Connect with us

Mandya

ತಮಿಳುನಾಡಿಗೆ ನೀರ ಹರಿಸಲು ಆದೇಶ – ಮಂಡ್ಯದಲ್ಲಿ ರೈತರ ಆಕ್ರೋಶ

Published

on

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಾಹಣ ಪ್ರಾಧಿಕಾರ ನೀಡಿರುವ ಆದೇಶಕ್ಕೆ ಮಂಡ್ಯ ಜಿಲ್ಲೆಯ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿರುವುದನ್ನು ಖಂಡಿಸಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಕನ್ನಡಪರ, ಪ್ರಗತಿಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು ಮಂಡ್ಯ ನಗರದ ಸಂಜಯ ವೃತ್ತದಲ್ಲಿ ರಸ್ತೆತಡೆ ನಡೆಸಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ಬಾರಿ ಸಮಿತಿಯು ಕಾವೇರಿ ಕೊಳ್ಳದ ರೈತರಿಗೆ ಮರಣ ಶಾಸನ ಬರೆದು ರೈತರ ಬಾಳಿಗೆ ಬೆಂಕಿ ಇಡುತ್ತಿದೆ ಎಂದು ಕಿಡಿಕಾರದರು.

ಕಳೆದ ವರ್ಷ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ. ಇದರಿಂದ ರೈತರು ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಈಗಲೂ ಸಹ ಎರಡನೇ ಬೆಳೆ ಹಾಕಿಲ್ಲ. ಇದ್ದ ನೀರನ್ನು ಎಲ್ಲಾ ತಮಿಳುನಾಡಿಗೆ ನಿರಂತರವಾಗಿ ಹರಿಸಲಾಯಿತು.

ಇದೀಗ ಜಲಾಶಯಕ್ಕೆ ಸ್ವಲ್ಪ ಪ್ರಮಾಣದ ನೀರು ಹರಿದು ಬಂದಿದ್ದು, ಬೆಳೆ ಬೆಳೆಯಲು ನೀರು ನೀಡಿಲ್ಲ. ಕೇವಲ ಕೆರೆ ಕಟ್ಟೆಗಳಿಗೆ ಮಾತ್ರ ನೀರು ಹರಿಸಲಾಗಿದೆ. ಇಂತಹ ಪರಿಸ್ಥಿತಿ ಇರುವಾಗ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಬಿಡಲು ಆದೇಶ ಮಾಡಿರುವುದು ಅವೈಜ್ಞಾನಿಕವಾಗಿದೆ.

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಸಮಿತಿಯ ಆದೇಶವನ್ನು ಪಾಲನೆ ಮಾಡಬಾರದು. ಕೆ.ಆರ್.ಎಸ್ ಜಲಾಶಯದಲ್ಲಿ 26 ಟಿಎಂಸಿ ನೀರು ಸಂಗ್ರಹವಾಗಿದೆ. ನೆರೆ ರಾಜ್ಯಕ್ಕೆ 19 ಟಿಎಂಸಿ ನೀರು ಬಿಟ್ಟರೆ ಕಾವೇರಿ ಕೊಳ್ಳದ ರೈತರ ಗತಿ ಏನು ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿರವರಿಗೆ ವಾಸ್ತವ ಪರಿಸ್ಥಿತಿ ಗೊತ್ತಿದೆ. ಇಲ್ಲಿನ ರೈತರ ಬವಣೆಯನ್ನು ಕಣ್ಣಾರೆ ಕಂಡಿದ್ದಾರೆ. ರೈತರು ಬೆಳೆ ಹಾಕದ ಪರಿಸ್ಥಿತಿಯಲ್ಲಿದ್ದಾರೆ‌ ಆ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಕರ್ನಾಟಕದ ಕಾವೇರಿ ಕೊಳ್ಳ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ ಒಂದು ಟಿಎಂಸಿ ನೀರನ್ನು ಜು.31ರವರೆಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವುದು ಆವೈಜ್ಞಾನಿಕ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಈ ಆದೇಶವನ್ಬು ಪಾಲಿಸಬಾರದು. ಬರಗಾಲದ ಹಿನ್ನೆಲೆಯಲ್ಲಿ ರೈತರು ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಈಗಲೂ ಬೆಳೆ ಬೆಳೆಯುವ ಪರಿಸ್ಥಿತಿಯಲ್ಲಿ ಇಲ್ಲ. ಜಲಾಶಯಗಳು ಭರ್ತಿಯಾಗಿಲ್ಲ. ಆದರೂ ಸಹ ನೀರು ಹರಿಸಿ ಎಂದು ಆದೇಶ ಮಾಡಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಇಂತಹ ರೈತ ವಿರೋಧಿ ಆದೇಶವನ್ನು ಒಪ್ಪಬಾರದು ಎಂದು ಆಗ್ರಹಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಮಾತನಾಡಿ, ತಮಿಳುನಾಡಿಗೆ ನೀರು ಹರಿಸಿ ಎಂದು ಆದೇಶ ಮಾಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕದ ಕಾವೇರಿ ಕೊಳ್ಳ ಪ್ರದೇಶದ ವಾಸ್ತವ ಪರಿಸ್ಥಿತಿಯನ್ನು ಅರಿತಿಲ್ಲ. ಪ್ರತಿ ಬಾರಿ ನೀರು ಬಿಡಿ ಎಂದು ಆದೇಶ ಮಾಡುತ್ತಲೇ ಇದೆ. ಇರುವ 26 ಟಿಎಂಸಿಯಲ್ಲಿ 19 ಟಿಎಂಸಿ ನೀರು ಬಿಟ್ಟರೆ ಇಲ್ಲಿನ ರೈತರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು.

ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದ್ದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಧ್ಯಪ್ರವೇಶಿಸಿ ಇಲ್ಲಿನ ರೈತರಿಗೆ ನ್ಯಾಯ ದೊರಕಿಸಿ ಕೊಡಬೇಕು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಚುನಾವಣೆಗಾಗಿ ಚನ್ನಪಟ್ಟಣದ ಹಳ್ಳಿಯನ್ನು ಸುತ್ತುತ್ತಿದ್ದಾರೆ. ಮೊದಲು ಕಾವೇರಿ ಕೊಳದ ಪ್ರದೇಶವನ್ನ ಸುತ್ತಾಡಿ ಪರಿಸ್ಥಿತಿಯನ್ನು ಅರಿಯಲಿ. ಸಚಿವರಾದ ನಂತರ ಒಂದು ಬಾರಿಯೂ ಕಾವೇರಿ ಕಣಿವೆ ಪ್ರದೇಶ ಪ್ರವಾಸ ಮಾಡಿಲ್ಲ ಏತಕ್ಕಾಗಿ ಇವರಿಗೆ ನೀರಾವರಿ ಸಚಿವ ಸ್ಥಾನ ಎಂದು ಕಿಡಿಕಾರಿದರು.

ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಂ, ರೈತಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಶಿವಳ್ಳಿ ಚಂದ್ರಶೇಖರ್, ಮಲ್ಲನಾಯಕನ ಕಟ್ಟೆ ವಿಜಯ್ ಕುಮಾರ್, ಪಿ.ಜಿ.ನಾಗೇಂದ್ರ, ಸತ್ಯಭಾಮ, ಗೌರಮ್ಮ, ಕಮಲಮ್ಮ, ಎಂ ಎಲ್ ತುಳಸೀದರ್ ಸೇರಿದಂತೆ ಮತ್ತಿತರರು ಭಾಗವಹಿಸಿದರು.

Continue Reading
Click to comment

Leave a Reply

Your email address will not be published. Required fields are marked *

Mandya

ಮಳವಳ್ಳಿ ಪ್ರಜಾಸೌಧದ ಶಿಲಾನ್ಯಾಸ ಕಾರ್ಯಕ್ರಮ ಹಿನ್ನೆಲೆ ಡಿಸಿ ಭೇಟಿ – ಪರಿಶೀಲನೆ

Published

on

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಡಿ.21 ರಂದು ಮಳವಳ್ಳಿ ತಾಲ್ಲೂಕಿನಲ್ಲಿ ನೂತನವಾಗಿ ರೂ.16 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧದ ಶಿಲಾನ್ಯಾಸ ನೆರವೇರಿಸಲಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲನೆ ನಡೆಸಿದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ಯಾವುದೇ ಅಡಚಣೆಯಾಗದಂತೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಹಶೀಲ್ದಾರ್ ರವರಿಗೆ ಸೂಚಿಸಿದ ಅವರು, ಮಾನ್ಯ ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಭದ್ರತೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಸೂಕ್ತ ಪ್ರೊಟೊಕಾಲ್ ವ್ಯವಸ್ಥೆ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

Continue Reading

Mandya

ಡಿ.22, 23ಕ್ಕೆ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿದಾನಂ ಅವರ ಸಾನಿಧ್ಯದಲ್ಲಿ ಗುರುವಂದನಾ ಕಾರ್ಯಕ್ರಮ : ಕಶ್ಯಪ್‌ನಂದನ್

Published

on

ಮಂಡ್ಯ: ಹೊಯ್ಸಳ ಕರ್ನಾಟಕ ಸೇವಾ ಟ್ರಸ್ಟ್ ಹಾಗೂ ಶ್ರೀ ಶಂಕರ ಸೇವಾ ಪ್ರತಿಷ್ಠಾನದ ವತಿಯಿಂದ ಶ್ರೀ ಜಗದ್ಗುರು ಶಂಕರಾಚಾರ್‍ಯ ಮಹಾಸಂಸ್ಥಾನದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿದಾನಂ ಅವರ ಸಾನಿಧ್ಯದಲ್ಲಿ ಗುರುವಂದನಾ ಕಾರ್ಯಕ್ರಮವನ್ನು ಡಿ.22 ಮತ್ತು 23ರಂದು ಆಯೋಜಿಸಲಾಗಿದೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಕಶ್ಯಪ್‌ನಂದನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.22ರ ಸಂಜೆ ಮಹಾವೀರ ವೃತ್ತದಿಂದ ಪೂರ್ಣಕುಂಭ ಸ್ವಾಗ, ವೇದಘೋಷ, ಭಜನೆ, ನಾದಸ್ವರದೊಂದಿಗೆ ವಿ.ವಿ ರಸ್ತೆಗೆ ವಿದ್ಯಾಗಣಪತಿ ದೇವಾಸ್ಥನದವರೆಗೆ ಮರೆವಣಿಗೆ ಮಾಡಲಾಗುವುದು. ಮೆರವಣಿಗೆ, ವಿದ್ಯಾಗಣಪತಿ ದರ್ಶನ, ಮಹಾಮಂಗಳಾರತಿ ಜಗದ್ಗುರುಗಳಿಂದ ಕೈಲಾಸೇಶ್ವರ ಹಾಗೂ ನವಗ್ರಹ ದೇವರ ದರ್ಶನ ಮತ್ತು ಆರತಿ, ದಂಪತಿಗಳಿಂದ ಧೂಳಿ ಪೂಜೆ, ಫಲ ಸಮರ್ಪಣೆ ನೆರವೇರಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಪಾದಪೂಜೆ, ವಸ್ತ್ರಮರ್ಪಣೆ ಸೇವೆಗಳು ನಡೆಯಲಿದೆ ಎಂದರು.

ಡಿ.23 ರಂದು ಬೆಳಿಗ್ಗೆ 9.30ಕ್ಕೆ ನೆಹರು ನಗರದ ಶಂಕರಮಠಕ್ಕೆ ಶ್ರೀಗಳು ಆಗಮಿಸಲಿದ್ದಾರೆ. ಅಲ್ಲಿ ಶ್ರೀ ರತ್ನಗಣಪತಿ, ಚಂದ್ರಮೌಳೇಶ್ವರ ಹಾಗೂ ಶಾರದಾಂಬೆಗೆ ಆರತಿ ಶಂಕರ ಸೇವಾ ಪ್ರತಿಷ್ಠಾನದ ಟ್ರಸ್ಟಿಗಳಿಂದ ಫಲ ಸಮರ್ಪಣೆ ಹಾಗೂ ಶ್ರೀಗಳಿಂದ ಸ್ವಾಗತ ಸಮಿತಿ ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ ಫಲಮಂತ್ರಾಕ್ಷತೆ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಅದ್ಯಕ್ಷ ಸಿ.ಕೆ.ನರಸಿಂಹಸ್ವಾಮಿ, ಕಾರ್ಯಾಧ್ಯಕ್ಷ ಡಾ.ಅಶ್ವಿನ್ ನಾರಾಯಣ್, ಉಪಾಧ್ಯಕ್ಷ ಎಸ್.ಶಂಕರನಾರಾಯಣ ಶಾಸ್ತ್ರಿ, ಕಾರ್ಯದರ್ಶಿ ಹೊಳಲು ರಾಘವೇಂದ್ರ, ಪ್ರತಿಷ್ಠಾನದ ಅಧ್ಯಕ್ಷ ಎನ್.ಸುರೇಶ್, ಟ್ರಸ್ಟಿ ಟಿ.ಕೆ.ಚಂದ್ರಶೇಖರ್, ಗಣೇಶ್ ಇದ್ದರು.

Continue Reading

Mandya

ಡಿ.21ಕ್ಕೆ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂದ ರಾಜ್ಯ ಮಟ್ಟದ ಬೃಹತ್ ಕಾರ್ಯಕಾರಿ ಸಭೆ ಮತ್ತು ಚಿಂತನಾ ಸಮಾವೇಶ : ಪೂರ್ಣಿಮಾ ಗೊಮ್ಮಟೇಶ್

Published

on

ಮಂಡ್ಯ: ಶ್ರೀ ಜ್ವಾಲಾ ಮಾಲಿನಿ ಮಹಿಳಾ ಸಮಾಜದ ಆಶ್ರಯದಲ್ಲಿ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂದ ರಾಜ್ಯ ಮಟ್ಟದ ಬೃಹತ್ ಕಾರ್ಯಕಾರಿ ಸಭೆ ಮತ್ತು ಚಿಂತನಾ ಸಮಾವೇಶವನ್ನು ಡಿ.21 ರಂದು ನಗರದ ಮಹಾವೀರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀ ಜ್ವಾಲಾ ಮಾಲಿನಿ ಮಹಿಳಾ ಸಮಾಜದ ಅಧ್ಯಕ್ಷೆ ಪೂರ್ಣಿಮಾ ಗೊಮ್ಮಟೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ರಾಜ್ಯ ಮಟ್ಟದ ಜೈನ ಮಹಿಳಾ ಸಮ್ಮೇಳನ, ಕನ್ನಡ ಸಾಹಿತ್ಯ ಸೇವೆಗೆ ಜೈನ ಮಹಿಳೆಯರ ಕೊಡುಗೆ, ಅಲ್ಪಸಂಖ್ಯಾತ ಸಹಕ್ಕುಗಳು ಹಾಗೂ ಸ್ವಾಲಂಬನೆ ಬಗ್ಗೆ ಮಹತ್ವದ ನಿರ್ಣಯಗಳ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿರುವ ಮಹಿಳಾ ಪ್ರತಿನಿಧಿಗಳ ಸಮ್ಮುಖದಲ್ಲಿ ಸಮಾಜದ ಮತ್ತು ನಾಡಿನ ಹಿತದೃಷ್ಠಿಯಿಂದ ಕನ್ನಡ ಸಾರಸತ್ವ ಲೋಕಕ್ಕೆ ಜೈನ ಮಹಿಳೆಯರ ಸಮರ್ಪಣೆ, ಅಲ್ಪಸಂಖ್ಯಾತ ಹಕ್ಕುಗಳು ಮತ್ತು ಕೇಂದ್ರ ಸರಕಾರದ ಯೋಜನೆಗಳ ಸದುಪಯೋಗ, ಪರಿಸರ ಕಾಳಜಿ ಮತ್ತು ಸ್ವಾವಲಂಬನೆ- `ಕಸದಿಂದ ರಸ’ ಕಾರ್‍ಯಾಗಾರದ ವಿಷಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಚರ್ಚೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಡಾ.ಪ್ರೀತಿಶುಭಚಂದ್ರ, ನಗರಸಭೆ ಆಯುಕ್ತೆ ಪಂಪಶ್ರೀ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಧುಶ್ರೀ ಭಾಗವಹಿಸಲಿದ್ದಾರೆ. ಜೈನ ಸಮಾಜದ ಬಂಧುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷೆ ಅನುಷ ಮಹವೀರ್, ಕಾರ್ಯದರ್ಶಿ ಕುಸುಮ ಶಯನ್, ಖಜಾಂಚಿ ರಂಜಿತಪ್ರಸಾದ್, ಸಂಘಟನಾ ಕಾರ್ಯದರ್ಶಿ ಕೆ.ಎಸ್.ರತ್ನ ಇದ್ದರು.

Continue Reading

Trending

error: Content is protected !!