Connect with us

Location

ಲಿಂಗಾಯಿತರಿಗೆ ಅಧಿಕಾರ ತಪ್ಪಿಸಿ ಅನ್ಯಾಯ ಮಾಡಿದ್ದ ಎಚ್ ಡಿ ಕುಮಾರಸ್ವಾಮಿ : ಸಚಿವ ಎಂ.ಬಿ ಪಾಟೀಲ್*

Published

on

*ಲಿಂಗಾಯಿತರಿಗೆ ಅಧಿಕಾರ ತಪ್ಪಿಸಿ ಅನ್ಯಾಯ ಮಾಡಿದ್ದ ಎಚ್ ಡಿ ಕುಮಾರಸ್ವಾಮಿ : ಸಚಿವ ಎಂ.ಬಿ ಪಾಟೀಲ್*

ಮಂಡ್ಯ :- ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವೀರಶೈವ ಲಿಂಗಾಯತ ಸಮುದಾಯಕ್ಕೆ ರಾಜಕೀಯ ಕ್ಷೇತ್ರದಲ್ಲಿ ಉನ್ನತ ಅಧಿಕಾರ ತಪ್ಪಿಸುವ ಮೂಲಕ ಬಹುದೊಡ್ಡ ಅನ್ಯಾಯ ಮಾಡಿದ್ದನ್ನು ಸಮುದಾಯದ ಜನತೆ ಮರೆಯಬಾರದು ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

ನಗರದ ಕನಕ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ವೀರಶೈವ – ಲಿಂಗಾಯಿತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, 2008 ರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆ ಮಾಡಿದವು.

ಮೊದಲ ಅವಧಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿ ಅಧಿಕಾರ ಅನುಭವಿಸಿದರು, ಒಪ್ಪಂದದಂತೆ ಇನ್ನುಳಿದ 20 ತಿಂಗಳ ಅವಧಿಗೆ ಲಿಂಗಾಯಿತ ಸಮುದಾಯದ ಬಿ.ಎಸ್.ಯಡಿಯೂರಪ್ಪರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕಾಗಿತ್ತು, ಆದರೆ ಯಡಿಯೂರಪ್ಪರಿಗೆ ಮುಖ್ಯಮಂತ್ರಿ ಸ್ಥಾನಮಾನ ಕಲ್ಪಿಸದೆ ಸಮುದಾಯಕ್ಕೆ ದೊಡ್ಡ ಅನ್ಯಾಯ ಮಾಡಿದ್ದರು ಎಂದು ಹೇಳಿದರು.

ಬಿಜೆಪಿ ಪಕ್ಷ ಸಮಾನತೆಯ ಹರಿಕಾರ ಬಸವಣ್ಣನವರ ತತ್ವ ಸಿದ್ಧಾಂತವನ್ನು ಎಂದಿಗೂ ಒಪ್ಪುವುದಿಲ್ಲ, ಅಷ್ಟೇ ಅಲ್ಲದೆ ಬಸವಣ್ಣರನ್ನ ಸಾಂಸ್ಕೃತಿಕ ನಾಯಕ ಎಂಬುವುದನ್ನು ಒಪ್ಪುವುದಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರ ಸಂವಿಧಾನ ಮತ್ತು ಬಸವಣ್ಣನವರ ಸಿದ್ಧಾಂತದ ಮೇಲೆ ಹೆಚ್ಚಿನ ನಂಬಿಕೆ ಇಟ್ಟಿದೆ ಎಂದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ.ವಿಜಯೇಂದ್ರರನ್ನ ಪಕ್ಷದ ರಾಜ್ಯಾಧ್ಯಕ್ಷ ರನ್ನಾಗಿ ಮಾಡಲಾಗಿದೆ.

ವೀರಶೈವ – ಲಿಂಗಾಯಿತ ಸಮುದಾಯ ಓಲೈಕೆ ಮಾಡಲು ಇಂತಹ ತಂತ್ರ ಮಾಡಿರುವ ಬಿಜೆಪಿ ವರಿಷ್ಠರು, ಕೇವಲ 3 ವರ್ಷ ಮಾತ್ರ ರಾಜ್ಯಾಧ್ಯಕ್ಷ ಎಂದು ವಿಜಯೇಂದ್ರ ಅವರಿಗೆ ನಿಗದಿ ಮಾಡಿದ್ದಾರೆ. ಅಷ್ಟರೊಳಗೆ ಎಲ್ಲಾ ಚುನಾವಣೆ ಮುಗಿಯುತ್ತದೆ. ಆಮೇಲೆ ಇನ್ನೇಕೆ ಇವರು ಎಂಬ ಭಾವನೆ ಇಟ್ಟುಕೊಂಡಿದೆ. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಪಕ್ಷದ ಅಧ್ಯಕ್ಷ ಸ್ಥಾನವು ಲಿಂಗಾಯತ ಸಮುದಾಯದ ಕೈತಪ್ಪಲಿದ್ದು, ಆದರೆ ಕಾಂಗ್ರೆಸ್ ಪಕ್ಷ ಸಮುದಾಯದ ಹೆಚ್ಚಿನವರನ್ನು ಮುಖ್ಯಮಂತ್ರಿಯಾಗಲು ಅವಕಾಶ ಕಲ್ಪಿಸಿದೆ ಎಂದರು.

ಕಾಂಗ್ರೆಸ್ ಪಕ್ಷ ಜನರ ಬದುಕು ಕಟ್ಟುವ ಕೆಲಸ ಮಾಡುತ್ತಿದ್ದರೆ, ಬಿಜೆಪಿ ಪಕ್ಷ ಜನರ ಭಾವನೆ ಕೆರಳಿಸುವ ಕೆಲಸ ಮಾಡುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆಸುತ್ತಾರೆ, ನಿಜವಾಗಲೂ ದೇಶ ಕಟ್ಟಿದ್ದು ಕಾಂಗ್ರೆಸ್ ನಾಯಕರು. ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಟ್ಟದ್ದು ಕಾಂಗ್ರೆಸ್. ದೇಶವನ್ನಾಳಿದ ಕಾಂಗ್ರೆಸ್ ಸಾವಿರಾರು ಅಣೆಕಟ್ಟು, ಕೈಗಾರಿಕೆ ನಿರ್ಮಾಣ ಮಾಡಿದೆ. ಆಹಾರ ಉತ್ಪಾದನೆಯಲ್ಲಿ ಕ್ರಾಂತಿ ಮಾಡಿತು. ಆದರೆ ಹಳೆ ಮೈಸೂರು ಭಾಗದಲ್ಲಿ ಒಂದು ಅಣೆಕಟ್ಟು ನಿರ್ಮಾಣ ಮಾಡದ ಬಿಜೆಪಿ ಅಭಿವೃದ್ಧಿ ಮಂತ್ರ ಜಪಿಸುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಸರಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಬದುಕನ್ನು ಸಂಕಷ್ಟಕ್ಕೆ ದೂಡಿದೆ. ಉದ್ಯೋಗ ಸೃಷ್ಟಿ ಇಲ್ಲದೆ ನಿರುದ್ಯೋಗ ತಾಂಡವಡುತ್ತಿದೆ. ನೋಟ್ ಬ್ಯಾನ್ ಮಾಡಿ ತಪ್ಪು ಮಾಡಿದೆ, ಇದೀಗ ಚುನಾವಣಾ ಬಾಂಡ್ ಹಗರಣ ದೊಡ್ಡ ಮಟ್ಟದ್ದಾಗಿದ್ದು, ಕೇಂದ್ರ ತನಿಕಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಹೆದರಿಸಿ ಬೆದರಿಸಿ ಚುನಾವಣಾ ಬಾಂಡ್ ನೆಪದಲ್ಲಿ ಸುಲಿಗೆ ಮಾಡಲಾಗಿದೆ.

ಈ ಬಗ್ಗೆ ತನಿಖೆ ನಡೆದರೆ ನರೇಂದ್ರ ಮೋದಿ ಕಥೆ ಏನಾಗಲಿದೆ. ಆದರೂ ಸಹ ನರೇಂದ್ರ ಮೋದಿ ಅಪ್ಪಟ ಸುಳ್ಳಿನ ನಾಟಕ ಮುಂದುವರೆಸಿದ್ದಾರೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ. ಮಹಿಳೆಯರಿಗೆ ಹೆಚ್ಚಿನ ಸವಲತ್ತು ದೊರಕಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದಿಂದ ಹೆಚ್ಚಿನ ಗ್ಯಾರಂಟಿ ಲಾಭ ಮಹಿಳೆಯರು, ರೈತರು, ಕಾರ್ಮಿಕರಿಗೆ ಸಿಗಲಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರಿಗೆ ಮತ ನೀಡುವ ಮೂಲಕ ಸಮುದಾಯದ ಜನತೆ ಗೆಲ್ಲಿಸಿ ಕೊಡಬೇಕು. ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನತೆಗೆ ರಾಜಕೀಯ ಸ್ಥಾನಮಾನ ದೊರಕಿಸಿಕೊಡಲು ಬದ್ಧನಾಗಿರುವುದಾಗಿ ಅವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಮಾತನಾಡಿ, ಜಿಲ್ಲೆಯ ಜನತೆ ಅವಕಾಶ ಕೊಟ್ಟಾಗ ಏನು ಮಾಡದೆ ಸಂಸದರಾಗಿ ಎಚ್.ಡಿ.ಕುಮಾರಸ್ವಾಮಿ ಏನು ಮಾಡಲು ಸಾಧ್ಯ. ಅವರ ತಂದೆಗಿಂತಲೂ ದೊಡ್ಡ ನಾಯಕರಾಗಲು ಸಾಧ್ಯವೇ. ಕಾವೇರಿ ವಿಚಾರದಲ್ಲಿ ಎಚ್.ಡಿ.ದೇವೇಗೌಡ ಪ್ರಧಾನಿಯಾಗಿದ್ದಾಗ ಏನು ಮಾಡಲಿಲ್ಲ. ಈಗ ಕುಮಾರಸ್ವಾಮಿ ಏನು ಮಾಡಲಿದ್ದಾರೆ. ಇಷ್ಟೊಂದು ಸುಳ್ಳು ಹೇಳುವ ಅವಶ್ಯಕತೆ ಇದೆಯಾ ಎಂದು ಪ್ರಶ್ನಿಸಿದರು.

ಬಿ.ಎಸ್.ಯಡಿಯೂರಪ್ಪರಿಗೆ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ತಪ್ಪಿಸಿದ ಎಚ್.ಡಿ.ಕುಮಾರಸ್ವಾಮಿ, ಅನಂತರವೂ ಸಹ ಅವರ ವಿರುದ್ಧ ವೇಸದ ರಾಜಕಾರಣ ಮಾಡುತ್ತಾ ಯಡಿಯೂರಪ್ಪರನ್ನ ಜೈಲಿಗೆ ಕಳುಹಿಸಲು ಸತತವಾಗಿ ಮುಂದಾದರು. ಅಷ್ಟರ ಮಟ್ಟಿಗೆ ಯಡಿಯೂರಪ್ಪರಿಗೆ ಕಿರುಕುಳ ನೀಡಿದ್ದನ್ನು ಜನತೆ ಮರೆಯುವುದಿಲ್ಲ ಎಂದರು.

ಮಂಡ್ಯ ಜಿಲ್ಲೆಗೆ ನೂರಾರು ವರ್ಷ ಮರೆಯದಿರುವ ಯಾವುದಾದರೂ ಕೊಡುಗೆಯನ್ನು ಎಚ್.ಡಿ.ಕುಮಾರಸ್ವಾಮಿ ನೀಡಿದ್ದಾರಾ..? ನಿಜವಾಗಲೂ ಅವರ ಕೊಡುಗೆ ಬಿಗ್ ಝೀರೋ ಎಂದ ಅವರು ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿದ್ದೇನೆ ಅವಕಾಶ ಕೊಡಿ ಎಂದು ಮನವಿ ಮಾಡಬೇಕು.

ಆದರೆ ಇಲ್ಲ ಸಲ್ಲದ ಸುಳ್ಳು ಭರವಸೆಗಳನ್ನು ಹೇಳಿದರೆ ಜನರು ನಂಬಲು ಸಾಧ್ಯವಿಲ್ಲ ಎಂದು ತಿಳಿಸಿದರು.

ವೀರಶೈವ – ಲಿಂಗಾಯಿತ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಪ್ರಾಮುಖ್ಯತೆ ನೀಡಿದ್ದು, ಸಮುದಾಯದ ಜನರ ಮೇಲೆ ವಿಶ್ವಾಸದಿಂದ ಮುನ್ನಡೆಯುತ್ತಿದೆ. ನಿಮ್ಮಗಳ ಆಶೀರ್ವಾದ ಇರಲಿ ಎಂದು ಮನವಿ ಮಾಡಿದರು.

ವೀರಶೈವ ಲಿಂಗಾಯತ ಸಮುದಾಯದ ಜಗದಾಂಬ, ಎಂ.ಎಸ್.ಮಂಜುನಾಥ್ ಬೆಟ್ಟಹಳ್ಳಿ, ನಾಗರಾಜ್, ಸುಂಡಹಳ್ಳಿ ಮಂಜುನಾಥ್, ಗೀತಾ, ಸುಗುಣ, ಶೀಲಾ, ಆಶಾ, ರೇಣುಕಾ ಶಿವಣ್ಣ ಸೇರಿದಂತೆ ಹಲವರು ಬಿಜೆಪಿ -ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ರಮೇಶ್ ಬಾಬು ಬಂಡಿ ಸಿದ್ದೇಗೌಡ, ರವಿಕುಮಾರ್ ಗಣಿಗ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

Published

on

ಬೆಂಗಳೂರು/ಹಾಸನ: ಹಾಸನ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಎರಡು ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಎರಡೂ ಯೋಜನೆಗಳು ನೀರಾವರಿ ಇಲಾಖೆಯಡಿ ಕೈಗೆತ್ತಿಕೊಳ್ಳಲಾಗಲಿದ್ದು, ಜಿಲ್ಲೆಯ ಬರಪೀಡಿತ ಪ್ರದೇಶಗಳ ನೀರಿನ ಅಗತ್ಯವನ್ನು ಪೂರೈಸುವ ಉದ್ದೇಶ ಹೊಂದಿವೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಕೆಂಕೆರೆ ಸೇರಿ 20ಕ್ಕೂ ಹೆಚ್ಚು ಕೆರೆಗಳಿಗೆ ಹೇಮಾವತಿ ನದಿಯಿಂದ ಲಿಫ್ಟ್ ನೀರಾವರಿ ಮೂಲಕ ನೀರು ಪೂರೈಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಸಂಬಂಧ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ವಿಷಯವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚನೆ ನೀಡಿದ್ದರು. ಅದರಂತೆ, ಬರಪ್ರದೇಶದ ನೀರಿನ ಸಮಸ್ಯೆ ನಿವಾರಣೆಗೆ 32 ಕೋಟಿ ರೂ. ವೆಚ್ಚದ ಈ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

 

ಇನ್ನೊಂದೆಡೆ, ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಲಿಫ್ಟ್ ನೀರಾವರಿ ಯೋಜನೆಯ ಪುನಶ್ಚೇತನಕ್ಕೂ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಈಗಿರುವ ಈ ಯೋಜನೆ ನಿರಂತರ ತಾಂತ್ರಿಕ ದೋಷ, ಪಂಪುಗಳ ವೈಫಲ್ಯ, ರೈಜಿಂಗ್ ಮೇನ್ ಹಾಗೂ ಕಾಲುವೆಗಳ ಹಾನಿಯಿಂದ ಬಳಲುತ್ತಿತ್ತು. ಹೀಗಾಗಿ ಹೊಸ ಪಂಪುಗಳು, ಮೋಟಾರ್‌ಗಳು, ಪೈಪ್‌ಲೈನ್‌ಗಳ ಅಳವಡಿಕೆ ಸೇರಿದಂತೆ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 11.50 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ.
ಈ ಮೂಲಕ ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಒಟ್ಟಾರೆ 43.50 ಕೋಟಿ ರೂ.  ವೆಚ್ಚದ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದಂತಾಗಿದೆ.

ಹಾಸನ ಜಿಲ್ಲೆಯ ಪರವಾಗಿ, ಜಿಲ್ಲೆಯ ಜನತೆಯ ಅಗತ್ಯಗಳಿಗೆ ಸ್ಪಂದಿಸಿ ಈ ಮಹತ್ವದ ಯೋಜನೆಗಳನ್ನು ಮಂಜೂರು ಮಾಡಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಕೃತಜ್ಞತೆ
ಸಲ್ಲಿಸಿದ್ದಾರೆ.

Continue Reading

Hassan

ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ಫೇಸ್ ಬುಕ್ ಹ್ಯಾಕ್

Published

on

ಹಾಸನ: ಜಿಲ್ಲಾಧಿಕಾರಿ ಕೆ.ಎಸ್‌‍. ಲತಾಕುಮಾರಿ ಅವರ ಭಾವಚಿತ್ರವಿರುವ ಫೇಸ್‌‍ ಬುಕ್‌ ಐಡಿಯಿಂದ ಸಂದೇಶಗಳು ಬೇರೆಯವರ ಮೊಬೈಲ್‌ಗಳಿಗೆ ರವಾನೆಯಾಗುತ್ತಿರುವುದು ಕಂಡು ಬಂದಿದ್ದು, ಫೇಸ್‌‍ ಬುಕ್‌ ಐಡಿಯಿಂದ ಯಾವುದೇ ಸಂದೇಶ ಜಿಲ್ಲಾಧಿಕಾರಿ ಕಳುಹಿಸುತ್ತಿಲ್ಲ.


ಫೇಸ್‌‍ ಬುಕ್‌ ಐಡಿ ನಕಲಿ ಖಾತೆಯನ್ನು ಬಳಸುತ್ತಿರುವುದು ಕಂಡು ಬಂದಿದೆ. ನಕಲಿ ಖಾತೆಯಿಂದ ಬರುವ ಮೇಸೆಜ್‌ಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಹಾಗೂ ಯಾವುದೇ ದೂರುಗಳು ಇದ್ದರೆ ಕಚೇರಿ ವೇಳೆಯಲ್ಲಿ ಭೇಟಿ ಮಾಡಿ ದೂರು ನೀಡಬಹುದಾಗಿದೆ. ಸೈಬರ್‌ ಅಪರಾಧದ ಬಗ್ಗೆ ಜಾಗೃತರಾಗುವಂತೆ ಜಿಲ್ಲಾಧಿಕಾರಿ ಕೆ.ಎಸ್‌‍. ಲತಾಕುಮಾರಿ ತಿಳಿಸಿದ್ದಾರೆ.

Continue Reading

Mandya

ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಸಮಯವನ್ನು ಮೀಸಲಿಡಬೇಕು : ಸಾಹಿತಿ ಟಿ. ಸತೀಶ್ ಜವರೇಗೌಡ

Published

on

ನಾಗಮಂಗಲ : ಮಕ್ಕಳು ಶಾಲಾ ಕಲಿಕಾ ಅವಧಿ ಮುಗಿಸಿ ಮನೆಗೆ ಬಂದಾಗ, ಪೋಷಕರು ಅದೆಷ್ಟೇ ದಿನನಿತ್ಯದ ಒತ್ತಡಗಳ ನಡುವೆ ಇದ್ದರೂ ಕೂಡ, ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಸಮಯವನ್ನು ಮೀಸಲಿಡಬೇಕು. ಆ ಮೂಲಕ ಅವರ ಭವಿಷ್ಯವನ್ನು ರೂಪಿಸಲು ಶ್ರಮಿಸಬೇಕು ಎಂದು ಯುವ ಬರಹಗಾರರ ಬಳಗದ ಅಧ್ಯಕ್ಷ ಹಾಗೂ ಸಾಹಿತಿ ಟಿ. ಸತೀಶ್ ಜವರೇಗೌಡ ಕರೆ ನೀಡಿದರು.

ತಾಲೂಕಿನ ಗದ್ದೆಭುವನಹಳ್ಳಿಯ ಸಮೀಪವಿರುವ ಋಷಿ ಶ್ರೀ ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಶಾಲಾ ವಾರ್ಷಿಕೋತ್ಸವ ಮತ್ತು ಋಷಿ ಕಲಾ ಸಂಭ್ರಮ’ದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಮನುಷ್ಯನಿಗೆ ನಿಜವಾದ ಸಂಪತ್ತು. ಒಬ್ಬ ವ್ಯಕ್ತಿ ಶಿಕ್ಷಣ ಪಡೆದರೆ ಆತ ಎಂದಿಗೂ ಕೂಡ ಅದನ್ನು ಕಳೆದುಕೊಳ್ಳುವುದಿಲ್ಲ. ಅದು ಸದಾ ಅಕ್ಷಯವಾಗುವ ಸಂಪತ್ತು ಎಂದು ತಿಳಿಸಿದರು.

ಮಕ್ಕಳು ಓದುವ ಸಮಯದಲ್ಲಿ ಪೋಷಕರು ಟಿವಿ ಮತ್ತು ಮೊಬೈಲಿನಿಂದ ದೂರವಿರಬೇಕು. ಅವರು ಕೂಡ ಮಕ್ಕಳ ಜೊತೆಗೆ ದಿನಪತ್ರಿಕೆಗಳನ್ನೋ ಅಥವಾ ಪುಸ್ತಕಗಳನ್ನೋ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಆಗ ಮಕ್ಕಳು ಪಠ್ಯಪುಸ್ತಕಗಳನ್ನು ಕೇಂದ್ರೀಕರಿಸಿ ಅಭ್ಯಾಸ ಮೂಲಕ ಕಲಿಕಾ ಆಸಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಾರೆ. ಅವರು ಪುಸ್ತಕದ ಒಡನಾಟಕ್ಕೆ ಹೋದಾಗ ಟಿವಿ, ಮೊಬೈಲಿನಿಂದ ಸಹಜವಾಗಿ ದೂರ ಉಳಿಯುತ್ತಾರೆ ಎಂದರು.

ಪ್ರಕೃತಿಯ ಸಂಪತ್ತನ್ನು ವೃದ್ಧಿಸಲು ಶ್ರಮಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಾಡಿಗೆ ದೊಡ್ಡ ಕೊಡುಗೆ ಕೊಟ್ಟು ಹೋಗಿದ್ದಾರೆ. ಯಾವ ಮನುಷ್ಯ ಪ್ರಕೃತಿಯ ಆಸರೆಯಲ್ಲಿ ಬದುಕುತ್ತಾನೋ ಆ ವ್ಯಕ್ತಿ ಸಮಾಜದಲ್ಲಿ ಉತ್ತಮ ನಾಗರಿಕನಾಗುತ್ತಾನೆ. ಆದ್ದರಿಂದ ಮಕ್ಕಳಿಗೆ ಪ್ರಕೃತಿಯ ಜೊತೆಗೆ ಒಡನಾಟದ ಅಗತ್ಯವಿದೆ. ಇಂತಹ ವಾತಾವರಣ ಕಲ್ಪಿಸಿ ಮಕ್ಕಳ ಭವಿಷ್ಯ ರೂಪಿಸುವ ಜೊತೆಗೆ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ಋಷಿಶ್ರೀ ಶಿಕ್ಷಣ ಸಂಸ್ಥೆ ಮಾಡುತ್ತಿದೆ. ಮಕ್ಕಳ ಸುರಕ್ಷತೆಗೆ ಪೂರಕವಾಗಿ ಯಾವೆಲ್ಲಾ ಸೌಕರ್ಯಗಳನ್ನು ಕಲ್ಪಿಸಬೇಕೋ ಅವೆಲ್ಲವನ್ನು ಈ ಶಿಕ್ಷಣ ಸಂಸ್ಥೆ ಒದಗಿಸಿರುವುದು ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಮೈಸೂರಿನ ಜೆಎಸ್ಎಸ್ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹೊನ್ನಶೆಟ್ಟಿ ಮಾತನಾಡಿ, ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹುಮುಖ್ಯ. ಮಕ್ಕಳಿಗೆ ವಿದ್ಯೆ, ವಿನಯ, ವಿವೇಕದ ಜೊತೆಗೆ ಒಳ್ಳೆಯ ಮಾತುಗಳನ್ನಾಡುವುದನ್ನು ಕಲಿಸಿದರೆ, ಅಂತಹ ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಲೋಕೇಶ್ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಮುಂದುವರಿಯುತ್ತಿರುವ ಸನ್ನಿವೇಶದಲ್ಲಿ ಮಕ್ಕಳನ್ನು ಸ್ಪರ್ಧಾತ್ಮಕ ಯುಗಕ್ಕೆ ಪರಿಚಯಿಸಬೇಕಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಮೌಲ್ಯಯುತ ಶಿಕ್ಷಣ ಕಲಿಸುವುದು ಅಗತ್ಯ ಎಂದು ತಿಳಿಸಿದರು.

ಹೊಸಕೊಪ್ಪಲು ಗ್ರಾಮದ ಬ್ರಿಲಿಯಂಟ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್ ಮಾತನಾಡಿದರು. ಋಷಿಶ್ರೀ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮಮ್ಮ ಉದ್ಘಾಟಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಕೆ. ರವೀಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವಿರೂಪಾಕ್ಷ, ಕರಡಳ್ಳಿ ವಲಯ ಸಂಪನ್ಮೂಲ ವ್ಯಕ್ತಿ ಎನ್.ಎಸ್. ಸುರೇಶ್, ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ನಟರಾಜು, ಖಜಾಂಚಿ ಎಸ್.ವಿ. ಮಂಜುನಾಥ್, ಶಾಲೆಯ ಮುಖ್ಯ ಶಿಕ್ಷಕ ಎನ್. ಗುರುಪ್ರಸಾದ್, ವಿಸ್ಡ್ಂ ಪಬ್ಲಿಕ್ ಶಾಲೆಯ ಬೋರೇಗೌಡ ಸೇರಿದಂತೆ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಭವ್ಯ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು ಎಲ್ಲಾ ಶಿಕ್ಷಕರಿಗೂ ಸನ್ಮಾನಿಸಿ ಗುರುವಂದನೆ ಸಲ್ಲಿಸಿದರು. ಶಾಲಾ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ತಾಲೂಕಿನ ಗದ್ದೆಭುವನಹಳ್ಳಿಯ ಋಷಿಶ್ರೀ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ ಸಾಹಿತಿ ಟಿ. ಸತೀಶ್ ಜವರೇಗೌಡ ಅವರನ್ನು ಕನ್ನಡ ಪ್ರಾಧ್ಯಾಪಕ ಪ್ರೊ. ಹೊನ್ನಶೆಟ್ಟಿ ಸನ್ಮಾನಿಸಿದರು. ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮಮ್ಮ, ಕಾರ್ಯದರ್ಶಿ ನಟರಾಜು, ಖಜಾಂಚಿ ಎಸ್.ವಿ. ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಲೋಕೇಶ್, ಬಿ.ಆರ್.ಸಿ. ಕೆ. ರವೀಶ್ ಉಪಸ್ಥಿತರಿದ್ದರು.

Continue Reading

Trending

error: Content is protected !!