Mandya
ಮಾ.25 ಕ್ಕೆ ಆದಿಚುಂಚನಗಿರಿ ಗಂಗಾಧರೇಶ್ವರ ಸ್ವಾಮಿ ಮಹಾರಥೋತ್ಸವ

ಮಾ.18 ರಿಂದ ಮಾ.26ರವರೆಗೆ ಜಾತ್ರಾ ಮಹೋತ್ಸವದ ಅಂಗವಾಗಿ ಮಠದಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆ
ನಾಗಮಂಗಲ: ಆದಿಚುಂಚನಗಿರಿ ಜಾತ್ರಾ ಮಹೋತ್ಸವವು ಮಾ.18 ರಿಂದ 26ರ ವರೆಗೆ ಜರುಗಲಿದ್ದು, ಮಾ.25ರ ಸೋಮವಾರ ಬ್ರಾಹ್ಮಿ ಮುಹೂರ್ತದಲ್ಲಿ ಗಂಗಾಧರೇಶ್ವರ ಸ್ವಾಮಿಯ ಮಹಾರಥೋತ್ಸವ ನಡೆಯಲಿದೆ ಎಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಪ್ರಕಟಣೆ ತಿಳಿಸಿದ್ದಾರೆ.
ತಾಲ್ಲೂಕಿನ ಪುರಾಣ ಪ್ರಸಿದ್ಧ ಆದಿಚುಂಚನಗಿರಿ ಮಠದಲ್ಲಿ ಮಾ.18 ರಿಂದ ಜಾತ್ರಾ ಮಹೋತ್ಸವವು ಪ್ರಾರಂಭವಾಗಲಿದ್ದು, ಮಾ.18 ರ ಸೋಮವಾರ ಬೆಳಿಗ್ಗೆ 6.30 ಕ್ಕೆ ಧರ್ಮಧ್ವಜ ಸ್ಥಾಪನೆ, ನಾಂದಿ ಪೂಜೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಾಲನೆ ನೀಡಲಿದ್ದಾರೆ. ಅಲ್ಲದೇ ಬೆಳಿಗ್ಗೆ 10ಗಂಟೆಯಿಂದ ಸಭಾ ಕಾರ್ಯಕ್ರಮಗಳು ಜರುಗುತ್ತವೆ. ಜೊತೆಗೆ ಮಾ.19 ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ದೇಶಿ ಕ್ರೀಡೆಗಳು, ಲಗೋರಿ, ರಂಗೋಲಿ ಸ್ಪರ್ಧೆ ಮತ್ತು ಮ್ಯಾರಥಾನ್ ಸ್ಪರ್ಧೆಗಳನ್ನು ಆಯೋಜಿಸಿದ್ದು, ಸಂಜೆ 6 ಗಂಟೆಗೆ ಸರ್ವಾಲಂಕೃತ ಶ್ರೀಚಂದ್ರಮೌಳೀಶ್ವರ ಸ್ವಾಮಿ ಉತ್ಸವ ಜರುಗಲಿದೆ. ಅಲ್ಲದೇ ಮಾ.20ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಕೃಷಿ ಉಪನ್ಯಾಸ ಮಾಲಿಕೆಯನ್ನು ರೈತರು ಮತ್ತು ಭಕ್ತರಿಗಾಗಿ ಆಯೋಜಿಸಲಾಗಿದೆ. ಜೊತೆಗೆ ಸಂಜೆ 6ಗಂಟೆಗೆ ಸರ್ವಾಲಂಕೃತ ಮಲ್ಲೇಶ್ವರ ಉತ್ಸವ ಜರುಗಲಿದೆ.
ಜೊತೆಗೆ ಮಾ.21ರ ಗುರುವಾರ ಬೆಳಿಗ್ಗೆ 9.30ಕ್ಕೆ ಸರಳ ಸಾಮೂಹಿಕ ವಿವಾಹ ಮತ್ತು ಹಿರಿಯ ದಂಪತಿಗಳಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಸಂಜೆ 6 ಕ್ಕೆ ಸರ್ವಾಲಂಕೃತ, ಶ್ರೀ ಸಿದ್ದೇಶ್ವರಸ್ವಾಮಿ ಉತ್ಸವ ಜರುಗಲಿದೆ. ಮಾ.22ರ ಶುಕ್ರವಾರ ಬೆಳಿಗ್ಗೆ 7.30 ಕ್ಕೆ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಸುವರ್ಣ ಕವಚ ಅಲಂಕಾರ ಮತ್ತು ಶ್ರೀ ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆಗಳು ನಡೆಯಲಿದೆ. ಜೊತೆಗೆ ಬೆಳಿಗ್ಗೆ 10 ಗಂಟೆಗೆ ಒಕ್ಕಲಿಗರ ಸಂಘಗಳ ಪದಾಧಿಕಾರಿಗಳ ಸಮ್ಮಿಲನ ಕಾರ್ಯಕ್ರಮ, ಸಂಜೆ 6 ಕ್ಕೆ ಶ್ರೀ ಕಾಲಭೈರವೇಶ್ವರ ಸ್ವಾಮಿ ಹೂವಿನ ಪಾಲಕ್ಕಿ ಉತ್ಸವ ಮತ್ತು ಸ್ವಾಮೀಜಿ ಅವರ ಮುತ್ತಿನ ಪಾಲಕ್ಕಿ ಉತ್ಸವ ಜರುಗುತ್ತದೆ. ಮಾ.23ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಿ.ಜಿ.ಎಸ್ ಡರ್ಟ್ ಟ್ರ್ಯಾಕ್ ಬೈಕ್ ರೇಸ್ ನಡೆಯಲಿದೆ. ಸಂಜೆ 6 ಕ್ಕೆ ಜ್ವಾಲಪೀಠಾರೋಹಣ ಮತ್ತು ಸಿದ್ಧಸಿಂಹಾಸನ ಪೂಜೆ ಜರುಗುತ್ತದೆ. ರಾತ್ರಿ 8 ಕ್ಕೆ ಚಂದ್ರಮಂಡಲೋತ್ಸವ ಕಾರ್ಯಕ್ರಮಗಳು ಜರುಗಲಿವೆ.
ಅಲ್ಲದೇ ಮಾ.24ರ ಭಾನುವಾರ ಸಂಜೆ 6.30ಕ್ಕೆ ಸರ್ವಧರ್ಮ ಸಮ್ಮೇಳನ, ರಾತ್ರಿ 8ಕ್ಕೆ ಶ್ರೀ ಕಾಲಭೈರವೇಶ್ವರ ಸ್ವಾಮಿ ತಿರುಗಣಿ ಉತ್ಸವ, ರಾತ್ರಿ 9 ಶ್ರೀ ಕಾಲಭೈರವೇಶ್ವರಸ್ವಾಮಿ ಪುಷ್ಕರಣೆಯಲ್ಲಿ ತೆಪ್ಪೋತ್ಸವ, ರಾತ್ರಿ 9ಕ್ಕೆ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ. ಜೊತೆಗೆ ಮಾ.25 ಸೋಮವಾರ ಬ್ರಾಹ್ಮ ಮುಹೂರ್ತದಲ್ಲಿ ಶ್ರೀ ಗಂಗಾಧರೇಶ್ವರಸ್ವಾಮಿ ಮಹಾರಥೋತ್ಸವ, ನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಾಲಕ್ಕಿ ಉತ್ಸವ, ಸಂಜೆ 6 ಕ್ಕೆ ನೂರಾರು ಗ್ರಾಮ ದೇವರುಗಳ ಮೆರವಣಿಗೆ ಮುಖಾಂತರ ಗಿರಿಪ್ರದಕ್ಷಿಣೆ, ನಂತರ ಸರ್ವಾಲಂಕೃತ, ಶ್ರೀ ಸೋಮೇಶ್ವರಸ್ವಾಮಿ ಉತ್ಸವಗಳು ಜರುಗುತ್ತವೆ.ಅಲ್ಲದೇ ಜಾತ್ರೆಯ ಕೊನೆಯ ದಿನವಾದ ಮಾ.26 ಮಂಗಳವಾರ ಬೆಳಿಗ್ಗೆ 9ಕ್ಕೆ
ಧರ್ಮ ಧ್ವಜಾವರೋಹಣ, 9.30ಕ್ಕೆ ಬಿಂದು ಸರೋವರದಲ್ಲಿ ಅವಕೃಥ ಸ್ನಾನ
ಮತ್ತು ಮಹಾಭಿಷೇಕದೊಂದಿಗೆ ಜಾತ್ರೆಗೆ ತೆರೆಬೀಳಲಿದ್ದು, ನಾಡಿನಾದ್ಯಂತ ಇರುವ ಭಕ್ತರು ಜಾತ್ರೆಗೆ ಆಗಮಿಸಿ ಶ್ರೀಕಾಲಭೈರವಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆ ತಿಳಿಸಿದ್ದಾರೆ.
Mandya
ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತಾಗಿ ಜಾಗೃತಿ ಮೂಡಿಸಿ: ಡಾ.ಕುಮಾರ

ಮಂಡ್ಯ : ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತಾಗಿ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಾರ್ಕೋ ಸಮನ್ವಯ ಕೇಂದ್ರದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೆಚ್ಚಾಗಿ ಮಾದಕ ವಸ್ತುಗಳ ಸೇವನೆಗೆ ಬಲಿಯಾಗುತ್ತಿದ್ದಾರೆ. ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ಪೊಲೀಸ್ ಇಲಾಖೆ ಹೆಚ್ಚು ಪರಿಶೀಲನೆ ನಡೆಸಿ ಹಾಗೂ ಹಾಸ್ಟೆಲ್ ಗಳಿಗೆ ನಿಯಮಿತವಾಗಿ ಭೇಟಿ ನೀಡಿ ಎಂದರು.
ಮೆಡಿಕಲ್ ಸ್ಟೋರ್ ಗಳಲ್ಲಿ ವೈದ್ಯರು ದೃಢೀಕರಿಸಿದ ಚೀಟಿ ಇಲ್ಲದೆ ಔಷಧಿ ನೀಡುವಂತಿಲ್ಲ. ಜಿಲ್ಲೆಯ ಯಾವುದೇ ಮೆಡಿಕಲ್ ಸ್ಟೋರ್ ಗಳಲ್ಲಿ ವೈದ್ಯರ ಚೀಟಿ ಇಲ್ಲದೆ ಔಷಧಿ, ಎಂ.ಪಿ.ಪಿ ಕಿಟ್ ನೀಡಿದರೆ ಅಂತಹವರ ವೈದ್ಯಕೀಯ ಲೈಸೆನ್ಸ್ ರದ್ದು ಮಾಡಿ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳ ಪೊಷಕರು ಅಥವಾ ಸಂಬಂಧಿಕರಿಗೆ ಪತ್ರ ಬರೆಸುವ ಮೂಲಕ ಜಾಗೃತಿ ಮೂಡಿಸುವ ಅಭಿಯಾನ ನಡೆಸಿ ಎಂದು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, ಅರಣ್ಯ ಪ್ರದೇಶದಲ್ಲಿ ಹೆಚ್ಚಾಗಿ ಮಾದಕ ವಸ್ತುಗಳ ಉತ್ಪಾದನೆ ಹಾಗೂ ಸೇವನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ, ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಇಂತಹಾ ಚಟುವಟಿಕೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತಿನಲ್ಲಿರುವಾಗ ಹೆಚ್ಚಿನ ಕ್ರಮವಹಿಸಿ ಎಂದು ಹೇಳಿದರು.
ಕೆಲವೊಮ್ಮೆ ವಿವಿಧ ಆಮಿಷಕ್ಕೊಳಗಾಗಿ ರೈತರು ಯಾರಿಗೂ ತಿಳಿಯದಂತೆ ಗಾಂಜಾ ಗಿಡಗಳನ್ನು ಬೆಳೆಯುವ ಸಾಧ್ಯತೆ ಇರುತ್ತದೆ, ಮಾದಕ ವಸ್ತುಗಳನ್ನು ಬೆಳೆಸಿ ಮಾರಾಟ ಮಾಡುವುದು ಕಾನೂನು ಬಾಹಿರ ಹಾಗೂ ಅದರಿಂದ ಉಂಟಾಗುವ ಪರಿಣಾಮಗಳ ಕುರಿತಾಗಿ ಅರಿವು ಮೂಡಿಸು ಕಾರ್ಯಕ್ರಮಗಳನ್ನು ರೂಪಿಸಿ ಎಂದರು.
ಅಬಕಾರಿ ಇಲಾಖೆ ತನ್ನ ಕಾರ್ಯ ವ್ಯಾಪ್ತಿ ಮತ್ತು ಕಾರ್ಯದಕ್ಷತೆಯನ್ನು ಚುರುಕುಗೊಳಿಸಿ, ಹೇರಳವಾಗಿ ರೈಲುಗಳ ಮೂಲಕ ಮಾದಕವಸ್ತುಗಳು ಬರುತ್ತವೆ, ರೈಲ್ವೆ ಪೊಲೀಸ್ ಹೆಚ್ಚಿನ ಗಮನ ಹರಿಸಿ ಜಿಲ್ಲೆಗೆ ರೈಲುಗಳ ಮೂಲಕ ಬರುವ ಗೂಡ್ಸ್ ಗಳನ್ನು ಪರಿಶೀಲನೆ ನಡೆಸಿ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ.ಮೋಹನ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚೆಲುವಯ್ಯ, ಕುಟುಂಬ ಕಲ್ಯಾಣಧಿಕಾರಿ ಡಾ. ಬೆಟ್ಟಸ್ವಾಮಿ, ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪಲತಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ವೈದ್ಯಕೀಯ ತ್ಯಾಜ್ಯಗಳನ್ನು ವೈಜ್ಞಾನಿಕ ವಿಧಾನದ ಮೂಲಕ ವಿಲೇವಾರಿ ಮಾಡಿ: ಡಾ.ಕುಮಾರ

ಮಂಡ್ಯ : ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ( Biomedical waste) ವಿಲೇವಾರಿ ಮಾಡುವ ಸಂದರ್ಭದಲ್ಲಿ ವೈಜ್ಞಾನಿಕ ವಿಧಾನವನ್ನು ಅನುಸರಿಸಿ ವಿಲೇವಾರಿ ಮಾಡಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಿಮ್ಸ್ ಆಸ್ಪತ್ರೆಯಲ್ಲಿ 800 ಹಾಸಿಗೆಗಳಿದ್ದು ಪ್ರತಿ ಹಾಸಿಗೆಯಿಂದ ದಿನಕ್ಕೆ 250 ಗ್ರಾಂ ಜೈವಿಕ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ, ಅಂದಾಜು ದಿನಕ್ಕೆ 250 ಕೆ.ಜಿ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ ಎಂದರು.
ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು ಸೇರಿ ಒಟ್ಟು 500 ಕೆ. ಜಿ. ತ್ಯಾಜ್ಯ ಉತ್ಪಾದನೆಯಾಗುತ್ತಿದೆ, ಇವುಗಳನ್ನು ಸರಿಯಾದ ವಿಧಾನದಲ್ಲಿ ವಿಲೇವಾರಿ ಮಾಡದಿದ್ದರೆ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.
ವೈದ್ಯಕೀಯ ತ್ಯಾಜ್ಯ ವಿಲೇವಾರಿ ಮಾಡುವ ಸಂಸ್ಥೆಗಳು ವಾರಕ್ಕೆ ಎರಡು ಬಾರಿ ತ್ಯಾಜ್ಯಗಳನ್ನು ಸಂಗ್ರಹಿಸಿ ವೈಜ್ಞಾನಿಕ ವಿಧಾನದ ಮೂಲಕ ವಿಲೇವಾರಿ ಮಾಡುತ್ತಿದ್ದಾರೆ, ಪ್ರತಿ ಹಾಸಿಗೆಯ ತ್ಯಾಜ್ಯ ವಿಲೇವಾರಿಗೆ ರೂ 7 ಗಳಂತೆ ಶುಲ್ಕ ವಿಧಿಸಲಾಗುತ್ತಿದೆ, ಆಯುರ್ವೇದಿಕ್ ಆಸ್ಪತ್ರೆಗಳ ತ್ಯಾಜ್ಯವನ್ನು ಸರ್ಕಾರಿ ಆದೇಶದಂತೆ 48 ಗಂಟೆಯೊಳಗೆ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ಚಿಕಿತ್ಸೆಗೆ ಬಳಸುವ ಹತ್ತಿ, ಬ್ಯಾಂಡೇಜ್ ನಂತಹ ವಸ್ತುಗಳು, ಹೊಡೆದ ಗ್ಲಾಸ್ ಚುರುಗಳು, ಚುಚ್ಚುಮದ್ದು ಹಾಗೂ ಬ್ಲೇಡ್ ಇನ್ನು ಮುಂತಾದ ಜೈವಿಕ ತ್ಯಾಜ್ಯಗಳನ್ನು ವಿವಿಧ ಭಾಗಗಳಾಗಿ ಬೇರ್ಪಡಿಸಿ ವಿಲೇವಾರಿ ಮಾಡುವುದು ಉತ್ತಮ ಎಂದರು.
ಬಯೋ ಮೆಡಿಕಲ್ ತ್ಯಾಜ್ಯ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಖುದ್ದು ಹಾಜರಿದ್ದು ವಿಲೇವಾರಿ ಕಾರ್ಯ ವ್ಯವಸ್ಥಿತವಾಗಿ ನಡೆಯುವಂತೆ ಉಸ್ತುವಾರಿವಹಿಸಿ ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ.ಮೋಹನ್, ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಎಸ್.ಸಿ. ಸುರೇಶ್, ಕುಟುಂಬ ಕಲ್ಯಾಣಧಿಕಾರಿ ಡಾ. ಬೆಟ್ಟಸ್ವಾಮಿ, ಜಿಲ್ಲಾ ಸರ್ವೇಕ್ಷಣಾ ಸರ್ವೇಕ್ಷಣಾಧಿಕಾರಿ ಡಾ. ಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ವ್ಯವಸಾಯದಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕಿದೆ : ಕೆ. ಆರ್ ನಂದಿನಿ

ಮಂಡ್ಯ : ಜಿಲ್ಲೆಯ ರೈತರು ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡು ಭತ್ತ, ಕಬ್ಬು ಬೆಳೆಗಳ ಜೊತೆಗೆ ವಿವಿಧ ಬೆಳೆಗಳನ್ನು ಬೆಳೆಯುವ ಮೂಲಕ ವ್ಯವಸಾಯದಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ ಅವರು ರೈತರನ್ನು ಉದ್ದೇಶಿಸಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಹಾಗೂ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಇಂದು ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಗತಿಪರ ರೈತರಿಗೆ ಸಮಗ್ರ ಕೃಷಿ ಪದ್ಧತಿ, ಹನಿ ನೀರಾವರಿ ಅಳವಡಿಕೆ ಹಾಗೂ ವಿವಿಧ ಬೆಳೆಗಳ ಕೋಯ್ಲೋತ್ತರ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಣ್ಣಿನ ಫಲವತ್ತತೆಯಲ್ಲಿ, ನೀರಿನ ಸೌಲಭ್ಯದಲ್ಲಿ ಜಿಲ್ಲೆಯು ಶ್ರೀಮಂತಿಕೆಯನ್ನು ಹೊಂದಿದೆ. ಅದರ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬ ರೈತರು ಒಂದೇ ರೀತಿಯ ಬೆಳೆಗಳನ್ನು ಬೆಳೆಯದೆ ಇತರೆ ಲಾಭದಾಯಕ ಬೆಳೆಗಳನ್ನು ಸಹ ಬೆಳೆಯಿರಿ ಎಂದು ಕಿವಿಮಾತು ಹೇಳಿದರು.
ರೈತರು ಉದ್ದಿಮೆದಾರರಾಗಬೇಕು, ಆರ್ಥಿಕವಾಗಿ ಸದೃಢರಾಗಬೇಕು ಎಂಬುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದ್ದು, ಯಾವ ಮಣ್ಣಿಗೆ ಯಾವ ಬೆಳೆ ಬೆಳೆಯಬೇಕು, ಯಾವ ವರ್ತಮಾನದಲ್ಲಿ ಯಾವ ಬೆಳೆ ಉತ್ತಮ, ಯಾವುದು ಲಾಭದಾಯಕ ಎಂಬುದನ್ನು ಅರಿತು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಿ ಎಂದರು.
ಮೀನು ಅರೋಗ್ಯಕರ ಆಹಾರವಾಗಿದೆ ಆದರೆ ಜಿಲ್ಲೆಯಲ್ಲಿ ಮೀನುಗಾರಿಕೆ ಹಾಗೂ ಮೀನು ಮಾರಾಟ ಕಡಿಮೆಯಿದೆ. ರೈತ ಮಹಿಳೆಯರಿಗೆ ಸ್ವ-ಸಹಾಯ ಸಂಘಗಳ ಮೂಲಕ ಮೀನುಗಾರಿಕೆ ಕುರಿತು ತರಬೇತಿಗಳನ್ನು ನೀಡಿ ಹಾಗೂ ಮೀನು ಮಾರಾಟ ಮಳಿಗೆಗಳನ್ನು ತೆರೆಯಲು ಲೈಸನ್ಸ್ ಸೇರಿತಂತೆ ಇತರೆ ಸಹಾಯಗಳನ್ನು ದೊರಕಿಸಿಕೊಡಲು ಮುಂದಾಗಿ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಸಮಗ್ರ ಕೃಷಿ ಎಂದರೆ ವ್ಯವಸಾಯದ ಒಟ್ಟಿಗೆ ಮೀನುಗಾರಿಕೆ, ತೋಟಗಾರಿಕೆ ಹಾಗೂ ಪಶುಸಂಗೋಪನೆ ಎಲ್ಲವನ್ನು ಒಳಗೊಂಡಿರುವುದು ಆಗಿದೆ. ಆಗಾಗಿ ಕೋಳಿ ಸಾಕಾಣಿಕೆ, ಹಸು ಸಾಕಾಣಿಕೆ ಹಾಗೂ ಕುರಿ ಸಾಕಾಣಿಕೆ ಪದ್ಧತಿಗಳನ್ನು ಅಳವಡಿಸಿಕೊಂಡು ಲಾಭದಾಯಕವಾಗಿ ಮುಂದುವರಿಯಿರಿ ಎಂದು ರೈತ ಭಾಂದವರಿಗೆ ಸಲಹೆ ನೀಡಿದರು.
ಬೆಂಗಳೂರು ಜಿಲ್ಲಾ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷರಾದ ಮಂಜುನಾಥ್ ಗೌಡ ಅವರು ಮಾತನಾಡಿ ರೈತರ ಕಷ್ಟವನ್ನು ನೀಗಿಸಲು ಮತ್ತು ರೈತರು ಉದ್ದಿಮೆದಾರರಾಗಲು ಸಲಹೆಗಳನ್ನು ನೀಡಿ ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ತೋಟಗಾರಿಕೆ, ಮೀನುಗಾರಿಕೆ ಹಾಗೂ ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ವ್ಯವಸಾಯದಲ್ಲಿ ಒಂದೇ ಹಾದಿಯಲ್ಲಿ ಸಾಗಿದರೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುವುದಿಲ್ಲ, ಸಮಗ್ರ ಕೃಷಿ ಪದ್ಧತಿಯೊಂದಿಗೆ ವ್ಯವಸಾಯ ಮಾಡಲು ಒಮ್ಮೆ ಪ್ರಯತ್ನಿಸಿ ಎಂದು ರೈತರಿಗೆ ಹೇಳಿದರು.
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಹಿತ್ತಲಮಣಿ ಅವರು ಮಾತನಾಡಿ ರೈತರು ದೇಶದ ಹಸಿವು ನೀಗಿಸುವವರು ಅವರನ್ನು ಗೌರವಿಸುವುದು ಎಲ್ಲರ ಆದ್ಯ ಕರ್ತವ್ಯ ಮೊದಲಿಗೆ ರೈತರ ಮಹತ್ವ ತಿಳಿದು ರೈತರನ್ನು ಸಮಾಜ ಗೌರವಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ನಾಗರಾಜು, ರೇಷ್ಮೆ ಇಲಾಖೆ ಉಪ ನಿರ್ದೇಶಕರಾದ ಪುಟ್ಟಸ್ವಾಮಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ರೂಪಶ್ರೀ, ವಿಜ್ಞಾನಿಗಳಾದ ಮಮತಾ, ಆಂಜನಪ್ಪ ಮತ್ತು ವಿಜಯಲಕ್ಷ್ಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
-
Hassan19 hours ago
ಮುಹೂರ್ತ ಮುಗಿಸಿ ಪರೀಕ್ಷೆ ಬರೆಯಲು ಬಂದ ವಧು
-
Hassan19 hours ago
ಹಾಸನ : ಹೃದಯಾಘಾತದಿಂದ ಯುವಕ-ಯುವತಿ ಸಾ*ವು
-
Kodagu16 hours ago
ನಂದಿನೆರವಂಡ ಉತ್ತಪ್ಪ ನಿಧನ
-
Mandya15 hours ago
ವ್ಯವಸಾಯದಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕಿದೆ : ಕೆ. ಆರ್ ನಂದಿನಿ
-
Hassan14 hours ago
ಸಾಹಿತಿ ಭಾನುಮುಷ್ತಾಕ್ ರವರಿಗೆ ಬೂಕರ್ ಪ್ರಶಸ್ತಿ : ನಗರದಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಸಂಭ್ರಮ
-
Kodagu18 hours ago
ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್ ಗಳಲ್ಲಿ)
-
Kodagu18 hours ago
ಸಮಸ್ಯೆ ಆಲಿಸಿದ ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ
-
Kodagu16 hours ago
ಜಾತಿಗಣತಿ ಸಮೀಕ್ಷೆ ಲೋಪದೋಷ : ಅಧಿಕಾರಿಗಳಿಗೆ ತಹಸೀಲ್ದಾರ್ ಕ್ಲಾಸ್..!