Hassan
ಎಸ್ಐಆರ್ನಲ್ಲಿ ಸರ್ಕಾರ ಹಸ್ತಕ್ಷೇಪ ಇಲ್ಲ, ಜಾಗೃತಿ ಮಾತ್ರ: ಡಿ.ಕೆ. ಶಿವಕುಮಾರ್
ಬೆಂಗಳೂರು: ಎಸ್ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಕುರಿತು ಸರ್ಕಾರ ಜಾಹೀರಾತುಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು, ಇದಕ್ಕಾಗಿ ಪ್ರತಿಪಕ್ಷಗಳು ಟೀಕೆ ಮಾಡುವ ಬದಲು ಸರ್ಕಾರದ ಕಾರ್ಯವನ್ನು ಅಭಿನಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಜನರಿಗೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಬಳಿಕ ಕೇಂದ್ರ ಸರ್ಕಾರವೂ ಇದೇ ರೀತಿಯ ಕ್ರಮಗಳನ್ನು ಅನುಸರಿಸಿದೆ ಎಂದು ಹೇಳಿದರು.

ಎಸ್ಐಆರ್ ಕುರಿತು ಸರ್ಕಾರ ಕೇವಲ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾನದ ಹಕ್ಕು ಚಲಾಯಿಸುವಂತಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ಎಸ್ಐಆರ್ ಪ್ರಕ್ರಿಯೆಯಲ್ಲಿ ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯ ಮಾತ್ರ ನಡೆಯುತ್ತಿದೆ. ಈ ಜಾಗೃತಿ ಅಭಿಯಾನವನ್ನು ಪ್ರತಿಪಕ್ಷಗಳು ಸಹಿಸಿಕೊಳ್ಳಲಾಗದೆ ಟೀಕೆ ಮಾಡುತ್ತಿವೆ ಎಂದು ಅವರು ಆರೋಪಿಸಿದರು.

ಇದೇ ವೇಳೆ, ತಮ್ಮ ಪಕ್ಷದ ಕಾರ್ಯಕರ್ತರಿಗೂ ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿರುವುದಾಗಿ ಡಿ.ಕೆ. ಶಿವಕುಮಾರ್ ಹೇಳಿದರು.
Hassan
ಗೃಹಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ: ಅರ್ಹರಿಗೆ ಮಾತ್ರ ಸೌಲಭ್ಯ ಕಲ್ಪಿಸಲು ವಿದ್ಯುತ್ ಇಲಾಖೆ ಕಾರ್ಯಾಚರಣೆ
ಅರಸೀಕೆರೆ: ರಾಜ್ಯ ಸರ್ಕಾರದ ನಿರ್ದೇಶನದಂತೆ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಅರ್ಹತೆ ಪರಿಶೀಲನೆ ಕಾರ್ಯಕ್ಕೆ ಅರಸೀಕೆರೆಯಲ್ಲಿ ವೇಗ ದೊರೆತಿದೆ. ಕರ್ನಾಟಕ ವಿದ್ಯುತ್ ಸರಬರಾಜು ಇಲಾಖೆಯ ಸಿಬ್ಬಂದಿ ಮನೆ-ಮನೆಗೆ ತೆರಳಿ ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ, ಪರಿಶೀಲನಾ ಅರ್ಜಿಗಳನ್ನು ಭರ್ತಿ ಮಾಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಗೃಹಜ್ಯೋತಿ ಯೋಜನೆಯ ಸೌಲಭ್ಯವು ನಿಜವಾದ ಅರ್ಹ ಕುಟುಂಬಗಳಿಗೆ ಮಾತ್ರ ತಲುಪಬೇಕು ಹಾಗೂ ಯೋಜನೆಯ ದುರುಪಯೋಗವನ್ನು ತಡೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ವಿಶೇಷ ಪರಿಶೀಲನಾ ಅಭಿಯಾನಕ್ಕೆ ಚಾಲನೆ ನೀಡಿದೆ. ಇದಕ್ಕಾಗಿ ಫಲಾನುಭವಿಗಳ ವಿಳಾಸ, ವಿದ್ಯುತ್ ಸಂಪರ್ಕದ ವಿವರ, ಕುಟುಂಬದ ಮಾಹಿತಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ದಾಖಲಿಸಲಾಗುತ್ತಿದೆ.

ಪರಿಶೀಲನೆ ವೇಳೆ ಫಲಾನುಭವಿಗಳು ತಮ್ಮ ವಿದ್ಯುತ್ ಬಿಲ್, ಆಧಾರ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿಬ್ಬಂದಿಗೆ ಒದಗಿಸುವಂತೆ ಸೂಚಿಸಲಾಗಿದೆ. ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಅದನ್ನು ತಕ್ಷಣವೇ ಸರಿಪಡಿಸಿ, ಅರ್ಹರಿಗೆ ಯೋಜನೆಯ ಲಾಭ ನಿರಂತರವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ವಿದ್ಯುತ್ ಇಲಾಖೆಯ ಸಿಬ್ಬಂದಿ ಅಧಿಕೃತ ಗುರುತಿನ ಚೀಟಿಯೊಂದಿಗೆ ಮನೆಗಳಿಗೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರು ಯಾವುದೇ ಅನುಮಾನ ಅಥವಾ ಗೊಂದಲಕ್ಕೆ ಒಳಗಾಗದೆ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.

ನಗರದ ವಿವಿಧ ವಾರ್ಡ್ಗಳಲ್ಲಿ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಹೆಚ್ಚಿನ ನಿವಾಸಿಗಳು ಇಲಾಖೆಯ ಸಿಬ್ಬಂದಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸುತ್ತಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆ ಪಾರದರ್ಶಕವಾಗಿ ಜಾರಿಯಾಗಲು ಈ ಪರಿಶೀಲನಾ ಪ್ರಕ್ರಿಯೆ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಜನೆಯ ಅರ್ಹ ಫಲಾನುಭವಿಗಳ ಮಾಹಿತಿ ನವೀಕರಣದೊಂದಿಗೆ ಅನರ್ಹರು ಸೌಲಭ್ಯ ಪಡೆಯುವುದನ್ನು ತಡೆಯುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಪರಿಶೀಲನಾ ಕಾರ್ಯ ಪೂರ್ಣಗೊಂಡ ಬಳಿಕ ಸರ್ಕಾರದ ಮಾರ್ಗಸೂಚಿಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.
Hassan
ತಾಯಿ ಅಂತ್ಯಕ್ರಿಯೆ ವೇಳೆ ಡಿಕೆಶಿ ಹೆಸರೇಳದ ಬಗ್ಗೆ ಎಚ್ಡಿಕೆ ಸ್ಪಷ್ಟನೆ
ಹಾಸನ : ತಮ್ಮ ತಾಯಿ ಚೆನ್ನಮ್ಮರ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ಸಲ್ಲಿಸಿದ್ದಕ್ಕೆ ನಿನ್ನೆಯೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಧನ್ಯವಾದ ಹೇಳಿದ್ದಾರೆ. ಆದರೆ, ಮಾತನಾಡುವಾಗ ಕೇಂದ್ರ ಸಚಿವರ ಹೆಸರುಗಳನ್ನು ಉಲ್ಲೇಖಿಸಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಹೆಸರು ಮಾತ್ರ ಹೇಳದಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಬೇರೆ ಬೇರೆ ರೀತಿಯ ಆರೋಪ ಪ್ರತ್ಯಾರೋಪಗಳು ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಕುಮಾರಸ್ವಾಮಿಯೇ ತಾಯಿ ಸಮಾಧಿ ಬಳಿ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಎಂದು ಹೇಳಿದ್ದು ಡಿ.ಕೆ.ಶಿವಕುಮಾರ್ ಅವರ ಕುರಿತೇ ಹೇಳಿದ್ದು ಎಂದಿದ್ದಾರೆ. ಈ ಮೂಲಕ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ.
ಅಂತಿಮ ದರ್ಶನದ ವೇಳೆ ನಾನು ಮೈಕ್ ಹಿಡಿದು ಮಾತನಾಡಿದೆ. ನಾನು ಮಾತಾಡಬೇಕು ಅನ್ನೊ ಉದ್ದೇಶ ಇರಲಿಲ್ಲ. ಮೈಕ್ ಹಿಡಿದ ವೇಳೆ ನನ್ನ ತಾಯಿಯೇ ನನ್ನನ್ನು ಮಾತನಾಡಿಸಿದಂತಾಗಿದೆ. ಆ ವೇಳೆ ನಾನು ಕೇಂದ್ರ ಸರ್ಕಾರದ ಮಂತ್ರಿಯ ಹೆಸರನ್ನ ಹೇಳಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಹೆಸರನ್ನ ಹೇಳಲಿಲ್ಲ ಅನ್ನೋ ಮಾತು ಕೇಳಿ ಬಂದಿದೆ. ಡಿಕೆಶಿ ಹೆಸರು ಹೇಳದೆ ಇರೋದು ಉದ್ದೇಶಪೂರ್ವಕವಾಗಿ ಅಲ್ಲ. ಮುಖ್ಯಮಂತ್ರಿ ಎಂದು ಹೇಳಿದ್ದು ಡಿ.ಕೆ.ಶಿವಕುಮಾರ್ ಅವರ ಕುರಿತೇ ಹೇಳಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ.

ಅಂತಹ ಮಟ್ಟಕ್ಕೆ ನಾನು ಹೋಗೋದಿಲ್ಲ
ಸಿಎಂ ಡಿ.ಕೆ. ಶಿವಕುಮಾರ್ ಹೆಸರು ಹೇಳಲಿಲ್ಲ ಎಂದು ಒಂದೆರಡು ಜನ ಹೇಳಿದರು. ಆದರೆ ನಾನು ನನ್ನ ಇಚ್ಛೆಯಂತೆ ಬಂದ ಪದ ಅಲ್ಲ. ನಾನು ಸಣ್ಣತನ ತೋರಿದೆ ಎಂದು ಯಾರೂ ಕೂಡ ಭಾವಿಸಬೇಡಿ. ಡಿ.ಕೆ. ಶಿವಕುಮಾರ್ ಹೆಸರು ಹೇಳದೆ ಇರೋದು ಉದ್ದೇಶಪೂರ್ವಕವಾಗಿ ಅಲ್ಲ. ಮುಖ್ಯಮಂತ್ರಿ ಎಂದು ಹೇಳಿದ್ದು ಡಿಕೆಶಿ ಅವರ ಕುರಿತೇ ಹೇಳಿದ್ದು. ಅಂತಹ ಮಟ್ಟಕ್ಕೆ ನಾನು ಹೋಗೋದೂ ಇಲ್ಲ. ನಮ್ಮ ಕುಟುಂಬದಲ್ಲೂ ಕೂಡ ಭಿನ್ನಾಭಿಪ್ರಾಯ ಬರುತ್ತವೆ. ಆದರೆ ಎಲ್ಲವನ್ನೂ ಮರೆತು ಒಂದು ಧ್ವನಿಯಾಗಿ ಬದುಕುತ್ತಿದ್ದೇವೆ. ಜೇನಿನಗೂಡು ನಾವೆಲ್ಲ ಎನ್ನುವಂತೆ ನಾವು ಬದುಕುತ್ತಿದ್ದೇವೆ. ಪ್ರತಿ ಕುಟುಂಬವೂ ಹೀಗೆ ಬದುಕಲಿ ಅನ್ನೋದು ನನ್ನ ಸಂದೇಶ ಎಂದಿದ್ದಾರೆ.
Hassan
ಚೆನ್ನಮ್ಮ ಸಮಾಧಿಗೆ ದೇವೇಗೌಡ, ಕುಮಾರಸ್ವಾಮಿ ಭೇಟಿ: ಭಾವುಕರಾದ ಮಾಜಿ ಪ್ರಧಾನಿ, ನಿತ್ಯ ಪೂಜೆಗೆ ನಿರ್ಧಾರ
ಹೊಳೆನರಸೀಪುರ : ಜು.21: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರ ಸಮಾಧಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕುಟುಂಬ ಸದಸ್ಯರು ಹಾಗೂ ಬಂಧುಗಳು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಸಮಾಧಿ ಸ್ಥಳದಲ್ಲಿ ನಿತ್ಯ ಪೂಜೆ, ಸಹಸ್ರನಾಮ ಪಠಣ ಹಾಗೂ ನಂದಾದೀಪ ಬೆಳಗುವ ವ್ಯವಸ್ಥೆ ಮಾಡುವ ನಿರ್ಧಾರ ಕೈಗೊಳ್ಳಲಾಯಿತು. ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಸಮೀಪದ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಚನ್ನಮ್ಮ ಅವರ ಸಮಾಧಿಗೆ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪುತ್ರಿ ಅನಸೂಯಾ ಸೇರಿದಂತೆ ಕುಟುಂಬ ಸದಸ್ಯರು ಆಗಮಿಸಿ ನಮನ ಸಲ್ಲಿಸಿದರು.

ಚನ್ನಮ್ಮ ಅವರು ಬದುಕಿದ್ದಾಗ ಪ್ರತಿದಿನ ಪಠಿಸುತ್ತಿದ್ದ ಲಲಿತ ಸಹಸ್ರನಾಮ, ವಿಷ್ಣು ಸಹಸ್ರನಾಮ ಹಾಗೂ ಶಿವನಿಗೆ ಪ್ರಿಯವಾದ ರುದ್ರ ಚಮಕ ಶ್ಲೋಕಗಳನ್ನು ಸಮಾಧಿ ಎದುರು ಅರ್ಚಕರು ಪಠಿಸಿದರು. ಮೂವರು ಅರ್ಚಕರು ಶ್ಲೋಕಗಳ ಉದ್ಘೋಷಣೆ ಮೂಲಕ ಪೂಜೆ ನೆರವೇರಿಸಿದರೆ, ಪುತ್ರಿ ಅನಸೂಯಾ ಸಮಾಧಿ ಎದುರು ನೆಲದ ಮೇಲೆ ಕುಳಿತು ಶ್ಲೋಕ ಪಠಣದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಪುತ್ರಿ ಅನಸೂಯಾ ನಂದಾದೀಪ ಹಚ್ಚಿದರು.

ಜುಲೈ 30ರಂದು ನಡೆಯಲಿರುವ ಆರಾಧನಾ ಮಹೋತ್ಸವದವರೆಗೆ ದೀಪ ಆರದಂತೆ ವ್ಯವಸ್ಥೆ ಮಾಡುವಂತೆ ಕುಟುಂಬ ಸದಸ್ಯರು ಸೂಚನೆ ನೀಡಿದರು. ಮುಂದೆಯೂ ಪ್ರತಿನಿತ್ಯ ಸಮಾಧಿ ಸ್ಥಳದಲ್ಲಿ ಲಲಿತ ಸಹಸ್ರನಾಮ, ವಿಷ್ಣು ಸಹಸ್ರನಾಮ ಪಠಿಸಿ ಪೂಜೆ ನಡೆಸಲು ತೀರ್ಮಾನಿಸಲಾಯಿತು. ಪತ್ನಿಯನ್ನು ಕಳೆದುಕೊಂಡ ಬಳಿಕ ಮೊದಲ ಬಾರಿಗೆ ಸಮಾಧಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಭಾವುಕರಾಗಿ ಕಣ್ಣೀರಿಟ್ಟರು. ಭೂಮಿ ತಾಯಿಯ ಮಡಿಲಿನಲ್ಲಿ ಚಿರನಿದ್ರೆಗೆ ಜಾರಿರುವ ತಮ್ಮ ಬಾಳ ಸಂಗಾತಿಯನ್ನು ನೆನೆದು ಕೆಲಕಾಲ ಮೌನವಾಗಿ ನಿಂತ ಅವರು, ಸಮಾಧಿಗೆ ಪ್ರದಕ್ಷಿಣೆ ಹಾಕಿ ನಮನ ಸಲ್ಲಿಸಿದರು. ಜುಲೈ 30ರಂದು ನಡೆಯಲಿರುವ ಚನ್ನಮ್ಮ ಅವರ ಆರಾಧನಾ ಮಹೋತ್ಸವದ ಅಂಗವಾಗಿ ಸಮಾಧಿ ಸ್ಥಳದಲ್ಲಿ ಪ್ರತಿದಿನ ವಿಶೇಷ ಪೂಜೆ, ಸಹಸ್ರನಾಮ ಪಠಣ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.
-
Mysore9 hours agoಹುಣಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆ; ಸಾವಿನ ಕಾರಣ ನಿಗೂಢ
-
Mysore15 hours agoನಂಜನಗೂಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು, ಪೊಲೀಸರ ವಶಕ್ಕೆ
-
Kodagu12 hours agoಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ
-
Politics4 hours agoಪರಪ್ಪನ ಅಗ್ರಹಾರಕ್ಕೆ ವಿಜಯಲಕ್ಷ್ಮಿ, ರಕ್ಷಿತಾ ಭೇಟಿ: ದರ್ಶನ್ ಆರೋಗ್ಯ ವಿಚಾರಣೆ
-
Politics5 hours agoರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ: 18 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
-
Kodagu5 hours agoಹಾರಂಗಿ ಜಲಾಶಯದ ನೀರು ಕುಡಿಯಲು ಮಾತ್ರ: ರೈತರಿಗೆ ಬೆಳೆ ಬೆಳೆಯದಂತೆ ಮನವಿ
-
Kodagu7 hours agoಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಡಾ. ಮಂತರ್ ಗೌಡ ಚಾಲನೆ
-
Manglore3 hours agoಮನೆ ಕಾಮಗಾರಿಗೆ ಬಂದು 6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಕೃತ್ಯ ಎಸಗಿದ 24 ಗಂಟೆಯೊಳಗೆ ಆರೋಪಿ ಅಂದರ್
