Connect with us

Hassan

ಅವ್ವ ದತ್ತಿ ಪ್ರಶಸ್ತಿಗೆ ಲೇಖಕ ಸಾಹಿತಿ ಹಾಗೂ ಶಿಕ್ಷಕ ಪರಮೇಶ್ ಮಡಬಲು ಆಯ್ಕೆ

Published

on

ಆಲೂರು:ಎಂ.ವಿ.ತ್ಯಾಗರಾಜ್ ಅಭಿನಂದನಾ ಸಮಿತಿ ಹಾಗೂ ಸುಮಂಗಲಿ ಸೇವಾಶ್ರಮ ಬೆಂಗಳೂರು ವತಿಯಿಂದ 2025 ನೇ ಸಾಲಿಗೆ ಕೊಡಮಾಡುವ “ಮಾಪಮ್ಮ ಎಸ್ ಹೊಸಮನಿ ಅವ್ವ ದತ್ತಿ ರಾಜ್ಯ ಪ್ರಶಸ್ತಿಗೆ” ಎಂ.ಜಿ.ಪರಮೇಶ್ ಮಡಬಲು ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದ ‘ಅವ್ವ’ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಪರಮೇಶ್ ಅವರು ಪ್ರಸ್ತುತ ಹೊಳೆನರಸೀಪುರ ತಾಲೂಕು ಶಾಲಾ ಶಿಕ್ಷಣ ಇಲಾಖೆಯಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.


ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಲೇಖನಗಳು, ವೈಜ್ಞಾನಿಕ ಲೇಖನಗಳು,ವಿಮರ್ಶಾ ಲೇಖನಗಳು ಹಾಗೂ ಕವನ ಕವಿತೆಗಳನ್ನು ಬರೆದಿದ್ದಾರೆ. ಇವರು ಈಗಾಗಲೇ ಹತ್ತು ಮೌಲ್ಯಯುತ ಕೃತಿಗಳನ್ನು ಹೊರತಂದಿದ್ದಾರೆ.ಈ ಮೇಲಿನ ಸಾಹಿತ್ಯಾತ್ಮಕ ಕಾರ್ಯ ವನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಇದೇ ಮೇ 10 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕರ್ನಾಟಕ ವಚನ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಎಂ.ವಿ.ತ್ಯಾಗರಾಜ್ ತಿಳಿಸಿದ್ದಾರೆ.

ವರದಿ ಸತೀಶ್ ಚಿಕ್ಕಕಣಗಾಲು

Continue Reading

Hassan

ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ: ಈಶ್ವರ್ ಖಂಡ್ರೆ

Published

on

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿರುವ ಚರ್ಚೆ ನಾಯಕತ್ವ ಬದಲಾವಣೆಗಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹ ಅಷ್ಟೆ. ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ಅನಗತ್ಯ ಮತ್ತು ಅಪ್ರಸ್ತುತ ಎಂದು ತಳ್ಳಿ ಹಾಕಿದರು.


ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಪಕ್ಷದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಅದನ್ನೇ ಬೇರೆ ರೀತಿಯಲ್ಲಿ ವ್ಯಾಖ್ಯಾನಿಸುವ ಅಗತ್ಯವಿಲ ಎಂದು ಹೇಳಿದರು.

ಸಿಎಂ ಹಾಗೂ ಡಿಸಿಎಂ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿದ್ದರಲ್ಲಿ ವಿಶೇಷವೇನೂ ಇಲ್ಲ. ನಾವು ಎಲ್ಲರೂ ಒಂದೇ ಕುಟುಂಬ ದವರಂತೆ ಇದ್ದೇವೆ. ಸ್ನೇಹಿತರಾಗಿ ಟೀ ಕುಡಿಯುತ್ತೇವೆ, ಊಟಕ್ಕೆ ಹೋಗುತ್ತೇವೆ, ಪ್ರತ್ಯೇಕವಾಗಿ ಮಾತುಕತೆ ನಡೆಸುತ್ತೇವೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.


ಮುಖ್ಯಮಂತ್ರಿ ಬದಲಾವಣೆ ಕುರಿತು ಕೆಲ ಕಾಂಗ್ರೆಸ್ ಶಾಸಕರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಆ ಹೇಳಿಕೆ ನೀಡಿದವರನ್ನೇ ಕೇಳಬೇಕು. ನಾನು ಸರ್ಕಾರದ ಭಾಗವಾಗಿ ಹೇಳುವುದೇನೆಂದರೆ, ಸರ್ಕಾರ ಅತ್ಯಂತ ಗಟ್ಟಿಯಾಗಿದ್ದು, ಜನಪರ ಆಡಳಿತ ನೀಡುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಕಾರ್ಯವೈಖರಿ ಸಮರ್ಥಿಸಿಕೊಂಡ ಖಂಡ್ರೆ, ಅಭಿವೃದ್ಧಿ, ಪ್ರಗತಿ ಮತ್ತು ಸರ್ಕಾರದ ಸಾಧನೆಗಳ ಬಗ್ಗೆ ಚರ್ಚೆ ಆಗಬೇಕು. ಅನಗತ್ಯ ರಾಜಕೀಯ ಊಹಾಪೋಹಗಳಿಗೆ ಹೆಚ್ಚು ಮಹತ್ವ ನೀಡುವುದು ಸೂಕ್ತವಲ್ಲ ಎಂದರು.
ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆ ಕುರಿತು ಪ್ರಶ್ನಿಸಿದಾಗ, ಅದರ ಬಗ್ಗೆ ಅವರನ್ನೇ ಕೇಳಿ. ನಾನು ಈಗಾಗಲೇ ಹೇಳಿರುವಂತೆ ಈ ಚರ್ಚೆ ಅಪ್ರಸ್ತುತ ಎಂದು ಉತ್ತರಿಸಿದರು.


ತಮ್ಮ ದೆಹಲಿ ಭೇಟಿ ಕುರಿತು ಕೇಳಿದ ಪ್ರಶ್ನೆಗೆ ಖಂಡ್ರೆ ನಗೆ ಚಟಾಕಿ ಹಾರಿಸಿ, ನಾನೇಕೆ ದೆಹಲಿಗೆ ಹೋಗಬೇಕು ಎಂದು ಮರು ಪ್ರಶ್ನೆ ಹಾಕಿದರು.

Continue Reading

Hassan

ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆ ವಾಪಸ್ ಪಡೆಯಲು ಒತ್ತಾಯ

Published

on

ಹಾಸನ, ಮೇ 26: ರೈತ ವಿರೋಧಿ ಎಂದು ಆರೋಪಿಸಲ್ಪಡುವ ‘ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆ 2020’ ಅನ್ನು ವಾಪಸ್ ಪಡೆಯಬೇಕು ಹಾಗೂ ರೈತರು ತಮ್ಮ ಜಾನುವಾರುಗಳನ್ನು ಮುಕ್ತವಾಗಿ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ವಿವಿಧ ರೈತ, ದಲಿತ ಮತ್ತು ಜನಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿವೆ.

ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್), ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಹಾಗೂ ಹಾಸನ ಜಿಲ್ಲಾ ದಲಿತ ಮತ್ತು ಜನಪರ ಚಳುವಳಿಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ಮತ್ತು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದರು.

ಪ್ರತಿಭಟನಾಕಾರರು ಮಾತನಾಡಿ, ಕೃಷಿ ಕ್ಷೇತ್ರ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ. ಹಾಲು ಉತ್ಪಾದನೆಗಾಗಿ ಸಾಕುವ ಜರ್ಸಿ ಹಸುಗಳು ವಯಸ್ಸಾದ ಬಳಿಕ ಹಾಗೂ ಗಂಡು ಕರುಗಳಿಗೆ ಜನ್ಮ ನೀಡಿದಾಗ ಅವುಗಳನ್ನು ಸಾಕುವುದು ರೈತರಿಗೆ ಆರ್ಥಿಕ ಹೊರೆ ಆಗುತ್ತದೆ. ಇಂತಹ ಅನುಪಯುಕ್ತ ಜಾನುವಾರುಗಳನ್ನು ಮಾರಾಟ ಮಾಡುವುದೇ ರೈತರಿಗೆ ಅಲ್ಪ ಆದಾಯದ ಮೂಲವಾಗಿದ್ದು, ಪ್ರಸ್ತುತ ಕಾಯ್ದೆಯಿಂದ ಅದು ಕೂಡ ಅಸಾಧ್ಯವಾಗಿದೆ ಎಂದು ದೂರಿದರು.

ಕೆಲವು ಸಂಘಟನೆಗಳು ಈ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸುವುದು ಹಾಗೂ ನೈತಿಕ ಪೊಲೀಸ್‌ಗಿರಿ ತೋರಿಸುತ್ತಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಆಹಾರದ ಆಯ್ಕೆ ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕು ಎಂದು ಹೇಳಿದರು.

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕುರ್ಬಾನಿಗೆ ಗೋವುಗಳನ್ನು ಬಳಸಬಾರದೆಂಬ ಜಿಲ್ಲಾಡಳಿತದ ಸೂಚನೆ ಅಲ್ಪಸಂಖ್ಯಾತರ ಆಹಾರದ ಹಕ್ಕಿನ ಮೇಲಿನ ದಾಳಿಯಾಗಿದೆ. ಇದರಿಂದ ರೈತ ಸಮುದಾಯಕ್ಕೂ ನೇರ ಪರಿಣಾಮ ಉಂಟಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತವು ರೈತರು ತಮ್ಮ ರಾಸುಗಳನ್ನು ಮುಕ್ತವಾಗಿ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಆರ್‌ಆರ್‌ಎಸ್ ಜಿಲ್ಲಾಾಧ್ಯಕ್ಷ ಬಾಬು, ರಾಜ್ಯ ಉಪಾಧ್ಯಕ್ಷ ರವಿ ಆನೇಕೆರೆ, ಜಿಲ್ಲಾ ಕಾರ್ಯದರ್ಶಿ ಪವಿತ್ರ, ಕೆಪಿಆರ್‌ಎಸ್ ಜಿಲ್ಲಾಾಧ್ಯಕ್ಷ ಹೆಚ್.ಎಸ್. ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ನವೀನ್‌ಕುಮಾರ್, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಟಿ.ಆರ್. ವಿಜಯ್ ಕುಮಾರ್, ಹಿರಿಯ ದಲಿತ ಮುಖಂಡ ರಾಜಶೇಖರ್ ಹುಲಿಕಲ್ ಸೇರಿದಂತೆ ಮುಬಷಿರ್ ಅಹಮದ್, ಅನ್ಸರ್, ಅರವಿಂದ, ರಮೇಶ್ ಮೊದಲಾದವರು ಭಾಗವಹಿಸಿದ್ದರು.

Continue Reading

Hassan

“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

Published

on

ಹಾಸನ: ರಾಜ್ಯ ಸರ್ಕಾರದ ಸಾಲದ ಪ್ರಮಾಣ 7 ಲಕ್ಷ ಕೋಟಿ ರೂ. ದಾಟುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ತ್ಯಜಿಸುವ ವೇಳೆಗೆ ಅದು 10 ಲಕ್ಷ ಕೋಟಿ ರೂ. ತಲುಪಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್  ಆರೋಪಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೆ.ಸಿ. ರೆಡ್ಡಿ ಕಾಲದಿಂದ ಬಸವರಾಜ ಬೊಮ್ಮಾಯಿ ಸರ್ಕಾರದವರೆಗೆ ಒಟ್ಟು ಶೇ.47ರಷ್ಟು ಸಾಲ ಮಾಡಲಾಗಿತ್ತು. ಆದರೆ ಕಳೆದ ಮೂರು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಶೇ.53ರಷ್ಟು ಸಾಲ ಮಾಡಿದೆ” ಎಂದು ಟೀಕಿಸಿದರು.

ಬಿಜೆಪಿ ಸರ್ಕಾರ ಆದಾಯದ ಆಧಾರದ ಮೇಲೆ ಬಡವರಿಗೆ ಯೋಜನೆಗಳನ್ನು ಜಾರಿಗೆ ತಂದಿತ್ತು. ಆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಈಗ ಅವುಗಳನ್ನು ಸಮರ್ಪಕವಾಗಿ ನೀಡಲು ವಿಫಲವಾಗಿದೆ ಎಂದು ದೂರಿದರು. ಸರ್ಕಾರದ ಖಜಾನೆ ಖಾಲಿಯಾಗಿರುವ ಕಾರಣ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಮುಂದಾಗಿದೆ. ಬಡವರ ಅನ್ನಕ್ಕೂ ಕತ್ತರಿ ಹಾಕಲು ಹೊರಟಿದೆ ಎಂದು ಆರೋಪಿಸಿದರು.

 

ಅನ್ನಭಾಗ್ಯ ಯೋಜನೆ ಸಿದ್ದರಾಮಯ್ಯ ಅವರದ್ದಲ್ಲ. ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ
ನೀಡುತ್ತಿರುವ ಅಕ್ಕಿಯೇ ಜನರಿಗೆ ತಲುಪುತ್ತಿದೆ. ಕಾಂಗ್ರೆಸ್ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರೂ ಇದುವರೆಗೆ ಅದನ್ನು ಈಡೇರಿಸಿಲ್ಲ” ಎಂದು ಹೇಳಿದರು.

ರಾಜ್ಯ ಸರ್ಕಾರ ಕೇಂದ್ರಕ್ಕೆ ಹಣ ಪಾವತಿಸದ ಹಿನ್ನೆಲೆ ಅಕ್ಕಿ ಪೂರೈಕೆ ಸಮಸ್ಯೆ ಉಂಟಾಗಿದೆ. ಕಳೆದ ಮೂರು ತಿಂಗಳಿಂದ ಮಶಾಸನ ನೀಡುತ್ತಿಲ್ಲ. ಅನರ್ಹರನ್ನು ಹೊರಗಿಡುವ ನೆಪ ಹೇಳಲಾಗುತ್ತಿದೆ ಎಂದು ಟೀಕಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ 15 ದಿನಗಳಿಗೊಮ್ಮೆ ಜಿಲ್ಲೆಗಳಿಗೆ ಭೇಟಿ ನೀಡಬೇಕು ಎಂದು ಮುಖ್ಯಮಂತ್ರಿ ಹೇಳಿದ್ದರೂ, ಸಚಿವರು ಜನರ ಸಮಸ್ಯೆ ಆಲಿಸುವ ಬದಲು ದೆಹಲಿಗೆ ತೆರಳುತ್ತಿದ್ದಾರೆ ಎಂದು ಆರೋಪಿಸಿದರು. “ಕಾಂಗ್ರೆಸ್ ಹೈಕಮಾಂಡ್ ‘ವೀಕ್ ಹೈಕಮಾಂಡ್’ ಆಗಿದೆ. ಅಧಿಕಾರಿಗಳಿಗೆ ಸಂಬಳ ನೀಡಲು ಸರ್ಕಾರದಲ್ಲಿ ಹಣವಿಲ್ಲ. ಅಬಕಾರಿ ಆದಾಯದಿಂದಲೇ ಸರ್ಕಾರ ನಡೆಯುತ್ತಿದೆ” ಎಂದು ವ್ಯಂಗ್ಯವಾಡಿದರು.

ಆಳಂದ ಘಟನೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧದ ಪ್ರಕರಣ ಹಿಂಪಡೆಯಲಾಗಿದ್ದು, ಅದರ ಪರಿಣಾಮವಾಗಿ ಭಟ್ಕಳದಲ್ಲಿ ದೇವಾಲಯ ಧ್ವಂಸ ಘಟನೆ ನಡೆದಿದೆ ಎಂದು ಆರೋಪಿಸಿದ ಅವರು, ಈ ಕುರಿತು ಮೇ 29ರಂದು “ಭಟ್ಕಳ ಚಲೋ” ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

“ರಾಜ್ಯ ಸರ್ಕಾರ ಹಿಂದೂಗಳ ರಕ್ಷಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಮುಸ್ಲಿಂರ ಓಲೈಕೆಯಲ್ಲಿ ತೊಡಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂಧನ ದರ ಏರಿಕೆಯಿಂದ ಕೇಂದ್ರ ಸರ್ಕಾರಕ್ಕೆ ಒಂದು ನಯಾಪೈಸೆಯೂ ಆದಾಯ ಬರುವುದಿಲ್ಲ. ಆದರೆ ರಾಜ್ಯ ಸರ್ಕಾರಕ್ಕೆ ಸುಮಾರು 6 ಸಾವಿರ ಕೋಟಿ ರೂ. ಆದಾಯ ಬರುತ್ತಿದೆ ಎಂದು ಆರೋಪಿಸಿದ ಅವರು, “ಮೇ 30ರಂದು ಕಾಂಗ್ರೆಸ್ ಯಾವ ಮುಖ ಇಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ” ಎಂದು ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್ ನಬಿನ್ ಅವರ ರಾಜ್ಯ ಭೇಟಿ, ರಾಜ್ಯಸಭೆ ಚುನಾವಣೆ ಹಾಗೂ ಎಚ್.ಡಿ.ದೇವೇಗೌಡ ಅವರ ಮರು ಆಯ್ಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ನಮ್ಮ ಅಭಿಪ್ರಾಯವನ್ನು ಪಕ್ಷದ ರಾಷ್ಟ್ರೀಯ ನಾಯಕರಿಗೆ ತಿಳಿಸಿದ್ದೇವೆ. ಅಂತಿಮ ತೀರ್ಮಾನ ಹೈಕಮಾಂಡ್ ಕೈಗೊಳ್ಳಲಿದೆ” ಎಂದರು.

“2028ರ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿಸಲಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯನ್ನು ಹೈಕಮಾಂಡ್ ಒಬ್ಬರನ್ನೇ ದೆಹಲಿಗೆ ಕರೆದಿದ್ದರೂ, ಅವರು ಮಂತ್ರಿಗಳನ್ನು ಒಟ್ಟಿಗೆ ಕರೆದುಕೊಂಡು ಹೋಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಬಹುದು. ಆದರೆ ಡಿ.ಕೆ. ಶಿವಕುಮಾರ್ ಅವರಿಗೆ ‘ಖಾಲಿ ತಟ್ಟೆ’ ಸಿಗಲಿದೆ ಎಂದು ವ್ಯಂಗ್ಯವಾಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ಶಾಸಕ ಸಿಮೆಂಟ್‌ ಮಂಜು, ಜಿಲ್ಲಾಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Trending

error: Content is protected !!