Chamarajanagar
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ

ಹನೂರು : ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಕುರ್ಚಿಗೆ ಇಬ್ಬರು ಅಧಿಕಾರಿಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ನೆರೆದಿದ್ದ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಈ ಬೆಳವಣಿಗೆಗೆ ಸಾಕ್ಷಿಯಾದರು.
ಪ.ಪಂ.ನಲ್ಲಿ ಈ ಹಿಂದೆ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮೂರ್ತಿ ಅವರು ಪ್ರಕರಣ ವೊಂದರಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಹಿನ್ನಲೆ ಜಿಲ್ಲಾಧಿಕಾರಿ ಅವರು 2023, ಡಿ.14 ರಂದು ಕಡ್ಡಾಯ ನಿವೃತ್ತಿಗೆ ಆದೇಶ ಹೊರಡಿಸಿ ಕರ್ತವ್ಯದಿಂದ ಬಿಡುಗಡೆ ಗೊಳಿಸಿದ್ದರು. ಈ ಆದೇಶದ ವಿರುದ್ಧ ಮೂರ್ತಿ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಈ ಆದೇಶವನ್ನು ರದ್ದುಗೊಳಿಸಿ ಕರ್ತವ್ಯದ ಮರು ನೇಮಕಕ್ಕೆ ಆದೇಶಿಸಿತ್ತು. ಜತೆಗೆ ಇವರಿಗೆ ಬರಬೇಕಿದ್ದ ವೇತನ ಬಾಕಿ, ಸೇವೆಯ ನಿರಂತರತೆ ಹಾಗೂ ಸಿಗಬೇಕಾದ ಎಲ್ಲಾ ಪ್ರಯೋಜನ ಗಳನ್ನು 4 ವಾರದೊಳಗೆ ನೀಡಲು ಆದೇಶಿಸಿದೆ.
ಈ ಹಿನ್ನೆಲೆ ಮೂರ್ತಿ ಅವರು ಕರ್ತವ್ಯಕ್ಕೆ ಅವಕಾಶ ಮಾಡಿಕೊಡುವಂತೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಮಂಗಳವಾರ ಕರ್ತವ್ಯಕ್ಕೆ ಹಾಜರಾಗಲು ಪಪಂ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಕಾರ್ಯನಿರ್ವಹಿಸುತ್ತಿದ್ದ ಹಾಲಿ ಮುಖ್ಯಾಧಿಕಾರಿ ಅಶೋಕ್ ಅವರಲ್ಲಿ ಈ ಬಗ್ಗೆ ಕೇಳಿಕೊಂಡರು. ಆದರೆ, ಇದಕ್ಕೊಪ್ಪದ ಅಶೋಕ್ ಜಿಲ್ಲಾಧಿಕಾರಿ ಅವರಿಂದ ಅಧಿಕೃತ ಆದೇಶ ಪತ್ರವಿಲ್ಲದೆ ಈ ರೀತಿ ಕಚೇರಿಗೆ ಆಗಮಿಸಿರುವುದು ಕಾನೂನು ಬಾಹಿರ. ಹಾಗಾಗಿ ಡಿಸಿ ಅವರಿಂದ ಆದೇಶ ಪತ್ರ ಪಡೆದು ಕಚೇರಿಗೆ ಆಗಮಿಸಿ ಎಂದು ತಿಳಿಸಿದರು. ಈ ವೇಳೆ ಇಬ್ಬರ ನಡುವೆ ಅಧಿಕಾರಕ್ಕಾಗಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ತೀವ್ರ ವಾಗ್ವಾದವೇ ನಡೆಯಿತು. ಮೂರ್ತಿ ಅವರು ಕರ್ತವ್ಯಕ್ಕಾಗಿ ಪಟ್ಟುಹಿಡಿದು ಕುಳಿತಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಾರ್ವಜನಿಕರು ಹಾಗೂ ಕೆಲ ಪ.ಪಂ. ಸದಸ್ಯರು. ಬಳಿಕ ಮೂರ್ತಿ ಅವರು ಜಿಲ್ಲಾಧಿಕಾರಿ ಅವರಿಂದ ಆದೇಶ ಪತ್ರ ಪಡೆಯಲು ತೆರಳಿದರು. ಇಬ್ಬರು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತಿರುವ ಸಂದರ್ಭದಲ್ಲೇ ನಗಾರಾಭಿವೃದ್ಧಿ ಯೋಜನಾಧಿಕಾರಿ ಸುಧಾ, ಅಶೋಕ್ ಅವರಿಗೆ ಕರೆಮಾಡಿ ಮೂರ್ತಿ ಅವರು ಕರ್ತವ್ಯಕ್ಕೆ ನೇಮಕ ಸಂಬಂಧ ಯಾವುದೇ ಆದೇಶ ಬಂದಿಲ್ಲ. ಹಾಗಾಗಿ ಈ ಸಂಬಂಧ ಪೊಲೀಸರಿಗೆ ದೂರು ನೀಡುವಂತೆ ಸೂಚಿಸಿದರು. ಈ ಸಂದರ್ಭ ಸಾರ್ವಜನಿಕರು ಹಾಗೂ ಕೆಲ ಸದಸ್ಯರು ಅಶೋಕ್ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳು ಕಚೇರಿಯಲ್ಲಿ ಕಿತ್ತಾಡಿಕೊಂಡಿರುವುದರ ಬಗ್ಗೆ ಪಟ್ಟಣದ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತು.
Chamarajanagar
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?

ಚಿಕ್ಕಮಗಳೂರು: ಮೊನ್ನೆ ಶರಣಾಗತಿಯಾದ ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಶೃಂಗೇರಿ ಅರಣ್ಯ ಪ್ರದೇಶದಲ್ಲಿ ಗುರುವಾರ ಪತ್ತೆಯಾಗಿದೆ.
ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮದ ಬಳಿಯಿರುವ ತಿರುಗುಣಿಬೈಲು ಅರಣ್ಯ ಪ್ರದೇಶದಲ್ಲಿ ಎಸ್.ಬಿ.ಎ.ಎಲ್ ಬಂದೂಕು ಪತ್ತೆಯಾಗಿದ್ದು, ಆ ಬಂದೂಕು ಮತ್ತು ಜೀವಂತ ಗುಂಡುಗಳನ್ನು ಭೂಮಿಯ ಒಳಗೆ ಹೂಳಲಾಗಿತ್ತು.
ಬಂದೂಕು ಸಂಬಂಧ ಪರಿಶೀಲನೆ ನಡೆಸಿದ ಪೊಲೀಸರು ಬಂದೂಕು ಮತ್ತು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಅಪರಿಚಿತರು ಎಂದು ಪ್ರಕರಣ ದಾಖಲಿಸಲಾಗಿದೆ.
Chamarajanagar
ಗುಂಡಲ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮಾಜಿ ಶಾಸಕ ಆರ್.ನರೇಂದ್ರ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ಗ್ರಾಮದಿಂದ ಕೀರೆ ಪಾತಿ ಗ್ರಾಮದವರೆಗೆ ಇರುವ 20 ಕೆರೆಗಳಿಗೆ ನೀರು ತುಂಬಿಸಲು ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ರೈತರುಗಳು ಹಮ್ಮಿಕೊಂಡಿದ್ದ ಬಾಗಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈತರುಗಳು ಆರ್ಥಿಕವಾಗಿ ಸದೃಢರಾದರೆ ಮಾತ್ರ ಕ್ಷೇತ್ರ ಅಭಿವೃದ್ಧಿ ಆಗುತ್ತದೆ ಎಂಬ ದೂರದೃಷ್ಟಿಯ ಫಲವಾಗಿ ಗುಂಡಾಲ್ ಜಲಾಶಯ, ಹುಬ್ಬೆ ಹುಣಸೆ, ರಾಮನಗುಡ್ಡ, ಉಡುತೊರೆ ಜಲಾಶಯ, ಕೌಳಿ ಹಳ್ಳ ಡ್ಯಾಮ್, ಹೂಗ್ಯಂ ಜಲಾಶಯ, ಕಿರೇ ಪಾತಿ ಜಲಾಶಯ ಸೇರಿದಂತೆ ಗೋಪಿನಾಥಂ ಜಲಾಶಯವನ್ನು ನಮ್ಮ ತಂದೆಯವರಾದ ದಿ.ಜಿ ರಾಜುಗೌಡ ಹಾಗೂ ದೊಡ್ಡಪ್ಪ ದಿ. ಜಿ.ವೆಂಕಟೇಗೌಡರವರ ಶಾಸಕರಾಗಿದ್ದಾಗ ನಿರ್ಮಾಣ ಮಾಡಲಾಗಿದೆ. ಹುಬ್ಬೆ ಹುಣಸೆ ಜಲಾಶಯ ಮಾತ್ರ ನನ್ನ ಅವಧಿಯಲ್ಲಿ 5.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದೇನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲಾ ಜಲಾಶಯಗಳಿಗೆ ನೀರು ತುಂಬಿದರೆ 40 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಗುಂಡಾಲ್ ಜಲಾಶಯ ನಿರ್ಮಾಣ ಮಾಡಿ 45 ವರ್ಷಗಳಾಗಿದೆ. ಆದರೆ ಒಂದೇ ಒಂದು ಬಾರಿ ಜಲಾಶಯ ಭರ್ತಿಯಾಗಿತ್ತು. ಉಳಿದ ವರ್ಷಗಳಲ್ಲಿ ಬರಗಾಲ ತತ್ತರಿಸಿದ್ದ ವೇಳೆ ರೈತರಿಗೆ ತೊಂದರೆಯಾಗಿತ್ತು. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ 127 ಕೋಟಿ ವೆಚ್ಚದಲ್ಲಿ ಗುಂಡಾಲ್ ರಾಮನಗುಡ್ಡ ಹುಬ್ಬೆ ಹುಣಸೆ ಜಲಾಶಯಗಳಿಗೆ ನದಿ ಮೂಲದಿಂದ ನೀರು ತುಂಬಿಸುವ ಯೋಜನೆಗೆ ಅನುಮೋದನೆ ಪಡೆದು ಕಾಮಗಾರಿ ಅಂತಿಮ ಹಂತದಲ್ಲಿದೆ. ಅನುದಾನದ ಕೊರತೆಯಿಂದ ರಾಮನ ಗುಡ್ಡ ಹಾಗೂ ಹುಬ್ಬೆ ಹುಣಸೆ ಜಲಾಶಯಕ್ಕೆ ನೀರು ತುಂಬಿಸುವ ಕಾಮಗಾರಿ ಸ್ಥಗಿತವಾಗಿದ ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಜಲ ಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಅವರಿಗೆ ಒಂಬತ್ತು ಕೋಟಿ ಅನುದಾನ ನೀಡುವಂತೆ ಮನವಿ ನೀಡಲಾಗಿದ್ದು ಅವರು ಸಹ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಅನುದಾನ ನೀಡಿದ ತಕ್ಷಣ ಕಾಮಗಾರಿ ಪೂರ್ಣಗೊಂಡರೆ ಸುಮಾರು 20,000 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ ಎಂದರು.
1400 ಕೋಟಿ ಯೋಜನೆಗಳಿಗೆ ಕ್ರಿಯಾಯೋಜನೆ: ನಾನು ಮೂರನೇ ಬಾರಿ ಶಾಸಕನಾಗಿದ್ದಾಗ ಉಡುತೊರೆ ಜಲಾಶಯಕ್ಕೆ ಕೆರೆ ನೀರು ತುಂಬಿಸಲು 200 ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ಮಾಡಿ ಕಳುಹಿಸಲಾಗಿತ್ತು. ಅನುಮೋದನೆ ಹಂತಕ್ಕೆ ತಲುಪಿದ ನಂತರ ಅದು ಸ್ಥಗಿತವಾಗಿದೆ. ಈ ಬಾರಿ ಈ ಯೋಜನೆಗೂ ಅನುದಾನ ನೀಡುವಂತೆ ಮನವಿ ಮಾಡಿದ್ದೇನೆ ಇದಲ್ಲದೆ ಮುಖ್ಯ ಕಾಲುವೆ, ತೋಬು ಕಾಲುವೆ, ಹಾಗೂ ಕಾಲುವೆಗಳಲ್ಲಿ ತುಂಬಿರುವ ಹೂಳು ತೆಗೆಯಲು ಅನುದಾನ ಕೇಳಿದ್ದು ಸರ್ಕಾರ ಅನುದಾನ ನೀಡಿದರೆ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.
12 ಹಾಡಿಗಳಿಗೆ ವಿದ್ಯುತ್ ಸಂಪರ್ಕ: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 32 ಹಾಡಿಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ತೊಂದರೆ ಅನುಭವಿಸುತ್ತಿದ್ದರು ನಾನು ಶಾಸಕನಾಗಿ ಆಯ್ಕೆಯಾದ ನಂತರ 20 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕೊಡಿಸಿದ್ದೇನೆ. ಉಳಿದ 12 ಹಾಡುಗಳಿಗೂ ವಿದ್ಯುತ್ ಸಂಪರ್ಕ ನೀಡಲು ಕ್ರಿಯೆ ಯೋಜನೆ ಮಾಡಿ ಅನುಮೋದನೆಗಾಗಿ ಕಳುಹಿಸಲಾಗಿತ್ತು .ಈಗ ಅನುಮೋದನೆ ಸಿಕ್ಕಿದ್ದು ಅತಿ ಶೀಘ್ರದಲ್ಲಿಯೇ ಈ ಹಾಡಿಗಳಿಗೂ ವಿದ್ಯುತ್ ಸಂಪರ್ಕ ಸಿಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಕೊಳ್ಳೇಗಾಲ, ಯಳಂದೂರು, ಹನೂರು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ ಸಿ ಮಾದೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಗೋವಿಂದ, ಪಟ್ಟಣ ಪಂಚಾಯಿತಿ ಸದಸ್ಯರಾದ ಗಿರೀಶ್ ಹರೀಶ್ ನವೀನ್, ಮುಖಂಡರಾದ ವೆಂಕಟರಮಣ ನಾಯ್ಡು, ಕಾಮಗೆರೆ ಕುಮಾರ್ ಗೌಡ, ನವನೀತ್ ಗೌಡ, ಕಾಮಗೆರೆ ರವಿ, ಪ್ರದೀಪ್, ಉದ್ದನೂರು ಸಿದ್ದರಾಜು, ಚೇತನ್ ದೊರೆರಾಜು, ಚಿಕ್ಕ ಮಾಲಾಪುರ ಅಂಕರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.
Chamarajanagar
ಡಯಾಬಿಟಿಕ್ ಕ್ಲಿನಿಕ್-ಜಿಲ್ಲಾಧಿಕಾರಿಗಳಿಂದ ನೂತನ ಸೇವೆಗೆ ಚಾಲನೆ

ಚಾಮರಾಜನಗರ: ಎಲ್ಲಾ ಸಾರ್ವಜನಿಕ ಆಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಬುಧವಾರ ಮಧುಮೇಹಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸುವ ರಾಜ್ಯದಲ್ಲೇ ಮೊದಲು ಎನಿಸಿರುವ ಡಯಾಬಿಟಿಕ್ ಕ್ಲಿನಿಕ್ಗಳು ಚಾಮರಾಜನಗರ ಜಿಲ್ಲೆಯಲ್ಲಿ ಆರಂಭವಾಗಿದೆ.
ಪ್ರತಿ ಬುಧವಾರ ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೆಳಿಗ್ಗೆ 7 ರಿಂದ 11 ಗಂಟೆಯವರೆಗೆ ಮಧುಮೇಹಿಗಳ ಆರೋಗ್ಯ ಕಾಳಜಿಗಾಗಿ ಡಯಾಬಿಟಿಕ್ ಕ್ಲಿನಿಕ್ ನಿರ್ವಹಣೆಯಾಗಲಿದೆ. ಈ ವಿನೂತನ ಆರೋಗ್ಯ ಸೇವೆಯನ್ನು ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆಯು ಮೊದಲಿಗೆ ಆರಂಭಿಸುವ ಮೂಲಕ ಗಮನಸೆಳೆದಿದೆ.
ಮಧುಮೇಹಿ ರೋಗಿಗಳಿಗೆ ತಪಾಸಣೆ, ಔಷದೋಪಾಚಾರ, ಡಯಾಬಿಟಿಕ್ ಚಾರ್ಟ್, ಪಥ್ಯ ಆಹಾರದ ವಿವರ ಸೇರಿದಂತೆ ಇತರೆ ಎಲ್ಲ ಸೇವೆ ಸಲಹೆಗಳನ್ನು ಡಯಾಬಿಟಿಕ್ ಕ್ಲಿನಿಕ್ ನಲ್ಲಿ ಒದಗಿಸಲಾಗುತ್ತಿದೆ. ಮಧುಮೇಹ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆಯಿದ್ದಲ್ಲಿ ನಿಯಮಾನುಸಾರ ಮೇಲ್ಮಟ್ಟದ ಆಸ್ಪತ್ರೆಗೆ ಶಿಫಾರಸು ಮಾಡಿ ಮುಂದಿನ ಆರೋಗ್ಯ ಸೇವೆಗೆ ಅನುಸರಣೆ ಮಾಡುವಂತೆಯೂ ಸುತ್ತೋಲೆ ಹೊರಡಿಸಲಾಗಿದೆ. ಡಯಾಬಿಟಿಕ್ ಕ್ಲಿನಿಕ್ ನಿರ್ವಹಣೆ ಹಾಗೂ ಸುಸೂತ್ರವಾಗಿ ನಡೆಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮೇಲ್ವಿಚಾರಣೆ ಕಾರ್ಯವಹಿಸಲು ಸೂಚನೆ ನೀಡಲಾಗಿದೆ.
ಆರೋಗ್ಯ ಸೇವಾ ಕ್ಷೇತ್ರದ ಹೊಸ ವಿಶಿಷ್ಟ ಕಾರ್ಯಕ್ಕೆ ಮುಂದಾಗಿರುವ ನೂತನ ಡಯಾಬಿಟಿಕ್ ಕ್ಲಿನಿಕ್ಗೆ ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಈ ಕಾರ್ಯಕ್ರಮವನ್ನು ಇಡೀ ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆ ಮೊದಲು ಆರಂಭಿಸಿದೆ. ಇದು ವಿಶೇಷವಾಗಿ ಜಿಲ್ಲೆಯ ಗ್ರಾಮೀಣ ಬಡಜನರಿಗೆ ತುಂಬಾ ಉಪಯುಕ್ತವಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮತ್ತು ಅವರ ತಂಡ ಜಿಲ್ಲೆಯಲ್ಲಿ ಇಂತಹ ಆರೋಗ್ಯ ಸೇವೆಗಳನ್ನು ಒದಗಿಸಲು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಡಯಾಬಿಟಿಕ್ ಕ್ಲಿನಿಕ್ ಸೌಲಭ್ಯ ಅನುಷ್ಠಾನಕ್ಕೆ ಮುಂದಾಗಿರುವ ಎಲ್ಲರನ್ನು ಅಭಿನಂದಿಸುವುದಾಗಿ ನುಡಿದರು.
ಸಾಮಾನ್ಯವಾಗಿ ಎಲ್ಲಾ ಆರೋಗ್ಯ ಕೇಂದ್ರಗಳು ಬೆಳ್ಳಿಗೆ 9 ಗಂಟೆಗೆ ಪ್ರಾರಂಭವಾಗುತ್ತವೆ. ಮಧುಮೇಹ ಇರುವವರು ತಪಾಸಣೆಗೆ 9 ಗಂಟೆಯವರೆಗೂ ಕಾಯಬೇಕಾಗಿತ್ತು. ಆದರೆ ಮಧುಮೇಹಿಗಳು ಆರೋಗ್ಯ ಪರೀಕ್ಷೆಗಾಗಿ ಕಾಯಲು ಕಷ್ಟವಾಗುತ್ತಿತ್ತು. ಹೀಗಾಗಿ ವಾರದಲ್ಲಿ ಒಂದು ದಿನ ಅಂದರೆ ಪ್ರತಿ ಬುಧವಾರ ಬೆಳ್ಳಿಗೆ 7 ರಿಂದ 11 ರವರೆಗೆ ಮಧುಮೇಹದವರಿಗಾಗಿಯೇ ಪ್ರಯೋಗಾಲಯವನ್ನು ತೆರೆದು ರಕ್ತಪರೀಕ್ಷೆ ಮಾಡುವ ಕಾರ್ಯಕ್ರಮವನ್ನು ಮಾಡಲಾಗುತ್ತದೆ. ರಾಜ್ಯದಲ್ಲಿಯೇ ಪ್ರಥಮವಾಗಿ ನಮ್ಮ ಜಿಲ್ಲೆಯಲ್ಲಿ ಇಂತಹ ಡಯಾಬಿಟಿಕ್ ಕ್ಲಿನಿಕ್ ಸೇವೆ ಒದಗಿಸಲು ಮುಂದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಮಾತನಾಡಿ, ಮಾರ್ಗಸೂಚಿ ಪ್ರಕಾರ ಜಿಲ್ಲೆಯಾದ್ಯಂತ ವೈದ್ಯರು ಆರೋಗ್ಯ ಸಿಬ್ಬಂದಿ ಡಯಾಬಿಟಿಕ್ ಕ್ಲಿನಿಕ್ ಅನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಾವಣ್ಯ ಮಹೇಶ್, ಉಪಾಧ್ಯಕ್ಷ ಕೃಷ್ಣಮೂರ್ತಿ, ಸದಸ್ಯ ಎ.ಎಂ. ಸೋಮಣ್ಣ, ಅಶೋಕ್, ಸ್ವಾಮಿ, ಶೈಲಜ, ಚಾಮುಲ್ ನಿರ್ಧೇಶಕ ಹೆಚ್.ಎಸ್ ಬಸವರಾಜು, ಜಿಲ್ಲಾ ನೋಡಲ್ ಅಧಿಕಾರಿ ಡಾ.ರಾಜೇಶ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಂದರೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ವೆಂಕಟಯ್ಯನಛತ್ರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ. ಗೋವಿಂದರಾಜು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಹೇಶ್, ಇನ್ನಿತರರು ಉಪಸ್ಥಿತರಿದ್ದರು.
-
State13 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu10 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar10 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu10 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Kodagu14 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Hassan8 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ
-
Hassan9 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports11 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್