಗಲು ಬಡ್ಡಿ ರಹಿತವಾಗಿ 1 ಕೋಟಿ ರೂ ವರೆಗೆ ಸಾಲ ನೀಡಲಾಗಿದೆ. ಇದಕ್ಕೆ ನಬಾಡ್೯ ವಿಧಿಸುವ ಬಡ್ಡಿಯನ್ನು ಸರ್ಕಾರ ಭರಿಸುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ಹೈನುಗಾರಿಕೆ ಕೃಷಿ ಸಂಬಂಧಿಸಿದ ಇಲಾಖೆಗಳ ಮೂಲಕ ಕೊಪ್ಪ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಸುಮಾರು 2000 ಫಲಾನುಭವಿಗಳಿಗೆ 1.96 ಕೋಟಿ ರೂ ಸಹಾಯಧನ ನೀಡಲಾಗಿದೆ ಎಂದರು.

ಪೌತಿ ಖಾತೆ ಆಂದೋಲನಕ್ಕೆ ಸಂಬಂಧಿಸಿದಂತೆ ಕಳೆದ ಒಂದುವರೆ ತಿಂಗಳಿನಿಂದ ಕೊಪ್ಪ ವ್ಯಾಪ್ತಿಯಲ್ಲಿ 1275 ಅರ್ಜಿ ಸ್ವೀಕರಿಸಿ ಸುಮಾರು 443 ಪೌತಿ ಖಾತೆ ಮಾಡಿಕೊಡಲಾಗಿದೆ. ಪೌತಿ ಖಾತೆ ಮಾಡಿಸಿಕೊಳ್ಳಲು ರೈತರು ಸಹ ಆಸಕ್ತಿ‌ ತೋರಿಸಿ ಮುಂದೆ ಬರಬೇಕು. ದಾಖಲೆ, ಆರ್.ಟಿ.ಸಿ ಗಳು ಸರಿಯಿದ್ದರೆ ಮಾತ್ರ ಬ್ಯಾಂಕ್ ಅಥವಾ ಸೊಸೈಟಿಗಳಿಂದ ಸಾಲ ಪಡೆಯಲು ಸಾಧ್ಯ ಎಂದರು.

ರೈತರ ಭೂಮಿ ಹಾಗೂ ಇನ್ನಿತರೆ ದಾಖಲೆಗಳನ್ನು ಕಂದಾಯ ಇಲಾಖೆ ಡಿಜಟಲ್ ಮಾಡುವ ಭೂ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ 36 ಲಕ್ಷ ದಾಖಲೆಗಳನ್ನು ಡಿಜಟಲೀಕರಣ ಮಾಡಲಾಗಿದೆ ಎಂದರು.

ಕಂದಾಯ ಇಲಾಖೆಯಲ್ಲಿ ಜನಪರ ಕೆಲಸಗಳು ನಡೆಯುತ್ತಿದ್ದು, ಸುಮಾರು 67 ಲಕ್ಷ ಪೌತಿ ಖಾತೆ, ಹಲವಾರು ವರ್ಷಗಳಿಂದ ಬಾಕಿ ಇದ್ದ ಕೋಟ್೯ ಪ್ರಕರಣಗಳನ್ನು ಒಂದು ವರ್ಷದಲ್ಲಿ 16000 ವಿಲೇವಾರಿ ಮಾಡಲಾಗಿದೆ. 18 ಲಕ್ಷ ಆರ್.ಟಿ.ಸಿ ಗಳಿಗೆ ಆಧಾರ್ ಜೋಡಣೆ ಕೆಲಸ ಮಾಡಲಾಗಿದೆ ಎಂದರು.

ಇತಿಹಾಸದಲ್ಲೇ ಮೊದಲ ಬಾರಿಗೆ ನಿರಂತರ 154 ದಿನಗಳು ಕೆ.ಆರ್.ಎಸ್ ನಲ್ಲಿ ನೀರು ತುಂಬಿರುವುದು ಸಂತೋಷದ ವಿಷಯವಾಗಿದೆ. ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗಿದೆ ಬೆಳಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲು ಪ್ರಾರಂಭಿಸಲಾಗಿದೆ. ರೈತರು ಬಿತ್ತನೆ ಕೆಲಸಗಳನ್ನು ಪ್ರಾರಂಭಿಸುವಂತೆ ತಿಳಿಸಿದರು.

ರೈತರಿಗೆ ಹೆಚ್ಚು ಉಪಯುಕ್ತವಾಗಲಿ ಎಂದು ರೈತರು ಹೆಚ್ಚಿರುವ ಜಿಲ್ಲೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ನಲ್ಲಿ ಪ್ರಾರಂಭಿಸಲಾಗುವುದು. ಇಲ್ಲಿ ಕೃಷಿ ತಜ್ಞರು ರೈತರಿಗೆ ಹಲವಾರು ಉಪಯುಕ್ತ ಮಾಹಿತಿಯನ್ನು ನೀಡಲಿದ್ದಾರೆ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜನರ ಸಮಸ್ಯೆಗಳನ್ನು ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಎರಡನೇ ಬಾರಿಗೆ ಕೊಪ್ಪದಲ್ಲಿ ಆಯೋಜಿಸಲಾಗಿದ್ದು, ಈ ಹಿಂದೆ ಸ್ವೀಕೃತವಾರ ಕುಂದು ಕೊರತೆ ಅರ್ಜಿಗಳಿಗೆ ಪರಿಹಾರ ಒದಗಿಸಲಾಗಿದೆ.

ಕಂದಾಯ ಇಲಾಖೆ ಚುರುಕಾಗಿ ಕೆಲಸ ನಿರ್ವಹಿಸುತ್ತಿದ್ದು, ಸ್ವಯಂ ಪ್ರೇರಿತವಾಗಿ ಪೌತಿ ಖಾತೆ ಆಂದೋಲನ, ಪೋಡಿ ದುರಸ್ತಿ, ಆಧಾರ ಸೀಡಿಂಗ್ ಕೆಲಸಗಳನ್ನು ಮನೆ ಮನೆಗೆ ಭೇಟಿ ನೀಡಿ ದಾಖಲೆ ಸಂಗ್ರಹಿಸಿಕೊಂಡು ಮಾಡಿಕೊಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ಉಪವಿಭಾಗಾಧಿಕಾರಿ ಶಿವ ಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಕೊಪ್ಪದಲ್ಲಿ ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡ ಉದ್ಘಾಟನೆ

Published

on

ಮಂಡ್ಯ : ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಕೊಪ್ಪದಲ್ಲಿ ನಿರ್ಮಿಸಲಾಗಿದ್ದ ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕೆಳೆದ ಐದು ವರ್ಷದಿಂದ ದುರಸ್ಥಿಯಲ್ಲಿ ಇದ್ದ ಕೊಪ್ಪ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡವನ್ನು ಕೆಡವಿ, ರೈತರಿಗೆ ಸಾರ್ವಜನಿಕರು ಅನುಕೂಲವಾಗುವಂತೆ
ನೂತನ ಕಟ್ಟಡ ನಿರ್ಮಿಸಿರುವುದು ಸಂತಸ ಎಂದು ಹೇಳಿದರು.

ಇದೇ ವೇಳೆ ವ್ಯವಸಾಯ ಸಂಘದ ಸದಸ್ಯರು ವಿವಿಧ ಬೇಡಿಕೆಗಳನ್ನು ಕೃಷಿ ಸಚಿವರ ಮುಂದಿಟ್ಟರು. ಮುಂದಿನ ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂತೋಷ್, ಕೆ, ಆರ್ ಪೇಟೆ ಮಾಜಿ ಶಾಸಕ ಚಂದ್ರಶೇಖರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Trending

error: Content is protected !!