Connect with us

State

ಕೊಬ್ಬರಿ ಬೆಳೆಗಾರರಿಗೆ ಕ್ವಿಂಟಾಲಿಗೆ 1500ರೂ: ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ತುಮಕೂರು: ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.

ಒಟ್ಟು ನಮ್ಮ ಸರ್ಕಾರದಿಂದ ಕ್ವಿಂಟಾಲಿಗೆ 1500 ರೂ.ಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದರು. ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರ್ಕಾರ ಕೊಬ್ಬರಿ ಬೆಳೆಗಾರರಿಗೆ 1500 ಹೆಚ್ಚಾಗಿ ನೀಡಲಿದೆ ಎಂದರು.

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ರಜೆ ಇಲ್ಲ
ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಚಾರ ಮಾಡಲಾಗುವುದು
ಹಿಂದಿನ ಸರ್ಕಾರ ಜನವರಿ 21 ನ್ನು ದಾಸೋಹ ದಿನ ಎಂದು ಆಚರಿಸಲು ಘೋಷಣೆ ಮಾಡಿದ್ದರ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ಯಾವಾಗ ಮಾಡಿದರು, ಯಾವ ಸಂದರ್ಭದಲ್ಲಿ ಹಾಗೂ ಯಾಕಾಗಿ ಮಾಡಿದರು ಎಂದು ನನಗೆ ತಿಳಿದಿಲ್ಲ , ವಿಚಾರ ಮಾಡಲಾಗುವುದು ಎಂದರು.

ವಿಶೇಷ ಪೂಜೆ
ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯಾಗುತ್ತಿದ್ದು ಮುಜರಾಯಿ ಇಲಾಖೆ ವತಿಯಿಂದ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ದೇವಸ್ಥಾನವನ್ನು ನಾಳೆ ಉದ್ಘಾಟಿಸುತ್ತಿರುವುದಾಗಿ ತಿಳಿಸಿದರು.

ನಿಷೇಧ ಇಲ್ಲ
ತಮಿಳುನಾಡಿನಲ್ಲಿ ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ನೆರಪ್ರಸಾರವನ್ನು ನಿಷೇಧ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡಿನ ಬಗ್ಗೆ ನಾನು ಯಾಕೆ ಮಾತನಾಡಲಿ. ಇಲ್ಲಿ ಹಾಗೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕುಣಿಗಲ್ ಸ್ಟಡ್ ಫಾರಂ ಸ್ಥಳಾಂತರ ಕ್ಕೆ ಸಲಹೆ
ಟಿಪ್ಪು ಸುಲ್ತಾನರ ಕಾಲದ ಕುಣಿಗಲ್ ಸ್ಟಡ್ ಫಾರಂನ್ನು ಸರ್ಕಾರ ಮುಚ್ಚುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಬೆಂಗಳೂರಿನ ಹೃದಯ ಭಾಗದಲ್ಲಿ ರೇಸ್ ಕೋರ್ಸ್ ಇದ್ದು, ಅಲ್ಲಿಗೆ ಸ್ಥಳಾಂತರ ಮಾಡಿ ಎಂದು ಸಲಹೆ ನೀಡಿದ್ದೇನೆ ಎಂದು ತಿಳಿಸಿದರು. ಕುಣಿಗಲ್ ನಲ್ಲಿ 400 ಏಕರೆಯಷ್ಟು ಜಮೀನು ಇದ್ದು, ಇಲ್ಲಿ 80 ಏಕರೆ ಯಷ್ಟಿದೆ. ಅಲ್ಲಿ ಸ್ಥಳ ನೀಡುವುದಾಗಿ ಹೇಳಿದ್ದೇನೆ ಎಂದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಅಲ್ಲಿ ಇಂಟಿ ಗ್ರೇಟೆಡ್ ಟೌ ನ್ ಶಿಪ್ ಪ್ರಾರಂಭಿಸುವ ಬಗ್ಗೆ ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿಗಳು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

State

ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಉಗ್ರರನ್ನು ಸದೆಬಡೆಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲ

ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 24: ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಅಮಾಯಕ ಜನರನ್ನು ಕೊಲ್ಲುವುದು ಹ್ಯೇಯಕೃತ್ಯ

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ,ಜ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.

ಕನ್ನಡಿಗರಾದ ಭರತ್ ಭೂಷಣ್ , ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲಿಸಿದ್ದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧುಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.

ಪಹಲ್ಗಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾಗಿರುವ ಮಂಜುನಾಥರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Continue Reading

State

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಶಿವಮೊಗ್ಗ ಮೂಲದ ಉದ್ಯಮಿ ಬಲಿ

Published

on

ಶಿವಮೊಗ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ.

ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತ ದುರ್ದೈವಿ. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ.

ಈ ಕುರಿತು ಮಾತನಾಡಿರುವ ಪಲ್ಲವಿ, ಏಪ್ರಿಲ್ ೧೯ರಂದು ಪ್ರವಾಸಕ್ಕೆ ಬಂದಿದ್ವಿ. ನನ್ನ ಕಣ್ಣೆದುರಿಗೆ ನನ್ನ ಪತಿ ಮೃತಪಟ್ಟಿದ್ದಾರೆ. ನನ್ನ ಗಂಡನನ್ನ ಸಾಯಿಸಿ ನನ್ನ ಮಗನಿಗೆ ಬೈದು ಹಲ್ಲೆ ಮಾಡಿದ್ದಾರೆ. ನನ್ನ, ನನ್ನ ಮಗನನ್ನೂ ಕೊಂದು ಬಿಡು ಎಂದು ಹೇಳಿದ್ವಿ. ನಿನ್ನ ಕೊಲ್ಲಲ್ಲ ಹೋಗಿ ಮೋದಿಗೆ ಹೇಳು ಎಂದು ಹೇಳಿದರು. ನನ್ನ ಪತಿ ಕೊಂದು ಉಗ್ರರು ಅಲ್ಲೇ ಓಡಾಡುತ್ತಿದ್ದರು ಎಂದು ಹೇಳಿದರು.

ಮಂಜುನಾಥ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ಶಿವಮೊಗ್ಗದ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು, ಮಂಜುನಾಥ್ ಪತ್ನಿ ಪಲ್ಲವಿಯವರು ಮಲ್ನಾಡ್ ಅಡಕೆ ಮಾರ್ಕೆಟಿಂಗ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಬೀರೂರು ಬ್ರ್ಯಾಂಚ್‌ನಲ್ಲಿ ಮ್ಯಾನೇಜರ್ ಆಗಿದ್ದಾರೆ.

ಗುಂಡಿನ ದಾಳಿಯಲ್ಲಿ 12 ಮಂದಿಗೆ ಗಾಯ: ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಐದಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಇದುವರೆಗೆ ಕೇವಲ ಇಬ್ಬರ ಸಾವಿನ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಘಟನೆ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ.

Continue Reading

State

ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಎಂದ ಸಿಎಂ

Published

on

ಬೆಂಗಳೂರು: ವಿಂಗ್‌ ಕಮಾಂಡರ್‌ ಶಿಲಾದಿತ್ಯ ಬೋಸ್‌ ಹಾಗೂ ಟೆಕ್ಕಿ ವಿಕಾಸ್‌ ಕುಮಾರ್‌ ನಡುವೆ ನಿನ್ನೆ ( ಏಪ್ರಿಲ್‌ 21 ) ನಡೆದ ರೋರ್‌ ರೇಜ್‌ ಪ್ರಕರಣ ಸದ್ಯ ರಾಜಕೀಯ ನಾಯಕರವರೆಗೂ ತಲುಪಿದೆ.

ಅಸಲಿಗೆ ತಾನೇ ವಿಕಾಸ್‌ ಕುಮಾರ್‌ ಬೈಕ್‌ಗೆ ಕಾರು ಟಚ್‌ ಮಾಡಿ ಅದನ್ನು ಮುಚ್ಚಿಟ್ಟು ಕನ್ನಡಿಗರು ಹಲ್ಲೆ ಮಾಡಿದರು ಎಂದು ವಿಡಿಯೊ ಮಾಡಿ ಸುಳ್ಳು ಆರೋಪ ಮಾಡಿದ್ದ ವಿಂಗ್‌ ಕಮಾಂಡರ್‌ ಬೋಸ್‌ ನಿಜ ಬಣ್ಣ ಪೊಲೀಸ್‌ ತನಿಖೆ ಹಾಗೂ ಸಿಸಿಟಿವಿ ದೃಶ್ಯಗಳಿಂದ ಬಯಲಾಗಿತ್ತು.

ಅಲ್ಲಿಯ ತನಕ ವಿಂಗ್‌ ಕಮಾಂಡರ್‌ ಯೋಧ ಎಂಬ ಪದ ಬಳಸಿ ಕಟ್ಟಿದ್ದ ಸಿಂಪತಿ ಎಲ್ಲ ನೆಲಕಚ್ಚಿತ್ತು. ಕನ್ನಡಿಗನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಸುಳ್ಳು ವಿಡಿಯೊ ಮಾಡಿದ್ದ ಬೋಸ್‌ ವಿರುದ್ಧವೇ ಕನ್ನಡಪರ ಸಂಘಟನೆಗಳು ದೂರು ನೀಡಿದರು. ಸದ್ಯ ವಿಕಾಸ್‌ ಸಹ ಬೋಸ್‌ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಪ್ರತಿಕ್ರಿಯಿಸಿದ್ದು ಯಾವುದೇ ಹುದ್ದೆಯಲ್ಲಿರಲಿ ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಮಿಷನರ್‌ಗೆ ಆದೇಶ ಹೊರಡಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸಿಎಂ ಟ್ವೀಟ್‌: ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ.

ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ.

ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ.

ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ.

Continue Reading

Trending

error: Content is protected !!