Connect with us

Chikmagalur

ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ನೋಟ್ ಪುಸ್ತಕ ವಿತರಣೆ, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನ: ಮಧು ಬಂಗಾರಪ್ಪ

Published

on

ಚಿಕ್ಕಮಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಒಂದನೇ ತರಗತಿಯಿಂದ 12ನೇ ತರಗತಿಯವರೆಗಿನ ಮಕ್ಕಳಿಗೆ ನೋಟು ಪುಸ್ತಕ ಹಾಗೂ ಪಠ್ಯ ಪುಸ್ತಕವನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕೊಪ್ಪ ತಾಲೂಕು ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಈಗಾಗಲೇ ಶೂಗಳು, ಸಾಕ್ಸ್‌ಗಳು ಮತ್ತು ಸಮವಸ್ತ್ರ ನೀಡುವುದರ ಜೊತೆಗೆ ಪಠ್ಯಪುಸ್ತಕ ಹಾಗೂ ನೋಟ್ ಪುಸ್ತಕಗಳನ್ನು ಸಹ ನೀಡಲಾಗುತ್ತದೆ ಎಂದರು.

8ನೇ ತರಗತಿಯವರೆಗಿನ ಮಕ್ಕಳಿಗೆ ಒಂದು ಮೊಟ್ಟೆ ಮಾತ್ರ ವಿತರಿಸಲಾಗುತ್ತಿತ್ತು. ಅದನ್ನು ನಮ್ಮ ಸರ್ಕಾರ 10ನೇ ತರಗತಿಯವರೆಗೆ ವಿಸ್ತರಿಸಿದೆ. ಬಡ ಮಕ್ಕಳ ಅಪೌಷ್ಟಿಕತೆ ನೀಗಿಸುವ ಸಲುವಾಗಿ ಬೆಳಿಗ್ಗೆ ಹಾಲು ಹಾಗೂ ರಾಗಿ ಮಾಲ್ಟ್ ಜೊತೆಗೆ ವಾರವಿಡೀ ಮೊಟ್ಟೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಬಡತನಕ್ಕೆ ಸ್ಪಂದಿಸಿ ಕಾರ್ಯ ನಿರ್ವಹಿಸುವುದೇ ಸರ್ಕಾರದ ಕೆಲಸ. ಈ ನಿಟ್ಟಿನಲ್ಲಿ 57 ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ ಎಂದು ಹೇಳಿದರು.


ಗ್ಯಾರಂಟಿ ಯೋಜನೆಗಳಿಂದ ಜನರು ಆರ್ಥಿಕವಾಗಿ ಸಬಲರಾಗಲು ಅನುಕೂಲವಾಗುವಂತೆ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೆಯೇ ಯುವನಿಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಆಡಿದ ಮಾತು ಉಳಿಸಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 11 ತಿಂಗಳಲ್ಲಿ 13 ಸಾವಿರ ಶಿಕ್ಷಕರ ನೇಮಕ ಮಾಡಲಾಗಿದೆ. ಇದೇ ಡಿಸೆಂಬರ್.7 ರಂದು ಟಿಇಟಿ ಪರೀಕ್ಷೆ ನಡೆಯಲಿದ್ದು, ಮತ್ತೆ 12 ಸಾವಿರ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು. ಈ ಶೈಕ್ಷಣಿಕ ವರ್ಷ ಆರಂಭವಾದ ಸಂದರ್ಭದಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಕಾರ್ಯ ನಡೆದಿದೆ ಎಂದರು.

ಹಿಂದೆ ಎಸ್‌ಎಸ್‌ಎಲ್‌ಸಿಯ ಪರೀಕ್ಷಾ ಕ್ರಮದಲ್ಲಿ ಬದಲಾವಣೆ ತರಲಾಗಿದ್ದು, ಕಳೆದ ವರ್ಷ ಎರಡು ಮತ್ತು ಮೂರನೇ ಪರೀಕ್ಷೆ ನಡೆಸಿ ಅದರಲ್ಲಿ ಸುಮಾರು 1,16,000 ಮಕ್ಕಳು ಉತ್ತೀರ್ಣರಾಗಿ ಇವತ್ತು ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿದ್ದಾರೆ. 2024 ರಲ್ಲಿ ಇಬ್ಬರು ಮಾತ್ರ 625ಕ್ಕೆ 625ಅಂಕ ಪಡೆದಿದ್ದರು. ಆದರೆ ಈ ಬಾರಿ ಈ ಸಂಖ್ಯೆ ೫೧ಕ್ಕೆ ಏರಿದೆ. ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದರಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಒಂದು ಗ್ರಾ.ಪಂ. ವ್ಯಾಪ್ತಿಗೆ ಒಂದರಂತೆ ಇಡೀ ರಾಜ್ಯಕ್ಕೆ 6 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಸ್ಥಾಪಿಸಬೇಕೆಂಬ ಉದ್ದೇಶ ಸರ್ಕಾರದ್ದು. ಜೊತೆಗೆ ಆ ಶಾಲೆಗಳ ವಿದ್ಯಾರ್ಥಿಗಳಿಗೆ ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಉಚಿತ ಬಸ್ ವ್ಯವಸ್ಥೆಯೂ ಲಭ್ಯವಿರುತ್ತದೆ ಎಂದು ತಿಳಿಸಿದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಮಾತನಾಡಿ, ಸುಮಾರು 45 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಗ್ರಾ.ಪಂ.ಯ ಕಟ್ಟಡ, ಸುಮಾರು 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಅಂಗನವಾಡಿ ಕಟ್ಟಡ, 82 ಲಕ್ಷ ರೂ.ಗಳ ವೆಚ್ಚದಲ್ಲಿ ಐದು ಶಾಲಾ ಕೊಠಡಿಗಳನ್ನು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟಿಸಿದ್ದಾರೆ. ಸಚಿವರಾದ ಮಧು ಬಂಗಾರಪ್ಪನವರು ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆಮೂಲಾಗ್ರ ಬದಲಾವಣೆ ತಂದಿದ್ದಾರೆ. ಇಂದು ಖಾಸಗಿ ಉದ್ಯಮಿಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಲು ಮಂದೆ ಬರಲು ಸಿದ್ಧರಿದ್ದಾರೆ. ಅದರಲ್ಲೂ ಅಜೀಂ ಪ್ರೇಮ್‌ಜಿ ಫೌಂಡೇಶನ್‌ನ ಸಹಯೋಗದಲ್ಲಿ ಸುಮಾರು 1560 ಕೋಟಿ ರೂ.ಗಳ ಆರ್ಥಿಕ ನೆರವು ತಂದಿದ್ದು, ವಾರದಲ್ಲಿ ಆರು ದಿನಗಳ ಕಾಲ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಹಾಗೂ ರಾಗಿ ಮಾಲ್ಟ್ ನೀಡುವ ಯೋಜನೆ ರೂಪಿಸಲಾಗಿದೆ. ಇದು ಸಚಿವರಾದ ಮಧು ಬಂಗಾರಪ್ಪ ಅವರ ಪ್ರಯತ್ನದಿಂದ ಆಗಿದೆ ಎಂದರು.

ಭದ್ರಾ ಕಾಡಾ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ, ಕರ್ಕೇಶ್ವರ ಗ್ರಾ,ಪಂ. ಅಧ್ಯಕ್ಷ ರಾಜೇಶ್ ಕೇಶವತ್ತಿ, ಉಪಾಧ್ಯಕ್ಷೆ ಆಶಾಲತ, ಎಸ್‌ಡಿಎಂಸಿ ಅಧ್ಯಕ್ಷೆ ಮಮತ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮರಾಜು, ಗ್ರಾ.ಪಂ.ಸದಸ್ಯರುಗಳು ಮತ್ತಿತರರು ಕಾರ್ಯಕ್ರಮದಲ್ಲಿದ್ದರು.

Continue Reading

Chikmagalur

ಉಪಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ರಾಜೀನಾಮೆ

Published

on

ಚಿಕ್ಕಮಗಳೂರು: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹಾಗೂ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅವರು ತಮ್ಮ ಉಪಸಭಾಪತಿ ಹುದ್ದೆ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.


ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಉದ್ದೇಶಿಸಿ ಬರೆದಿರುವ ರಾಜೀನಾಮೆ ಪತ್ರದಲ್ಲಿ, “ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆ ಮತ್ತು ಶಾಸಕ ಸ್ಥಾನಕ್ಕೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಸದರಿ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಕೋರುತ್ತೇನೆ” ಎಂದು ತಿಳಿಸಿದ್ದಾರೆ.
ಆಗಸ್ಟ್ 1ರಂದು ದಿನಾಂಕಿತವಾಗಿರುವ ರಾಜೀನಾಮೆ ಪತ್ರಕ್ಕೆ ಎಂ.ಕೆ. ಪ್ರಾಣೇಶ್ ಅವರು ಸಹಿ ಹಾಕಿದ್ದು, ರಾಜೀನಾಮೆಯನ್ನು ಅಂಗೀಕರಿಸುವಂತೆ ಸಭಾಪತಿಯನ್ನು ಕೋರಿದ್ದಾರೆ.
ಶುಕ್ರವಾರ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 9 ಮತಗಳ ಅಂತರದಿಂದ ಜಯಗಳಿಸಿದ್ದ ಹಿನ್ನೆಲೆಯಲ್ಲಿ, ಈ ರಾಜೀನಾಮೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ರಾಜೀನಾಮೆ ಅಂಗೀಕಾರದ ಬಳಿಕ ಮುಂದಿನ ಸಂವಿಧಾನಾತ್ಮಕ ಪ್ರಕ್ರಿಯೆಗಳು ನಡೆಯಲಿವೆ.

Continue Reading

Chikmagalur

ಅಕ್ರಮ ಮಟ್ಕಾ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ವ್ಯಕ್ತಿ ವಶಕ್ಕೆ, ನಗದು ವಶ

Published

on

ಚಿಕ್ಕಮಗಳೂರು : ನಗರದ ಹಳೇ ಬಂಡಿಮಠ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿದ್ದ ಯಶ್ವಂತ್ ಎಸ್. ಎಂಬಾತನನ್ನು ನಗರ ಪೊಲೀಸ್ ಠಾಣೆಯ ಪಿಎಸ್‌ಐ ಜಗದೀಶ್ ನಾಯ್ಕ್ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪಂಚರ ಸಮಕ್ಷಮ ದಾಳಿ ನಡೆಸಿದ ಪೊಲೀಸರು, ಆರೋಪಿಯಿಂದ 940 ರೂ. ನಗದು, ಒಂದು ಬಾಲ್ ಪೆನ್ ಹಾಗೂ ಮಟ್ಕಾ ನಂಬರ್ ಬರೆದಿದ್ದ ಚೀಟಿಗಳನ್ನು ಮಹಜರ್ ಮುಖೇನ ಅಮಾನತ್ತುಪಡಿಸಿಕೊಂಡಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Continue Reading

Chikmagalur

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಹಸುಗಳು ದಾರುಣ ಸಾ*ವು

Published

on

ಕಳಸ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮೂರು ಹಸುಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೆಳಬೈಲ್ ಗ್ರಾಮದಲ್ಲಿ ನಡೆದಿದೆ.

ಬೃಹತ್ ಗಾತ್ರದ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ರಭಸಕ್ಕೆ ತಂತಿಗಳು ತುಂಡಾಗಿ ನೆಲಕ್ಕೆ ಬಿದ್ದಿದ್ದವು. ಈ ವೇಳೆ ಆ ಮಾರ್ಗದಲ್ಲಿ ಸಾಗುತ್ತಿದ್ದ ಮೂರು ಹಸುಗಳಿಗೆ ತಂತಿ ಸ್ಪರ್ಶಿಸಿ, ತೀವ್ರವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅವು ಸ್ಥಳದಲ್ಲೇ ಪ್ರಾಣ ಬಿಟ್ಟಿವೆ.

ತಮ್ಮ ಜೀವನಾಧಾರವಾಗಿದ್ದ ಮೂರು ಹಸುಗಳನ್ನು ಏಕಾಏಕಿ ಕಳೆದುಕೊಂಡ ರೈತ ಕಣ್ಣೀರಿಡುತ್ತಿದ್ದು, ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿ ಪರಿಶೀಲನೆ ನಡೆಸಿದ್ದಾರೆ. ಈ ಅವಘಡಕ್ಕೆ ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ನೇರ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮಾರ್ಗದ ಪಕ್ಕದಲ್ಲಿದ್ದ ಅಪಾಯಕಾರಿ ಮರಗಳನ್ನು ಮುಂಚಿತವಾಗಿ ತೆರವುಗೊಳಿಸುವಂತೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇಲಾಖೆಯ ಬೇಜವಾಬ್ದಾರಿತನದಿಂದಲೇ ಈ ಅನಾಹುತ ಸಂಭವಿಸಿದ್ದು ಹಸುಗಳನ್ನು ಕಳೆದುಕೊಂಡಿರುವ ಸಂತ್ರಸ್ತ ರೈತನಿಗೆ ಸರ್ಕಾರ ಹಾಗೂ ಸಂಬಂಧಪಟ್ಟ ಮೆಸ್ಕಾಂ ಇಲಾಖೆಯಿಂದ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕೆಂದು ಕೆಳಬೈಲ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Continue Reading

Trending

error: Content is protected !!