Connect with us

Mandya

ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ? ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

Published

on

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಗೆಲುವು ಶತಸಿದ್ಧ: ಸಿ.ಎಂ.ಸಿದ್ದರಾಮಯ್ಯ ಭರವಸೆ

ಕೆ.ಆರ್.ಪೇಟೆ ಕೃಷ್ಣ ಅವರನ್ನು ಮಂತ್ರಿ ಮಾಡಲು ದೇವೇಗೌಡರು ಒಪ್ಪಿರಲಿಲ್ಲ. ಆಗ ಸ್ಪೀಕರ್ ಆಗಲು ಸಲಹೆ ನೀಡಿದೆ: ಸಿ.ಎಂ

ಕೆಂಪೇಗೌಡ ಜಯಂತಿ ಆರಂಭಿಸಿದ್ದು ನಾವು, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ನಾವು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದ್ದು ನಾವು: ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮಾಡಿದ್ದೇನು ಹೇಳಿ: ಸಿ.ಎಂ ಪ್ರಶ್ನೆ

ಮಂಡ್ಯ (ಕೆ.ಆರ್.ಪೇಟೆ) ಏ 20: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಗೆಲುವು ಶತಸಿದ್ಧ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು.

ಮಂಡ್ಯ ಲೋಕಸಭಾ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರವಾಗಿ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಮ್ಮನಸ್ಸಿನಿಂದ, ಒಟ್ಟಿಗೇ ಕಾಂಗ್ರೆಸ್ ಗೆಲ್ಲಿಸಲು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬೀಳುವುದು ಖಚಿತ ಎಂದರು.

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ಮಾಡಿದ್ದೇನು?

ಕೆಂಪೇಗೌಡ ಜಯಂತಿ ಆರಂಭಿಸಿದ್ದು ನಾವು, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ನಾವು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದ್ದು ನಾವು: ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮಾಡಿದ್ದೇನು ಹೇಳಿ ಎಂದು ಸಿ.ಎಂ ಪ್ರಶ್ನಿಸಿದರು.

ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್ ನಿಂದಲೇ ಎಂದು ವಿವರಿಸಿದರು.

ಕೆ.ಆರ್.ಪೇಟೆ ಕೃಷ್ಣರನ್ನು ಸ್ಮರಿಸಿ ಶ್ಲಾಘಿಸಿದ ಸಿಎಂ

ಕೆ.ಆರ್.ಪೇಟೆ ಕೃಷ್ಣ ಅವರು ಅತ್ಯಂತ ಸಜ್ಜನರೂ, ಜನಪರ ಕಾಳಜಿ ಇದ್ದವರೂ ಆಗಿದ್ದರು. ಇವರನ್ನು ಮಂತ್ರಿ ಮಾಡಬೇಕು ಎನ್ನುವ ಇಚ್ಚೆ ನಮಗೆಲ್ಕರಿಗೂ ಇತ್ತು.‌ ಆದರೆ, ಮಂತ್ರಿ ಮಾಡಲು ದೇವೇಗೌಡರು ಒಪ್ಪಿರಲಿಲ್ಲ. ಆಗ ಸ್ಪೀಕರ್ ಆಗಲು ಸಲಹೆ ನೀಡಿದೆ ಎಂದು ತಮ್ಮ ಮತ್ತು ಕೆ.ಆರ್.ಪೇಟೆ ಕೃಷ್ಣ ಅವರ ನಡುವಿನ ಒಡನಾಟವನ್ನು ಸ್ಮರಿಸಿದರು.

ಮೋದಿ ಅವರು ಹೇಳಿದ್ದರಲ್ಲಿ ಒಂದೇ ಒಂದು ಭರವಸೆ ಈಡೇರಿಸಿದ್ದರೆ ತೋರಿಸಲಿ ನೋಡೋಣ: ಸಿ.ಎಂ.ಸವಾಲು

ಮೋದಿ ಅವರು ಹೇಳಿದ್ದರಲ್ಲಿ ಒಂದೇ ಒಂದು ಭರವಸೆಯನ್ನು ಈಡೇರಿಸಿದ್ದರೆ ತೋರಿಸಲಿ ನೋಡೋಣ ಎಂದು ಸಿ.ಎಂ ಸವಾಲು ಹಾಕಿದರು.

ಕೇವಲ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸುವುದರಲ್ಲಿ ಬಿಜೆಪಿಯವರು ನಿಸ್ಸೀಮರು.

ಮೋದಿಯವರಿಗೆ ಕರ್ನಾಟಕ ನೆನಪಾಗುವುದೇ ಚುನಾವಣೆ ಬಂದಾಗ. ಬರಗಾಲ ಬಂದಾಗಲೂ ರಾಜ್ಯದ ಕಡೆ ತಲೆ ಹಾಕಲಿಲ್ಲ. ಪ್ರವಾಹ ಬಂದಾಗ ರಾಜ್ಯದ ಕಡೆ ತಿರುಗಿಯೂ ನೋಡಲಿಲ್ಲ. ಚುನಾವಣೆ ಬಂತು ನೋಡಿ ಮೋದಿ ಓಡೋಡಿ ಬಂದಿದ್ದಾರೆ ಎಂದು ವ್ಯಂಗ್ಯವಾಡಿದರು.

ಮೋದಿಯವರನ್ನು ವಾಚಾಮಗೋಚರವಾಗಿ ಟೀಕಿಸುತ್ತಿದ್ದ ದೇವೇಗೌಡರು ಈಗ ಮೋದಿಗೂ ತಮಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ಇವರಿಬ್ಬರ ನಡುವಿನ ಸಂಬಂಧ ಅಷ್ಟು ಚೆನ್ನಾಗಿದ್ದರೆ ಮೋದಿಯವರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ದೇವೇಗೌಡರು ಸರಿಪಡಿಸಲಿ ನೋಡೋಣ. ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ನೋಡೋಣ ಎಂದು ಸವಾಲು ಹಾಕಿದರು.

ರಾಜ್ಯದ ರೈತರಿಗೆ ಕೇಂದ್ರದಿಂದ ಇದುವರೆಗೂ ಒಂದೇ ಒಂದು ರೂಪಾಯಿ ಬರಗಾಲದ ಹಣ ಬಂದಿಲ್ಲ. ಅದು ನಮ್ಮ ರಾಜ್ಯದ ಪಾಲು. ನಮ್ಮ ಪಾಲನ್ನು ಕೊಡದೆ ಸತಾಯಿಸುತ್ತಿರುವ ಮೋದಿಯವರಿಗೆ ಹೇಳಿ ಈ ಹಣ ಕೊಡಿಸಲಿ ಎಂದು ಮತ್ತೊಂದು ಸವಾಲು ಹಾಕಿದರು.

ಇದ್ಯಾವುದನ್ನೂ ನಿಮ್ಮಿಂದ ಮಾಡಿಸಲು ಸಾಧ್ಯವಿಲ್ಲ ಎಂದಾದರೆ ಅದು ರಾಜ್ಯದ ಜನತೆಗೆ ಮಾಡಿದ ದ್ರೋಹವಲ್ಲವೇ ಎಂದು ಪ್ರಶ್ನಿಸಿದರು

Continue Reading
Click to comment

Leave a Reply

Your email address will not be published. Required fields are marked *

Mandya

ಹುಟ್ಟಿನಿಂದಲೇ ಬರುವ ಖಾಯಿಲೆಗಳನ್ನು ಆರಂಭದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಿ: ಕೆ.ಆರ್.‌ನಂದಿನಿ 

Published

on

ಮಂಡ್ಯ: ಅನುವಂಶಿಕ ಅಥವಾ ಹುಟ್ಟಿನಿಂದಲೇ ಬರುವ ಕಾಯಿಲೆಗಳನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡಲು ಅಗತ್ಯ ಕ್ರಮವಹಿಸುವಂತೆ ಆರ್‌ಬಿಎಸ್‌ಕೆ ಕಾರ್ಯಕ್ರಮದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮಂಡ್ಯ ಜಿ.ಪಂ. ಸಿಇಓ ಕೆ.ಆರ್.‌ನಂದಿನಿ ಸೂಚಿಸಿದರು.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಅವರು, 0-5 ಮತ್ತು 6-18 ವಯೋಮಾನದ ಮಕ್ಕಳನ್ನು ಕಾಲ ಕಾಲಕ್ಕೆ ತಪಾಸಣೆಗೊಳಪಡಿಸಿ ಯಾವುದಾದರೂ ಖಾಯಿಲೆಗಳು ಇವೆಯೇ ಎಂಬ ಬಗ್ಗೆ ಖಚಿತಪಡಿಸಿಕೊಂಡು ಕಾಯಿಲೆಗೆ ಅನುಗುಣವಾಗಿ ಚಿಕಿತ್ಸೆ ನೀಡಬೇಕೆಂದು ಸೂಚಿಸಿದರು.
ಜಿಲ್ಲಾ ಇಐಸಿ ಕೇಂದ್ರಕ್ಕೆ ಭೇಟಿ ನೀಡಿರುವ ಮಕ್ಕಳ ಪೋಷಕರೊಂದಿಗೆ ಸಂವಾದ ನಡೆಸಿ, ಸೂಕ್ತ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಹಾಗೂ ಕೇಂದ್ರದಲ್ಲಿ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.  ತೀವ್ರತರವಾದ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಒಳರೋಗಿಯಾಗಿ ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಡಿಸ್ಚಾರ್ಜ್‌ ನಂತರವು ನಿರಂತರ ಅನುಸರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ನೇತ್ರ ಸಹಾಯಕರು ರಾಜೀನಾಮೆ ನೀಡಿದ್ದು, ನೋಟೀಸ್‌ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ನೋಟೀಸ್‌ ಅವಧಿ ಪೂರ್ಣಗೊಳ್ಳುವ ಮುನ್ನವೇ ಹೊಸ ನೇತ್ರ ಸಹಾಯಕರನ್ನು ನೇಮಕ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಲು ಸೂಚಿಸಿದರು.
ಪಿಸಿಯೋ ಥೆರಪಿ ವಿಭಾಗದಲ್ಲಿ ಅಧಿಕ ಕಾರ್ಯಭಾರ ಇರುವುದರಿಂದ ಕುಷ್ಠರೋಗ ನಿರ್ಮೂಲನಾ ವಿಭಾಗದಲ್ಲಿನ ಪಿಸಿಯೋ ಥೆರಪಿ ಸಹಾಯಕರನ್ನು ಹೆಚ್ಚುವರಿಯಾಗಿ ಡಿ ಇ ಐ ಸಿ ವಿಭಾಗಕ್ಕೆ ನಿಯೋಜಿಸುವಂತೆ ಸೂಚಿಸಿದರು.
ಶ್ರವಣ ದೋಷ ಪತ್ತೆ ಹಚ್ಚಲು ಬೆರಾ ತಂತ್ರಜ್ಞಾನ ಹೊಂದಿರುವ ಯಂತ್ರೋಪಕರಣವನ್ನು ಖರೀದಿಸುವ ಸಂಬಂಧ ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆಯ ಅಧಿಕಾರಿಯವರೊಂದಿಗೆ ಚರ್ಚಿಸಿ ಸರಬರಾಜು ಮಾಡಿಸಿಕೊಳ್ಳಲು ತಿಳಿಸಿದರು. ಕಳೆದ ಸಾಲಿನಲ್ಲಿ ಸದರಿ ಯಂತ್ರೋಪಕರಣ ಖರೀದಿಗೆ ನಿಗಧಿಗೊಳಿಸಲಾಗಿದ್ದ ಅನುದಾನ ವ್ಯಪಗತವಾಗಿತ್ತು. ಪ್ರಸಕ್ತ ಸಾಲಿನಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮವಹಿಸಲು ತಿಳಿಸಿದರು.
ಡಿ ಇ ಐ ಸಿ ಯಲ್ಲಿ ಇರುವ ಸೌಲಭ್ಯಗಳು ಮತ್ತು ಕೇಂದ್ರದ ಕಾರ್ಯನಿರ್ವಹಣೆಯ ಬಗ್ಗೆ ಹಾಗೂ ಫಲಾನುಭವಿಗಳಿಂದ ಅಭಿಪ್ರಾಯ ಸಂಗ್ರಹದ ವಿಡಿಯೋ ಚಿತ್ರೀಕರಣ ಮಾಡಿ, ಪ್ರಚಾರ ಮಾಡಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಡಾ. ಮಂಜುಳಾ, ಆರ್. ಸಿ. ಹೆಚ್ ಡಾ. ಅಶ್ವತ್, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ. ಸೋಮಶೇಖರ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
Continue Reading

Mandya

ಅಪೌಷ್ಠಿಕ ಮಕ್ಕಳ ಪುನರ್ವಸತಿ ಕೇಂದ್ರಕ್ಕೆ ಜಿ.ಪಂ. ಸಿಇಒ ಭೇಟಿ

Published

on

ಮಂಡ್ಯ : ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದು ಅಪೌಷ್ಠಿಕ ಮಕ್ಕಳನ್ನು ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ ಮಾಡುವ ಮೂಲಕ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವಂತೆ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಸೂಚಿಸಿದರು.

ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿನ ಅಪೌಷ್ಠಿಕ ಮಕ್ಕಳ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಕ್ಕೆ ಕರೆತರಲು ಮಕ್ಕಳ ತಾಯಂದಿರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಈವರೆಗೆ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಕ್ಕೆ ಎಷ್ಟು ಮಕ್ಕಳು ದಾಖಲಾಗಿದ್ದಾರೆ, ಎಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಹೊರಬಂದಿದ್ದಾರೆ ಎಂಬುದರ ಬಗ್ಗೆ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದರು. ಮುಂದಿನ ಸಭೆಯಲ್ಲಿ ಅಂಕಿ- ಅಂಶಗಳೊಂದಿಗೆ ವರದಿ ನೀಡಬೇಕು. ಮಕ್ಕಳು ಹಾಗೂ ತಾಯಿಂದಿರಿಗೆ 14 ದಿನ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಬೇಕು ಎಂದು ತಿಳಿಸಿದರು.

ಪೌಷ್ಠಿಕಾಂಶ ಪುನರ್ವಸತಿ ಕೇಂದ್ರದಲ್ಲಿ ಮಕ್ಕಳಿಗೆ ಹಾಗೂ ತಾಯಂದಿರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರಿಂದ ವ್ಯಾಪಕ ಅರಿವು ಮೂಡಿಸಲು ಅಗತ್ಯ ಕ್ರಮವಹಿಸುವಂತೆ ಸಿಇಓ ಅವರು ಸೂಚಿಸಿದರು.

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾಮ್ (ವಿಪರೀತ ಕಡಿಮೆ ತೂಕ ಮಕ್ಕಳು) ಮತ್ತು ಮ್ಯಾಮ್ (ಸಾಧಾರಣ ತೂಕದ ಮಕ್ಕಳು) ಮಕ್ಕಳನ್ನು ಗುರುತಿಸಿ ಮಕ್ಕಳನ್ನು ಎನ್ ಆರ್ ಸಿ ಕೇಂದ್ರಕ್ಕೆ ಕರೆತರುವಂತಹ ಜವಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ಆಯಾ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೂಚಿಸಬೇಕು ಎಂದು ತಿಳಿಸಿದರು.

ಅಪೌಷ್ಠಿಕ ಮಕ್ಕಳನ್ನು ಸ್ಕ್ರೀನಿಂಗ್ ಮಾಡಿ ಸ್ಯಾಮ್ ಹಾಗೂ ಮ್ಯಾಮ್ ಗುರುತಿಸಲಾಗುತ್ತಿದೆ ಆದರೆ ತಾಯಿ ಹಾಗೂ ಮಕ್ಕಳನ್ನು ಒಪ್ಪಿಸಿ ಎನ್ ಆರ್ ಸಿ ಗೆ ಕರೆತರಲು ಕಷ್ಟವಾಗುತ್ತಿದೆ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಎಲ್ಲರು ಒಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಪ್ರತಿ ಸೋಮವಾರ ಕ್ಷೇತ್ರ ಭೇಟಿ ನೀಡುತ್ತಿದ್ದು, ಆ ಸಂದರ್ಭದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ತಮ್ಮ ವ್ಯಾಪ್ತಿಯಲ್ಲಿ ಎಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ ಹಾಗೂ ಎಷ್ಟು ಮಕ್ಕಳನ್ನು ಎನ್‌ ಆರ್‌ ಸಿ ಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಪ್ರಸ್ತುತಪಡಿಸಲು ಕೋರಿದರು.

ಎನ್‌ ಆರ್‌ ಸಿ ಯಲ್ಲಿ ದಾಖಲಾಗಿರುವ ಸ್ಯಾಮ್ ಮತ್ತು ಮ್ಯಾಮ್ ಮಕ್ಕಳ ತಾಯಿಂದರ ಜೊತೆ ಮಾತನಾಡಿದ ಅವರು ಮಕ್ಕಳಿಗೆ ಮನೆಯಲ್ಲಿ ನೀಡುತ್ತಿರುವ ಪೌಷ್ಠಿಕ ಆಹಾರದ ಬಗ್ಗೆ ತಾಯಿಂದಿರಿಂದ ಮಾಹಿತಿ ಪಡೆದರು. ಅಂಗನವಾಡಿ ಕಾರ್ಯಕರ್ತೆಯರು ನೀಡಿದ ಸಲಹೆಯ ಮೇರೆಗೆ ಎನ್ ಆರ್ ಸಿ ಕೇಂದ್ರಕ್ಕೆ ಬಂದಿರುವುದಾಗಿ ತಾಯಿಂದಿರು ಮಾಹಿತಿ ನೀಡಿದರು.

ಇದೇ ವೇಳೆ ಮಿಮ್ಸ್ ಹೆಚ್.ಒ.ಡಿ ಡಾ. ಶ್ರೀಧರ್, ಎನ್‌ ಆರ್‌ ಸಿ ನೊಡೆಲ್ ಅಧಿಕಾರಿ ಡಾ. ಮಂಜುಳಾ, ಆರ್. ಸಿ. ಹೆಚ್ ಡಾ. ಅಶ್ವತ್, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ. ಸೋಮಶೇಖರ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Continue Reading

Mandya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿ.ಪಂ. ಸಿಇಓ ಭೇಟಿ

Published

on

ಮಂಡ್ಯ: ಕೃಷ್ಣರಾಜಪೇಟೆ ತಾಲೂಕಿನ ರಂಗನಾಥ ಪುರ ಕ್ರಾಸ್ ಗ್ರಾಮ ಪಂಚಾಯಿತಿಯ ಆದಿಹಳ್ಳಿ ಗ್ರಾಮದಲ್ಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಸತಿ ಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿ/ವಿದ್ಯಾರ್ಥಿನಿಯರ ಕೊಠಡಿಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ ಹಾಗೂ ಕುಡಿಯುವ ನೀರು, ಅಡುಗೆ ಕೋಣೆ, ದಾಸ್ತಾನು ಕೊಠಡಿ ಹಾಗೂ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು.

ದ್ವಿತೀಯ ಪಿ.ಯು.ಸಿ ವಿಜ್ಞಾನ ಪ್ರಯೋಗಾಲಯಕ್ಕೆ ಭೇಟಿ ನೀಡಿ ಜೀವಕೋಶವನ್ನು ಸೂಕ್ಷ್ಮದರ್ಶಕ ಯಂತ್ರದ ಮೂಲಕ ಪ್ರಾಯೋಗಿಕವಾಗಿ ಪರೀಕ್ಷಿಸುತ್ತಿರುವುದನ್ನು ವೀಕ್ಷಿಸಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಶಾಲೆಯಲ್ಲಿನ ಗಣಕಯಂತ್ರ ಕೊಠಡಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಭವಿಷ್ಯದಲ್ಲಿ ಯಾವ ರೀತಿಯ ಸೇವೆಗೆ ಸೇರಬೇಕು ಎಂಬ ಕನಸನ್ನು ಹೊಂದಿದ್ದೀರಿ ಎಂಬ ಬಗ್ಗೆ ಮಾಹಿತಿ ಪಡೆದು ಕನಸು ಸಾಕಾರಗೊಳಿಸಿಕೊಳ್ಳಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತರಿಗೆ ಸಿ.ಬಿ.ಎಸ್.ಇ ಪಠ್ಯಕ್ರಮ ಇರುವ ಶಾಲೆ ಇದಾಗಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ನಡೆಸುವಂತೆ ಪ್ರೋತ್ಸಾಹಿಸಿದರು.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ವಿದ್ಯಾಭ್ಯಾಸ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗೀ ನಿಮ್ಮ ಜೀವನದ ಗುರಿ ತಲುಪಲು ಹಾಗೂ ನಿಮ್ಮ ಕನಸನ್ನು ಸಕಾರಗೊಳಿಸಿಕೊಳ್ಳಲು ವಿದ್ಯಾಬ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಂಡ್ಯ ಉಪವಿಭಾಗದ ತಾಲ್ಲೂಕು ವಿಸ್ತರಣಾಧಿಕಾರಿ ರುದ್ರೇಶ್, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

Continue Reading

Trending

error: Content is protected !!